ಕರ್ನಾಟಕ

karnataka

ನೂತನ ಎಂಎಲ್​​ಸಿಗಳಿಗೆ ಸಚಿವ ಸ್ಥಾನ ನೀಡದಂತೆ ಕೋರಿ ಹೈಕೋರ್ಟ್​ಗೆ ಪಿಐಎಲ್

By

Published : Aug 19, 2020, 4:14 AM IST

ಎಂ.ಟಿ.ಬಿ ನಾಗರಾಜ್, ಆರ್. ಶಂಕರ್ ಹಾಗೂ ಹೆಚ್ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಹೈಕೋರ್ಟ್​ಗೆ ಪಿಐಎಲ್
ಹೈಕೋರ್ಟ್​ಗೆ ಪಿಐಎಲ್

ಬೆಂಗಳೂರು: ಭಾರತೀಯ ಜನತಾ ಪಕ್ಷದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಎಂ.ಟಿ.ಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ವಕೀಲ ಎ ಎಸ್ ಹರೀಶ್ ಎಂಬುವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ, ಎಂ ಟಿ ಬಿ ನಾಗರಾಜ್, ಆರ್ ಶಂಕರ್ ಹಾಗೂ ಹೆಚ್ ವಿಶ್ವನಾಥ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಅರ್ಜಿದಾರರ ಮನವಿ: ಸದ್ಯ ಬಿಜೆಪಿಯಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ ಈ ಮೂವರಿಗೆ ಸಚಿವ ಸ್ಥಾನ ನೀಡಬಾರದು. ಶಾಸಕ ಸ್ಥಾನದಿಂದ ಅನರ್ಹರಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಈ ಮೂವರು ಹುದ್ದೆ ಪಡೆದುಕೊಳ್ಳಬೇಕಾದರೆ ಚುನಾವಣೆಯಲ್ಲಿ ಮರು ಆಯ್ಕೆ ಆಗಬೇಕಿತ್ತು. ಇದೀಗ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವುದನ್ನು ಜನರಿಂದಾದ ಮರು ಆಯ್ಕೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಲ್ಲದೇ, ಈ ಮೂವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆಯಾಗಲಿದೆ. ಆದ್ದರಿಂದ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿರುವ ಪ್ರಮಾಣ ಪತ್ರ ಸಲ್ಲಿಸದ ಹೊರತು ಇವರಿಗೆ ಸಚಿವ ಸ್ಥಾನ ನೀಡಬಾರದು. ಅರ್ಜಿ ಇತ್ಯರ್ಥವಾಗುವವರೆಗೆ ಇವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ABOUT THE AUTHOR

...view details