ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕದ ನಿವಾಸಿಗಳಿಗೆ ಕನಿಷ್ಟ 20 ವಾರ್ಡ್ ಗಳಲ್ಲಿ ಟಿಕೆಟ್ ನೀಡುವಂತೆ ರಾಜಕೀಯ ಪಕ್ಷಗಳಿಗೆ ಒತ್ತಡ ಹೇರಬೇಕೆಂದು ನಿವೃತ್ತ ಡಿಜಿಪಿ ಹಾಗೂ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಗೌರವ ಅಧ್ಯಕ್ಷ ಶಂಕರ ಬಿದರಿ ಹೇಳಿದ್ದಾರೆ.
ಒಕ್ಕೂಟದ ಉದ್ಘಾಟನೆ ಕಾರ್ಯಕ್ರಮದ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ವಿವಿಧೆಡೆ ಉತ್ತರ ಕರ್ನಾಟಕದ ಜನರು ಹೆಚ್ಚಾಗಿ ವಾಸವಿರುವ ಪ್ರದೇಶಗಳಲ್ಲಿ ಟಿಕೆಟ್ ನೀಡುವಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪ್ರಮುಖ ಪಕ್ಷಗಳಿಗೂ ಮನವಿ ಮಾಡಿಕೊಳ್ಳುವಂತೆ ತಿಳಿಸಿದ ಅವರು ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸುವ ರಾಜಕೀಯ ಪಕ್ಷಕ್ಕೆ ಉತ್ತರ ಕರ್ನಾಟಕದ ಜನರ ಬೆಂಬಲ ನೀಡಬೇಕು ಎಂದು ಬಿದರಿ ಅವರು ಈ ಸಂದರ್ಭದಲ್ಲಿ ಕಿವಿ ಮಾತು ಹೇಳಿದರು.
ಪ್ರತ್ಯೇಕ ರಾಜ್ಯ ನಮ್ಮ ಗುರಿಯಲ್ಲ. ನಮ್ಮ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವಂತೆ ಒತ್ತಡ ಹೇರಲು ಹೋರಾಟ ಅನಿವಾರ್ಯವಾಗಿದೆ. ಕೃಷ್ಣಾ ಕೊಳ್ಳದ ಯೋಜನೆಗಳು, ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ತಿಳಿಸಿದರು.