ಶಿವಮೊಗ್ಗ :ರಾಜ್ಯಾದ್ಯಂತ ಕೊರೊನಾ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಲಾಕ್ಡೌನ್ ವಿಧಿಸಿ ಆದೇಶ ಹೊರಡಿಸಿದೆ.
ಲಾಕ್ಡೌನ್ ವಿಧಿಸಿದ ಪರಿಣಾಮವಾಗಿ ಬೆಂಗಳೂರು ನಗರ ಸೇರಿದಂತೆ ದೊಡ್ಡ ಪಟ್ಟಣಗಳಿಗೆ ಉದ್ಯೋಗ ಅರಸಿ ಹೋಗಿದ್ದ ಗ್ರಾಮೀಣ ಭಾಗದ ಜನರು ಮತ್ತೆ ತಮ್ಮ ಸ್ವಂತ ಊರುಗಳಿಗೆ ತೆರಳಿದ್ದಾರೆ.
ಹಾಗಾಗಿ, ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದ್ದು ಹಳ್ಳಿಗರಲ್ಲಿ ಆತಂಕ ಹೆಚ್ಚಿಸಿದೆ. ಕೊರೊನಾ ಹೆಚ್ಚಾಗಲು ಸರ್ಕಾರ ಬೇರೆ ರಾಜ್ಯಗಳಿಂದ ಬಂದ ವ್ಯಕ್ತಿಗಳನ್ನು ತಪಾಸಣೆ ಮಾಡದಿರುವುದು ಮತ್ತು ಕ್ವಾರಂಟೈನ್ ಮಾಡದಿರುವುದು ಸಹ ಕೊರೊನಾ ಸೋಂಕು ಹಳ್ಳಿಗಳಲ್ಲಿ ಹೆಚ್ಚಾಗಲು ಕಾರಣವಾಯಿತು.
ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಹಳ್ಳಿಗಳಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿವೆ. ದೇಶಾದ್ಯಂತ ಕೊರೊನಾ ಮೊದಲನೇ ಅಲೆ ಶಿವಮೊಗ್ಗದಲ್ಲಿ ಅಷ್ಟೊಂದು ಪರಿಣಾಮ ಬೀರಿರಲಿಲ್ಲ ಹಾಗೂ ಕೊರೊನಾ ಸೋಂಕಿತರ ಸಂಖ್ಯೆಯು ಸಹ ಕಡಿಮೆ ಇತ್ತು.
ಆದರೆ, ಕೊರೊನಾ ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿದಿನ ಸಾವಿರದ ಗಡಿದಾಟಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಗೆ ಕಾರಣವಾಗುತ್ತಿದೆ.
ಕಳೆದ ಐದು ದಿನಗಳಲ್ಲಿ 5038 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು 62 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದು ಸಹ ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಒಟ್ಟು 7277 ಸಕ್ರಿಯ ಪ್ರಕರಣಗಳು ಇದ್ದು, ಒಟ್ಟು ಇಲ್ಲಿಯವರೆಗೂ 557 ಜನ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ ಏಪ್ರಿಲ್ 6 ರಂದು ಎರಡನೇ ಅಲೆಯಿಂದ ಸಾವನ್ನಪ್ಪಿದ ಮೊದಲ ಪ್ರಕರಣ ಪತ್ತೆಯಾಯಿತು. ಅಲ್ಲಿಂದ ಇಲ್ಲಿಯವರೆಗೂ 208 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.