ಕೋಲ್ಕತ್ತಾ (ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳದ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ಅಪರೂಪವೇನಲ್ಲ. ಕೇಂದ್ರ ಸರ್ಕಾರ ರಾಜ್ಯಪಾಲರ ಹುದ್ದೆಯನ್ನು ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂಬುದೇ ಸರ್ಕಾರದ ಪ್ರಮುಖ ಆರೋಪ.
ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಏರ್ಪಟ್ಟಿದೆ. ಇದರ ನಡುವೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಮಮತಾ ಬ್ಯಾನರ್ಜಿ ಬುಧವಾರ ಸಂಜೆ ದೂರವಾಣಿ ಮೂಲಕ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಸ್ಟಾಲಿನ್ ಬಿಜೆಪಿ ವಿರುದ್ಧ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದ್ದಾರೆ.
ಅಲ್ಲದೇ, ಮಮತಾ ಬ್ಯಾನರ್ಜಿ ಅವರೊಂದಿಗಿನ ಮಾತುಕತೆ ಬಗ್ಗೆ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ. ''ಬಿಜೆಪಿಯೇತರ ಆಡಳಿತದ ರಾಜ್ಯಗಳಲ್ಲಿ ರಾಜ್ಯಪಾಲರ ಪ್ರಜಾಪ್ರಭುತ್ವ ವಿರೋಧಿ ಕಾರ್ಯ ನಿರ್ವಹಣೆ ಆಗುತ್ತಿದೆ. ಇದರ ವಿರುದ್ಧ ತಮ್ಮ ಒಗ್ಗೂಡಲು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಮುಂದಿನ ನಡೆ ಬಗ್ಗೆ ಎಲ್ಲ ಪ್ರತಿಪಕ್ಷಗಳ ಸಿಎಂಗಳು ಸಭೆ ಸೇರಿ ನಿರ್ಧರಿಸಲಾಗಿದೆ'' ಎಂದು ಸ್ಟಾಲಿನ್ ತಿಳಿಸಿದ್ದಾರೆ.