ಬೆಂಗಳೂರು:ಕಾಂಗ್ರೆಸ್ ಪಕ್ಷಕ್ಕೆ ಸೋನಿಯಾ ಗಾಂಧಿ ನಾಯಕತ್ವದ ಅನಿವಾರ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸಂಪೂರ್ಣವಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಾಯಕತ್ವವನ್ನು ಒಪ್ಪಿಕೊಂಡಿದೆ. ಸೋನಿಯಾ ಗಾಂಧಿ ಹಾಗೂ ಗಾಂಧಿ ಕುಟುಂಬದ ನಾಯಕತ್ವವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅತ್ಯಂತ ಕಷ್ಟದ ಸಂದರ್ಭದಲ್ಲಿ ಪಕ್ಷವನ್ನು ಉಳಿಸಿ ಬೆಳೆಸಿದ ಕೀರ್ತಿ ಸೋನಿಯಾಗಾಂಧಿ ಅವರಿಗೆ ಸಲ್ಲುತ್ತದೆ. ಪಕ್ಷಕ್ಕೆ ಅವರ ಅನಿವಾರ್ಯತೆ ಇದೆ. ನಾಯಕತ್ವ ಬದಲಾವಣೆ ಸೇರಿದಂತೆ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ವಿಚಾರವಿರಲಿ, ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧರಿಸಬೇಕೇ ಹೊರತು ಮಾಧ್ಯಮದ ಮುಂದೆ ತೆರಳುವುದು ಸರಿಯಲ್ಲ ಎಂದಿದ್ದಾರೆ.