ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಷಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಗೌರವಾನ್ವಿತ ಮುರಳಿ ಮನೋಹರ್ ಜೋಶಿಯವರ ಮಾರ್ಗದರ್ಶನ ಮತ್ತು ಆಶೀರ್ವಾದವನ್ನು ಪಡೆದೆ. ಅವರನ್ನು ಭೇಟಿಯಾದ ನಂತರ ನನ್ನಂತಹ ಪ್ರತಿಯೊಬ್ಬ ಕಾರ್ಯಕರ್ತನೂ ಹೊಸ ಶಕ್ತಿಯನ್ನು ಪಡೆಯುತ್ತಾನೆ ಎಂದು ಹೇಳಿದ್ದಾರೆ.
ಮುರಳಿ ಮನೋಹರ್ ಜೋಷಿ ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದು, ಬಿಜೆಪಿ ಅಧ್ಯಕ್ಷರಾಗಿ ಮಾತ್ರವಲ್ಲದೆ ಕೇಂದ್ರ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು 80-90ರ ದಶಕದ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಲ್ಲೊಬ್ಬರಾಗಿದ್ದರು.
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವರ್ಷದ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಅಖಿಲ ಭಾರತ ಶಿಕ್ಷಾ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಎಲ್ಲ ಭಾಷೆಗಳಿಗೆ ಸಮಾನ ಗೌರವವನ್ನು ನೀಡುತ್ತದೆ. ಯಾರುಈ ಭಾಷೆಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಾರೋ ಅವರ ಅಂಗಡಿಗಳು ಮುಚ್ಚುತ್ತದೆ ಎಂದು ಟೀಕಿಸಿದ್ದರು. ಭಾಷೆಗಳ ಆಧಾರದ ಮೇಲೆ ಓರ್ವ ವಿದ್ಯಾರ್ಥಿಯ ಸಾಮರ್ಥ್ಯವನ್ನು ಅಳೆಯುವುದು ವಿದ್ಯಾರ್ಥಿಗೆ ಮಾಡುವ ಅನ್ಯಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.