ಕರ್ನಾಟಕ

karnataka

ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯವೂ ಇದೆ : ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Sep 20, 2023, 10:03 PM IST

ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಸಿಕ್ಕಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಹೇಳಿಕೆಯನ್ನು ನೀಡಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರ. ಆದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ ಎಂದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದು ಎಂದು ಹೇಳಿದ್ದಾರೆ.

ಮಸೂದೆಗೆ ಸಣ್ಣಪುಟ್ಟ ತಿದ್ದುಪಡಿಯಿಂದ ಅನ್ಯಾಯ: ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕ್ಷೇತ್ರ ಮರುವಿಂಗಡಣೆ ನಂತರ ಮೀಸಲಾತಿ:ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರ ಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ.

ಮಸೂದೆ ಕಾಂಗ್ರೆಸ್ ಪಕ್ಷದ ಕನಸಿನ ಕೂಸು: ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತಃ ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇ. 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ. 2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು. ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ ಎಂದಿದ್ದಾರೆ.

ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್​ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು. 2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ದರಾಗಿದ್ದೇವೆ.

ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನು?: ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾಥ್ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. "ಕಾಂಗ್ರೆಸ್​ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು" ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ.. 454 ಮತಗಳು ಪರ, 2 ಮತ ವಿರುದ್ಧ ಚಲಾವಣೆ

ABOUT THE AUTHOR

...view details