ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ರಾಜಕಾರಣಿಗಳು ಮಾತ್ರವಲ್ಲದೇ ಚಲನಚಿತ್ರರಂಗದ ಪ್ರಸಿದ್ಧ ನಟರನ್ನೂ ಕೂಡ ಬಿಜೆಪಿ ಪಕ್ಷಕ್ಕೆ ಸೆಳೆಯತೊಡಗಿದೆ. ಸ್ಯಾಂಡಲ್ವುಡ್ನ ಸುಪ್ರಸಿದ್ಧ ನಟ ಕಿಚ್ಚ ಸುದೀಪ್ ಅವರನ್ನ ಮನವೊಲಿಸಿ ಬಿಜೆಪಿಗೆ ಸೇರಿಸಿಕೊಳ್ಳಲು ಪಕ್ಷದಲ್ಲಿ ವೇದಿಕೆ ಸಿದ್ಧವಾಗತೊಡಗಿದೆ. ರಾಜ್ಯದಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳನ್ನು ಹೊಂದಿದ ನಟ ಕಿಚ್ಚ ಸುದೀಪ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬಿಜೆಪಿ ಉದ್ದೇಶಿಸಿದೆ ಎಂದು ತಿಳಿದು ಬಂದಿದೆ.
ಕಿಚ್ಚ ಸುದೀಪ್ ಬಿಜೆಪಿ ಸೇರುವ ಇಲ್ಲವೇ ಪಕ್ಷಕ್ಕೆ ಬೆಂಬಲ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ನಟ ಸುದೀಪ್ ಸಮ್ಮುಖದಲ್ಲಿಯೇ ಪ್ರಕಟಿಸಲಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ 'ಈಟಿವಿ ಭಾರತ'ಕ್ಕೆ ಲಭ್ಯವಾಗಿದೆ. ಬೆಂಗಳೂರಿನ ಖಾಸಗಿ ಪಂಚತಾರಾ ಹೋಟೆಲ್ನಲ್ಲಿ ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಸುದ್ದಿಗೋಷ್ಠಿ ಕರೆದಿದ್ದು, ಈ ಸಂದರ್ಭದಲ್ಲಿ ಸುದೀಪ್ ಅವರು ಬಿಜೆಪಿ ಸೇರುವ ಅಥವಾ ಬೆಂಬಲ ನೀಡುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸುದೀಪ್ ಅವರನ್ನು ಬಿಜೆಪಿಗೆ ಕರೆತರುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸತತ ಮಾತುಕತೆ ನಡೆಸಿ ಕಿಚ್ಚ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಕಿಚ್ಚ ಸುದೀಪ್ ಅವರಿಗೆ ತಮ್ಮ ಪಕ್ಷಗಳನ್ನ ಸೇರುವಂತೆ ಆಫರ್ ನೀಡಿದ್ದವು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇತ್ತೀಚೆಗೆ ಸುದೀಪ್ ಅವರನ್ನು ಭೇಟಿ ಮಾಡಿ 'ವಿಕ್ರಾಂತ್ ರೋಣ' ಸಿನಿಮಾಕ್ಕೆ ಶುಭ ಹಾರೈಸುವ ಸಂದರ್ಭದಲ್ಲಿ ಕಾಂಗ್ರೆಸ್ಗೆ ಸೇರುವಂತೆ ಆಹ್ವಾನ ನೀಡಿದ್ದರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸುಧಾಕರ್ ಅವರು ಸಹ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಬಿಜೆಪಿಗೆ ಬರುವಂತೆಯೂ ಮನವಿ ಮಾಡಿದ್ದರು.
ಇದನ್ನೂ ಓದಿ :'ನಟ ಸುದೀಪ್ ರಾಜಕೀಯ ಪ್ರವೇಶಕ್ಕೆ ಬಲವಂತವಿಲ್ಲ': ಡಿಕೆಶಿ