ಕರ್ನಾಟಕ

karnataka

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

By

Published : Dec 1, 2022, 10:22 AM IST

Updated : Dec 1, 2022, 12:36 PM IST

Ghati Subrahmanya
ಘಾಟಿ ಸುಬ್ರಹ್ಮಣ್ಯ

ಡಿಸೆಂಬರ್​ 20 ರಂದು ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚುತ್ತಿದ್ದು ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,037 ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣ ಕಂಡುಬಂದಿದ್ದು, 154 ಜಾನುವಾರುಗಳು ಮರಣ ಹೊಂದಿವೆ. ಜಾನುವಾರುಗಳಿಗೆ ಹರಡುತ್ತಿರುವ ರೋಗದ ನಿಯಂತ್ರಣಕ್ಕಾಗಿ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ದ. ಪಕ್ಕದ ತಮಿಳುನಾಡು ಮತ್ತು ಆಂಧ್ರಪ್ರದೇಶದ ರೈತರು ಸಹ ಜಾತ್ರೆಗೆ ಬಂದು ದನಗಳ ವ್ಯಾಪಾರ ಮಾಡುತ್ತಾರೆ. ಡಿಸೆಂಬರ್ 20ರಂದು ಈ ವರ್ಷದ ಘಾಟಿ ದನಗಳ ಜಾತ್ರೆಗೆ ಸಿದ್ಧತೆ ನಡೆದಿತ್ತು.

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 1,62,980 ದನ ಮತ್ತು ಎಮ್ಮೆಗಳಿವೆ. ಮುಂಜಾಗ್ರತಾ ಕ್ರಮವಾಗಿ 1,51,526 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಜಿಲ್ಲೆಯ ವಿವಿಧೆಡೆ ದನಗಳ ಜಾತ್ರೆ ನಡೆಯುತ್ತದೆ. ದನಗಳು ಒಂದೆಡೆ ಸೇರುವುದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.

ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ ಈ ಬಗ್ಗೆ ಮಾತನಾಡಿ, ಚರ್ಮಗಂಟು ರೋಗದ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಜಾನುವಾರುಗಳ ಜಾತ್ರೆಗೆ ನಿಷೇಧ ಮಾಡುವುದಾಗಿ ಹೇಳಿದ್ದರು. ಸಚಿವರ ಸೂಚನೆಯಂತೆ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯ ವಸ್ತುಸ್ಥಿತಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು.

ಚರ್ಮಗಂಟು ರೋಗವನ್ನು ನಿಯಂತ್ರಣ ಮಾಡಲು ಕರ್ನಾಟಕ ಅನಿಮಲ್ ಡಿಸೀಸ್ 1961ರ ಕಾಯ್ದೆ ಪ್ರಕಾರ, 2023ರ ಜನವರಿ 30ರವರೆಗೂ ಜಿಲ್ಲೆಯಲ್ಲಿ ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆ ಮಾಡದಂತೆ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಚರ್ಮಗಂಟು ರೋಗ: 288 ಜಾನುವಾರುಗಳು ಬಲಿ

Last Updated :Dec 1, 2022, 12:36 PM IST

ABOUT THE AUTHOR

...view details