ಕರ್ನಾಟಕ

karnataka

ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಎಂಬ ಆದೇಶ ಕೇಂದ್ರ ಸರ್ಕಾರದ್ದು: ಸಿಎಂ ಸ್ಪಷ್ಟನೆ

By

Published : Jul 16, 2023, 6:23 PM IST

ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ಮಾರ್ಗಸೂಚಿ ಹೊರಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

anganwadi-cooking-staff-not-to-wear-bangles-guidelines-from-central-government-says-cm
ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಆದೇಶ ಕೇಂದ್ರ ಸರ್ಕಾರದ್ದು: ಸಿಎಂ ಸ್ಪಷ್ಟನೆ

ಬೆಂಗಳೂರು:ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ಷೀಟ್ ಮೂಲಕ​ ಸ್ಪಷ್ಟನೆ ನೀಡಿದ್ದಾರೆ.

ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಆದೇಶ ಕುರಿತ ಸ್ಪಷ್ಟನೆ

ಕಟೀಲ್ ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ - ಕಾಂಗ್ರೆಸ್​:ಈ ಕುರಿತು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ತಮ್ಮದೇ ಸರ್ಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೇ ಆದೇಶ ಹೊರಡಿಸಿದೆ. ನಳಿನ್ ಕುಮಾರ್ ಕಟೀಲ್​ ಅವರೇ, ಆ ಬಳೆಯನ್ನು ತಾವು ಧರಿಸಿಕೊಳ್ಳಲೆಂದು ಮೋದಿಯವರು ಈ ಆದೇಶ ಹೊರಡಿಸಿದ್ದೇ?. ಹಿಂದೂ ಆಚರಣೆಗಳನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡರೇ? ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ ಎಂದು ಟೀಕಿಸಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಮಹಾ ಘಟಬಂದನ್ ಸಭೆಗೆ ಸಕಲ ಸಿದ್ಧತೆ:ನಾಳೆ ಬೆಂಗಳೂರಲ್ಲಿ ಮಹಾ ಘಟಬಂದನ್ ಸಭೆ ಹಿನ್ನೆಲೆ ನಗರದ ಖಾಸಗಿ ತಾರಾ ಹೋಟೆಲ್​ನಲ್ಲಿ ಭಾರೀ ತಯಾರಿ ನಡೆದಿದೆ. ರೇಸ್ ಕೋರ್ಸ್ ರಸ್ತೆ, ಕುಮಾರಕೃಪ ರಸ್ತೆಯಲ್ಲಿ ಬೃಹತ್ ಫ್ಲೆಕ್ಸ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ರಸ್ತೆಯ ಎಡಭಾಗದಲ್ಲಿ ಪ್ರತಿಪಕ್ಷದ ನಾಯಕರುಗಳ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ. ಎಂಕೆ ಸ್ಟ್ಯಾಲಿನ್, ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೇರಳ ಕಾಂಗ್ರೆಸ್​ನ ಪ್ರಮುಖರು, ಉದ್ಧವ್​ ಠಾಕ್ರೆ ಸೇರಿದಂತೆ ಪ್ರಮುಖರ ಫ್ಲೆಕ್ಸ್ ಬ್ಯಾನರ್ ರಾರಾಜಿಸುತ್ತಿವೆ.

ಸರ್ವ ವಿರೋಧ ಪಕ್ಷಗಳ ಒಕ್ಕೂಟ ಸಭೆಯಲ್ಲಿ ಭಾಗವಹಿಸುವ ಪ್ರಮುಖ ನಾಯಕರ ವಿವರ ಇಂತಿದೆ. ಮಮತಾ ಬ್ಯಾನರ್ಜಿ, ಉದ್ಧವ್​ ಠಾಕ್ರೆ, ಆದಿತ್ಯ ಠಾಕ್ರೆ, ಹೇಮಂತ್ ಸೊರೇನ್, ಎಂಕೆ ಸ್ಟ್ಯಾಲಿನ್, ನಿತೀಶ್ ಕುಮಾರ್, ಶರದ್ ಪವಾರ್, ಸುಪ್ರಿಯಾ ಸುಳೆ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೆಹಬೂಬಾ ಮುಫ್ತಿ, ಲಾಲು ಪ್ರಸಾದ್ ಯಾದವ್, ಡಿ ರಾಜಾ, ಸೀತಾರಾಂ ಯೆಚೂರಿ, ಓಮರ್ ಅಬ್ದುಲ್ಲಾ ಮತ್ತಿತರ ನಾಯಕರು ಭಾಗವಹಿಸುತ್ತಿದ್ದಾರೆ.

ಜೆಡಿಎಸ್ ಬಗ್ಗೆ ದಿನೇಶ್​ ಗುಂಡೂರಾವ್ ಟ್ವೀಟ್​

ಜೆಡಿಎಸ್ ಅವಕಾಶವಾದಿ ಪಕ್ಷ:ಕೋಮುವಾದಿ ಬಿಜೆಪಿ ಪಕ್ಷದ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಳ್ಳಲು ಹೊರಟಿದ್ದು, ಇವರಿಗೆ ಯಾವ ಸಿದ್ಧಾಂತವಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ ಎಚ್​ಡಿಕೆ ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ.‌ ಕೋಮುವಾದಿ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್​ಗೆ ಯಾವ ಸಿದ್ಧಾಂತವಿದೆ? ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ ಎಂದು ಲೇವಡಿ ಮಾಡಿದ್ದಾರೆ.

ಜೆಡಿಎಸ್ ಪಕ್ಷವನ್ನು ಟೀಕಿಸಿದ ದಿನೇಶ್​ ಗುಂಡೂರಾವ್

ಜೆಡಿಎಸ್ ಮುಂದಿರುವ ಜಾತ್ಯತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006ರಲ್ಲಿ ಬಿಜೆಪಿ ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯತೀತ ತತ್ವಕ್ಕೆ ಎಚ್​ಡಿಕೆ ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್​ನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ ಜೆಡಿಎಸ್ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯತೀತ ಸಿದ್ಧಾಂತವೇ ಕಾರಣ. ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಎಚ್​ಡಿಕೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ವಾ?: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ABOUT THE AUTHOR

...view details