ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರ 28ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಪ್ರಯುಕ್ತ ಮತ್ತು ಕೋವಿಡ್ನಿಂದ ಮೃತಪಟ್ಟ ಕುಟುಂಬಗಳಿಗೆ ಹತ್ತು ಸಾವಿರ ಸಹಾಯಧನ ಮತ್ತು ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ಗಾಂಧಿನಗರ ವಿಧಾನಸಭಾ ಕ್ಷೇತ್ರ, ಬಿನ್ನಿಪೇಟೆಯ ಕೆಪಿಟಿಸಿಎಲ್ ಆಟದ ಮೈದಾನದಲ್ಲಿ ಶ್ರೀ ಆರ್ ಗುಂಡೂರಾವ್ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಆನನ್ಯಾ ರಾವ್ ಮತ್ತಿತರರು ಪಾಲ್ಗೊಂಡಿದ್ದರು. ಆರ್ ಗುಂಡೂರಾವ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, ಅತಿ ಕಿರಿಯ ವಯಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದವರು ಆರ್.ಗುಂಡೂರಾವ್. ಮುಖ್ಯಮಂತ್ರಿಯಾಗಿ ಮೂರು ವರ್ಷ ಆಡಳಿತದಲ್ಲಿ ಸ್ವಜನ ಪಕ್ಷಪಾತವಿಲ್ಲದೇ, ಜಾತ್ಯಾತೀತ ತತ್ವದ ಮೇಲೆ ಆಡಳಿತ ನಡೆಸಿದರು. ಆಡಳಿತದಲ್ಲಿ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದರು. ಆರ್ ಗುಂಡೂರಾವ್ ಫೌಂಡೇಷನ್ ಸಹ ಸಮಾಜಿಮುಖಿ ಕಾರ್ಯಗಳನ್ನು ಮಾಡುತ್ತಾ ಮೆಚ್ಚುಗೆ ಗಳಿಸಿದೆ ಎಂದ್ರು.