ಕರ್ನಾಟಕ

karnataka

ಹಿಂದೆ ನಡೆದ ಅಕ್ರಮಗಳ ತನಿಖೆಗಾಗಿ ಎಸ್ಐಟಿ ರಚನೆ?: ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ

By

Published : Jun 16, 2023, 7:00 AM IST

ಈ ಹಿಂದೆ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚಿಸಿವ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

ಸಂಪುಟ ಸಭೆ
ಸಂಪುಟ ಸಭೆ

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ಐಟಿ ರಚಿಸಿವ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಆ ಮೂಲಕ ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳನ್ನು ತನಿಖೆಗೆ ಒಳಪಡಿಸಿ ಬಿಜೆಪಿಯನ್ನು ಮತ್ತಷ್ಟು ಕಟ್ಟಿ ಹಾಕಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಎಸ್​​​ಐಟಿ ರಚಿಸುವ ಬಗ್ಗೆ ಸಮಾಲೋಚನೆ ನಡೆದಿದೆ.

ಪಿಎಸ್ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ಐಟಿ ರಚನೆ ಮಾಡುವ ಬಗ್ಗೆ ಕೆಲ ಸಚಿವರು ಇಂಗಿತ ವ್ಯಕ್ತಪಡಿಸಿದ್ದಾರೆ. ಹಿಂದೆ ನಾವು ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಈಗ ತನಿಖೆ ಸೂಕ್ತವಾಗಿ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ ಮಾಡಿ ತನಿಖೆ ನಡೆಸುವಂತೆ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

ಸಂಪುಟ ಸಭೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಸಚಿವ ಕೃಷ್ಣ ಭೈರೇಗೌಡ ತನಿಖೆಯ ಪ್ರಸ್ತಾಪ ಮುಂದಿಟ್ಟಿದ್ದಾರೆ. ಸಚಿವರಿಬ್ಬರ ಮಾತಿಗೆ ದಿನೇಶ್ ಗುಂಡೂರಾವ್ ಕೂಡ ದನಿಗೂಡಿಸಿದ್ದಾರೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್​​ ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲ ಅಕ್ರಮ, ನೇಮಕಾತಿ ಅಕ್ರಮಗಳು ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಂಗ್ರೆಸ್ ಹೋರಾಟ, ಅಭಿಯಾನಗಳನ್ನೂ ನಡೆಸಿತ್ತು. ಪ್ರಮುಖವಾಗಿ ಶೇ 40 ಪರ್ಸೆಂಟ್​ ಕಮಿಷನ್ ಅಕ್ರಮ, ಬಿಟ್ ಕಾಯಿನ್ ಅಕ್ರಮ, ಪಿಎಸ್ಐ ನೇಮಕಾತಿ ಅಕ್ರಮ, ಉಪನ್ಯಾಸಕ ನೇಮಕಾತಿ ಅಕ್ರಮ ಸೇರಿದಂತೆ ಹಲವು ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಕಾಂಗ್ರೆಸ್ ದೊಡ್ಡ ಮಟ್ಟಿನ ಆರೋಪ ಮಾಡಿತ್ತು.

ಬಿಟ್​ ಕಾಯಿನ್ ಹಗರಣ ​ಮರು ತನಿಖೆ ಗೃಹ ಸಚಿವ:ಕಳೆದ ಎರಡು ದಿನಗಳ ಹಿಂದಷ್ಟೆ ಬಿಟ್ ಕಾಯಿನ್ ಹಗರಣದ ಮರು ತನಿಖೆ ಬಗ್ಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಮಾತನಾಡಿದ್ದರು. ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಬಿಟ್​ ಕಾಯಿನ್​ ಹಗರಣದಲ್ಲಿ, 2020 ಬೆಂಗಳೂರು ಸಿಸಿಬಿ ಪೊಲೀಸರು ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಎಂಬಾತನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿ ಶ್ರೀಕಿ ಸೈಬರ್​ ವಂಚನೆ ಹಾಗೂ ಬಿಟ್​ ಕಾಯಿನ್​ ಅಕ್ರಮ, ಮನಿ ಲಾಂಡರಿಂಗ್​, ಕ್ರಿಪ್ಟೋ ಕರೆನ್ಸಿ ಲೂಟಿಯಂತಹ ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿರುವುದು ಬಯಲಾಗಿತ್ತು.

ಇದೇ ವೇಳೆ, ಆರೋಪಿ ಶ್ರೀಕಿ ಡಾರ್ಕ್​ನೆಟ್​ ಮೂಲಕ ಬಿಟ್​ಕಾಯಿನ್​ ಉಪಯೋಗಿಸಿ ಡ್ರಗ್ಸ್​ ಸಂಗ್ರಹ ಮಾಡಿ ಅದನ್ನು ಹೈ ಪ್ರೊಫೈಲ್​ ಕ್ಲೈಂಟ್​ಗಳಿಗೆ ಮಾರಾಟ ಮಾಡುತ್ತಿದ್ದ ಎನ್ನುವ ದೂರು ಕೂಡ ಈತನ ಮೇಲೆ ದಾಖಲಾಗಿತ್ತು. 2017ರಲ್ಲಿ ಬಿಟ್​ ಕ್ಲಬ್​ ನೆಟ್​ವರ್ಕ್​ ಸರ್ವರ್​ ಹ್ಯಾಕ್​ ಮಾಡಿ ಅದರಿಂದ 100 ಬಿಟ್​ ಕಾಯಿನ್​ಗಳನ್ನೂ ಎಗರಿಸಿದ್ದ. 2021 ಫೆಬ್ರವರಿಯಲ್ಲಿ ಈತನ ವಿರುದ್ಧ ಸಿಸಿಬಿ, ಇಡಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ಇದೀಗಾ ಈ ಹಗರಣದ ಬಗ್ಗೆ ಮರು ತನಿಖೆ ನಡೆಸುವುದಾಗಿ ಸಚಿವರು ಹೇಳಿದ್ದರು.

ಇದನ್ನೂ ಓದಿ:Bitcoin scam: ಬಿಟ್ ಕಾಯಿನ್ ಹಗರಣ ಮರು ತನಿಖೆ ಮಾಡುತ್ತೇವೆ- ಗೃಹ ಸಚಿವ ಜಿ.ಪರಮೇಶ್ವರ್

ABOUT THE AUTHOR

...view details