ಕರ್ನಾಟಕ

karnataka

ಅಧಿಕಾರ ತಂದುಕೊಟ್ಟ ಯುವಕರ ಜೀವಕ್ಕೆ ಗ್ಯಾರಂಟಿ ಕೊಡದಷ್ಟು ಬಿಜೆಪಿ ದುರ್ಬಲವಾಗಿದೆ: ಹೆಚ್​ಡಿಕೆ ಟೀಕೆ

By

Published : Jul 30, 2022, 11:56 AM IST

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ರಾಜ್ಯ ಬಿಜೆಪಿ ಸರ್ಕಾರ ಸರ್ವಶನಾಶ ಮಾಡಿದೆ. ಹಿಂಸೆ ಎಂಬ ವಿಷಸರ್ಪದ ಹೆಡೆಮುರಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೆ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

hd kumaraswamy
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ ಹಾಗೂ ಅಸಹಾಯಕ ರಾಜ್ಯ ಬಿಜೆಪಿ ಸರ್ಕಾರ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್​​ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್​​ಐಎ ತನಿಖೆಗೆ ವಹಿಸಲು ಹಿಂಜರಿಯುತ್ತಿದೆ, ಏಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರ್ಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, 'ಡಬಲ್ ಇಂಜಿನ್ ಸರ್ಕಾರ ಡಬಲ್ ಗೇಮ್' ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ ಎಂದು ಟೀಕಿಸಿದ್ದಾರೆ.

ಸಿಎಂ ವೀರಾವೇಶ ಎಲ್ಲಿ ಹೋಯ್ತು?:ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್​​ಐಎ ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು?, ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ "ಶಾಂತಿ ಕಾಪಾಡಿ" ಎನ್ನುವ ಮಾತು ಬಂತಾ?, ಬರಲಿಲ್ಲ. ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ?, ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪ ಸುರಿದು ಬಂದರು ಎಂದು ಕಿಡಿಕಾರಿದ್ದಾರೆ.

ಎನ್​​ಐಎ ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ?, ಒಂದೂ ಇಲ್ಲ. ಎನ್​​ಐಎಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು?, ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದಲ್ಲವೇ ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಇದೆಯಾ?:ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ?. ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ನಿರ್ಣಾಮ ಮಾಡಬಲ್ಲರು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ ಎನ್​​ಐಎಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ 'ಸಮಾಧಿ' ಕಟ್ಟಲು ಹೊರಟಿದೆ.

ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ. ಕೊಲೆಗಳು ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರು ಹರಿದಷ್ಟೂ ಭರ್ಜರಿ ಮತಧಾರೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:'ಕರಾವಳಿ ಕೊಲೆಗಳ ಆಡಂಬೋಲವಾಗಿದೆ, ಬಿಜೆಪಿ ಕೊಲೆಗಡುಕ ರಾಜಕಾರಣ ಮಾಡುತ್ತಿದೆ'

ABOUT THE AUTHOR

...view details