ನವದೆಹಲಿ: ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಮೇಲೆ ಇತ್ತೀಚಿಗೆ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಪ್ರಮುಖ ಸೂಚನೆ ನೀಡಿದೆ. ಸಮುದಾಯದ ವಿರುದ್ಧದ ಅಪರಾಧಗಳ ಪ್ರಕರಣಗಳಲ್ಲಿ ಎಫ್ಐಆರ್ಗಳನ್ನು ದಾಖಲಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಮತ್ತು ಎರಡು ತಿಂಗಳು ಮೀರಿದ ತನಿಖೆಯ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದ ಸೂಚನೆಯಲ್ಲಿ, ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಪೊಲೀಸ್ ಅಧಿಕಾರಿಗಳು ಮತ್ತು ಅಧಿಕೃತ ಸಾಕ್ಷಿಗಳು ಸೇರಿದಂತೆ ಎಲ್ಲಾ ಪ್ರಾಸಿಕ್ಯೂಷನ್ ಸಾಕ್ಷಿಗಳ ಸಕಾಲಿಕ ಹಾಜರಾತಿ ಮತ್ತು ರಕ್ಷಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಖಚಿತಪಡಿಸಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಉಲ್ಲೇಖಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳ ಪ್ರಕರಣಗಳಲ್ಲಿ ಎಫ್ಐಆರ್ ನೋಂದಣಿಯಲ್ಲಿ ಯಾವುದೇ ವಿಳಂಬ ಮಾಡಬಾರದು. ಸೂಕ್ತ ಮಟ್ಟದಲ್ಲಿ ಎಫ್ಐಆರ್ ದಾಖಲಿಸುವುದರಿಂದ ಹಿಡಿದು ಪ್ರಕರಣದ ವಿಲೇವಾರಿಯವರೆಗೆ ಸಮರ್ಥರಿಂದ ಸೂಕ್ತ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಆಗಾಗ್ಗೆ ಮೇಲ್ವಿಚಾರಣೆ ಮಾಡಬೇಕು: ತನಿಖೆಯಲ್ಲಿ ವಿಳಂಬವಾದರೆ ಅಂದರೆ ಎಫ್ಐಆರ್ ದಾಖಲಿಸಿದ ದಿನಾಂಕದಿಂದ 60 ದಿನಗಳಿಗಿಂತ ಹೆಚ್ಚು ದಿನಗಳಾದರೆ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಬೇಕು ಮತ್ತು ಅಗತ್ಯವಿದ್ದಲ್ಲಿ ತನಿಖೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ವಿಶೇಷ ಡಿಎಸ್ಪಿಗಳನ್ನು ನೇಮಿಸಬೇಕು ಎಂದು ಹೇಳಿದೆ.
ಹೆಚ್ಚಿನ ಸಿಬ್ಬಂದಿ ನಿಯೋಜನೆ: ಸಮುದಾಯಗಳ ಸದಸ್ಯರ ಜೀವ ಮತ್ತು ಆಸ್ತಿಯನ್ನು ಉಳಿಸುವ ಉದ್ದೇಶದಿಂದ ಕೃತ್ಯವನ್ನು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಮೂಲಕ ದೌರ್ಜನ್ಯ ಪೀಡಿತ ಪ್ರದೇಶಗಳನ್ನು ಗುರುತಿಸಬೇಕು. ಹಾಗೆ ಪೊಲೀಸ್ ಮೂಲಸೌಕರ್ಯದೊಂದಿಗೆ ಸಂಪೂರ್ಣ ಸುಸಜ್ಜಿತವಾದ ಸಾಕಷ್ಟು ಸಂಖ್ಯೆಯ ಸಿಬ್ಬಂದಿಯನ್ನು ಅಂತಹ ದುರ್ಬಲ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ನಿಯೋಜಿಸಬೇಕು ಎಂದು ತಿಳಿಸಲಾಗಿದೆ.