ಎರ್ನಾಕುಲಂ (ಕೇರಳ) :ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಬಿದ್ದ ಪರಿಣಾಮ ಪಶ್ಚಿಮ ಬಂಗಾಳ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಎರ್ನಾಕುಲಂ ಜಿಲ್ಲೆಯ ಅಂಗಮಾಲಿ ಎಂಬಲ್ಲಿ ನಡೆದಿದೆ.
ಕಾರ್ಮಿಕರ ಮೇಲೆ ಸ್ಲ್ಯಾಬ್ ಕುಸಿತ: ಪಶ್ಚಿಮ ಬಂಗಾಳ ಮೂಲದ ಅಲಿಹಾಸನ್ (30), ಕೇರಳ ಮೂಲದ ಜಾನಿ ಆಂಟನಿ (52) ಮೃತರು ಎಂದು ತಿಳಿದುಬಂದಿದೆ. ನಿರ್ಮಾಣ ಹಂತದಲ್ಲಿರುವ ಎರಡು ಅಂತಸ್ತಿನ ಮನೆಯ ಸನ್ಶೇಡ್ ಸ್ಲ್ಯಾಬ್ ಕಾರ್ಮಿಕರ ಮೇಲೆ ಕುಸಿದಿರುವುದರಿಂದ ಈ ಅವಘಡ ಸಂಭವಿಸಿದೆ. ಅಲಿಹಾಸನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕರುಕುಟ್ಟಿ ಮೂಲದ ಜಾನಿ ಅಂತೋನಿ ಆಸ್ಪತ್ರೆಗೆ ಕರೆದೊಯ್ದರು ಸಹ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅದೇ ವೇಳೆ ಗಂಭೀರವಾಗಿ ಗಾಯಗೊಂಡಿರುವ ಪಶ್ಚಿಮ ಬಂಗಾಳ ಮೂಲದ ಕಲ್ಲು (30) ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ. 24 ಗಂಟೆಗಳ ಕಾಲ ಏನೂ ಹೇಳಲಾಗುವುದಿಲ್ಲ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಹಾಕಿದ್ದ ಸ್ಲ್ಯಾಬ್ ಮೇಲೆ ವ್ಯಕ್ತಿಯೊಬ್ಬರು ಹತ್ತಿದಾಗ ಸ್ಲ್ಯಾಬ್ ಒಡೆದಿತ್ತು ಎಂದು ವರದಿಯಾಗಿದೆ. ಇದರಿಂದಾಗಿ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಸ್ಲ್ಯಾಬ್ ಬಿದ್ದಿದೆ ಎಂದು ತಿಳಿದುಬಂದಿದೆ.
ಇತರೆ ರಾಜ್ಯದ ಕಾರ್ಮಿಕರು ಕೆಲಸದಲ್ಲಿ ಭಾಗಿ :ಮಂಗಳವಾರ ಬೆಳಗ್ಗೆ 8.30ರ ಸುಮಾರಿಗೆ ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಈ ಅವಘಡ ಸಂಭವಿಸಿದೆ. ಅಪಘಾತದ ವೇಳೆ ಕೇರಳ ಹಾಗೂ ಇತರೆ ರಾಜ್ಯದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.