ಕರ್ನಾಟಕ

karnataka

ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆ ಅಬ್ಬರ: ಸಿಡಿಲು ಬಡಿದು 13 ಮಂದಿ ದುರ್ಮರಣ

By

Published : Apr 10, 2023, 2:06 PM IST

ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆ ಭಾರಿ ಹಾನಿ ಸೃಷ್ಟಿಸಿದೆ. 13 ಜನರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆ ಅಬ್ಬರ
ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆ ಅಬ್ಬರ

ಮುಂಬೈ:ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆ ಅಬ್ಬರಿಸಿದ್ದು, ಆಲಿಕಲ್ಲುಗಳು ಸುರಿದಿವೆ. ಇದರಿಂದ ಕಳೆದ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಸಿಡಿಲು ಬಡಿತ ಸೇರಿದಂತೆ ವಿವಿಧ ಕಾರಣಗಳಿಗೆ 13 ಜನರು ಮೃತಪಟ್ಟರೆ, ನೀರಿನಲ್ಲಿ ಮುಳುಗಿ ಒಬ್ಬರು ಸಾವನ್ನಪ್ಪಿದ್ದಾರೆ.

ಅಕೋಲಾದ ಪರಸ್‌ಗಾಂವ್ ಗ್ರಾಮದಲ್ಲಿನ ಬಾಬೂಜಿ ಮಹಾರಾಜ್ ಸಂಸ್ಥಾನದ ಆಶ್ರಮದಲ್ಲಿ ಭಾನುವಾರ ರಾತ್ರಿ ಭೀಕರ ದುರಂತ ಸಂಭವಿಸಿದೆ. ಆಶ್ರಮದಲ್ಲಿ ನೂರಾರು ಜನರು ಪ್ರಾರ್ಥನೆ ಸಲ್ಲಿಸಲು ಭಕ್ತರು ಬಂದಿದ್ದರು. ಈ ವೇಳೆ ಗುಡುಗು, ಮಿಂಚು ಸಹಿತ ಮಳೆ ಆರಂಭವಾಗಿದೆ. 150 ವರ್ಷಗಳಷ್ಟು ಹಳೆಯದಾದ ಬೇವಿನ ಮರದ ಕೆಳಗೆ ಭಕ್ತರು ಆಶ್ರಯ ಪಡೆದಿದ್ದಾರೆ. ಮರದ ಕೆಳಗಿನ ಶೆಡ್​ನಲ್ಲಿ ನಿಂತಿದ್ದಾಗ ಬರಸಿಡಿಲಿನಿಂದ 7 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಸಿಡಿಲೇಟಿನಿಂದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರ ಗಾಯಕ್ಕೀಡಾಗಿದ್ದ ಮೂವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಗಾಯಗೊಂಡ ಹಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದಲ್ಲದೇ, ಔರಂಗಾಬಾದ್, ಬೀಡ್, ಹಿಂಗೋಲಿ, ನಂದೂರ್ಬಾರ್, ಪರ್ಭಾನಿ ಮತ್ತು ಪುಣೆಯಲ್ಲಿ ಸಿಡಿಲು ಬಡಿತದಿಂದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಸೇರಿ ನಾಲ್ವರು ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ನಾಸಿಕ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಒಬ್ಬರು ನೀರಿಗೆ ಕೊಚ್ಚಿ ಹೋಗಿದ್ದಾರೆ. ಕಳೆದ ಕೆಲವು ವಾರಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಕೂಲ ಹವಾಮಾನದಿಂದ ವಿಪತ್ತುಗಳು ಉಂಟಾಗುತ್ತಿವೆ. ಹಲವಾರು ಪ್ರಾಣಿಗಳು ಕೂಡ ಪ್ರಾಣ ಕಳೆದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಲಿಕಲ್ಲಿನೇಟಿಗೆ ಬೆಳೆ ನಾಶ:ಮಹಾರಾಷ್ಟ್ರದ ವಿವಿಧೆಡೆ ಸುರಿದ ಆಲಿಕಲ್ಲು ಮಳೆಗೆ ಕೃಷಿ ಕೇತ್ರದಲ್ಲಿ ಭಾರಿ ಹಾನಿ ಉಂಟು ಮಾಡಿದೆ. ಆಲಿಕಲ್ಲು ಮಳೆಯಿಂದಾಗಿ ಅನೇಕ ಜಿಲ್ಲೆಗಳಲ್ಲಿ ರೈತರು ನಷ್ಟ ಅನುಭವಿಸಿದ್ದಾರೆ. ಇದು ಮಾವಿನ ಸೀಸನ್​ ಆಗಿರುವುದರಿಂದ ಆಲಿಕಲ್ಲು ಬಿದ್ದ ಕಾರಣ ಬೆಳೆ ಹಾನಿಗೀಡಾಗಿದೆ. ತರಕಾರಿ ಬೆಳೆಗೂ ಧಕ್ಕೆಯಾಗಿದೆ.

ಕರ್ನಾಟಕದಲ್ಲಿ ಪೂರ್ವ ಮಳೆ ಸೂಚನೆ:ಕರ್ನಾಟಕದಲ್ಲಿ ಇನ್ನೆರಡು ದಿನ ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಮಳೆಯಾಗುವುದಿಲ್ಲ. ಉಷ್ಣಾಂಶದ ಪ್ರಮಾಣದಲ್ಲಿ ನಿರಂತರ ಏರಿಕೆಯಾಗಿದೆ.ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಮಿಂಚು, ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನವೂ ಹೆಚ್ಚಾಗಿದ್ದು, ಆಗಾಗ್ಗೆ ಮುಂಗಾರು ಪೂರ್ವ ಮಳೆ ಚದುರಿದಂತೆ ಬೀಳಲಿದೆ. ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ, ಮಲೆನಾಡು ಭಾಗದ ಒಂದೆರಡು ಕಡೆ ಮಳೆಯಾಗಬಹುದು. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಾತ್ರ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕೊಪ್ಪಳ ಮತ್ತಿತರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ನೀಡಿದ್ದಾರೆ.

ಓದಿ:ಕತ್ತೆ ಸಾಕಣೆ ಮಾಡಿ ಯಶಸ್ವಿಯಾದ ವ್ಯಾಪಾರಿ; ಇವರ ತಿಂಗಳ ಆದಾಯ ಕೇಳಿದರೆ ನೀವು ಅಚ್ಚರಿ ಪಡೋದು ಗ್ಯಾರಂಟಿ!

ABOUT THE AUTHOR

...view details