ಕರ್ನಾಟಕ

karnataka

ದಲಿತ ಸಮುದಾಯದ ಪ್ರತಿಕ್ರಿಯೆ ಬರುವ ಮುನ್ನವೇ ಹೈಕಮಾಂಡ್ ಎಚ್ಚೆತ್ತುಕೊಳ್ಳುವುದು ಒಳ್ಳೆಯದು: ಪರಮೇಶ್ವರ್

By

Published : May 18, 2023, 4:43 PM IST

ಸಿದ್ದರಾಮಯ್ಯ ಅವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಲಿ ಎಂದು ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.

ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್
ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್

ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಬೆಂಗಳೂರು :ನಾನು ಸಿಎಂ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗ ಹೈಕಮಾಂಡ್ ಅವರು ಘೋಷಣೆ ಮಾಡಿದ್ದಾರೆ. ಮುಂದೆ ಏನಾದರೂ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ನೋಡೋಣ. ಸಿದ್ದರಾಮಯ್ಯ ಅವರು ನಮ್ಮ ಪಕ್ಷದಲ್ಲಿ ಎರಡನೇ ಬಾರಿ ಸಿಎಂ ಆಗಿದ್ದಾರೆ. ಒಳ್ಳೆಯ ಆಡಳಿತ ನೀಡಲಿ. ನಮ್ಮನ್ನು ವಿಶ್ವಾಸಕ್ಕೆ ಪಡೆದುಕೊಂಡು ಮುಂದುವರೆಯಲಿ ಎಂದು ಹೇಳಿದ್ದಾರೆ.

ದಲಿತ ಸಮುದಾಯ ನಿರೀಕ್ಷೆ ಬಹಳ ದೊಡ್ಡದಿದೆ. ಅದನ್ನು ಅರ್ಥ ಮಾಡಿಕೊಂಡು ವರಿಷ್ಠರು ತೀರ್ಮಾನ ಮಾಡ್ತಾರೆ. ಮಾಡದೇ ಹೋದರೆ ಸ್ವಾಭಾವಿಕ ಸಮುದಾಯದ ಪ್ರತಿಕ್ರಿಯೆ ಇದ್ದೆ ಇರುತ್ತದೆ. ಪ್ರತಿಕ್ರಿಯೆ ಬರುವ ಮುಂಚೆ ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎಂದು ಪರೋಕ್ಷವಾಗಿ ವರಿಷ್ಠರಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.

ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಟ್ವೀಟ್​ ಮಾಡಿರುವುದು

ಹರಿಪ್ರಸಾದ್ ಅಭಿನಂದನೆ : ಸಿಎಂ ಹಾಗೂ ಡಿಸಿಎಂ ಆಗಿ ನಿಯೋಜಿತರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದ ಜನರ ಭವಿಷ್ಯತ್ತಿಗೆ ಕಾಂಗ್ರೆಸ್ ಕುಟುಂಬ ನುಡಿದಂತೆ ನಡೆದುಕೊಳ್ಳುತ್ತೇವೆ. ಜನರ ನಿರೀಕ್ಷೆ ಹಾಗೂ ನಮ್ಮ ಭರವಸೆಯನ್ನ ಈಡೇರಿಸುವ ಮೂಲಕ ದೇಶಕ್ಕೆ ಮಾದರಿ ಆಡಳಿತವನ್ನ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿ ಹೇಳಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ, ಜನಪರ ಯೋಜನೆಗಳನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧ ಎಂದು ಹರಿಪ್ರಸಾದ್ ವಿವರಿಸಿದ್ದಾರೆ.

ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಟ್ವೀಟ್​ ಮಾಡಿರುವುದು

ಸಿದ್ದರಾಮಯ್ಯ ಟ್ವೀಟ್: ಎಐಸಿಸಿ ಇಂದ ಸಿಎಂ ಆಗಿ ತಮ್ಮ ಹೆಸರು ಘೋಷಣೆ ಆಗುತ್ತಿದ್ದಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

ದೆಹಲಿಯಿಂದ ನಿರ್ಗಮನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಉಭಯ ನಾಯಕರು ಸಂಜೆ 5.30ಕ್ಕೆ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಉಭಯ ನಾಯಕರೊಂದಿಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸಂಜೆ 7.30 ಕ್ಕೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಹಿಂಭಾಗದ ಇಂದಿರಾಗಾಂಧಿ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಎಂದು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಡಿಸಿಎಂ ಎಂದು ಔಪಚಾರಿಕವಾಗಿ ಶಾಸಕರ ಮುಂದೆ ರಾಷ್ಟ್ರೀಯ ನಾಯಕರು ಘೋಷಣೆ ಮಾಡಲಿದ್ದಾರೆ.

ನಾಳೆ ಮತ್ತೆ ದೆಹಲಿಗೆ : ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ಮತ್ತೆ ದೆಹಲಿಗೆ ತೆರಳಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಾಳೆ ತೆರಳುತ್ತಾರೆ. ಕ್ಯಾಬಿನೆಟ್​ ರಚನೆ ಸಂಬಂಧ ನಾಳೆ ಮತ್ತೆ ದೆಹಲಿಗೆ ಪ್ರವಾಸ ಬೆಳೆಸಲಿದ್ದು, ಸಂಪುಟಕ್ಕೆ ಮೊದಲ ಹಂತದಲ್ಲಿ 8 ರಿಂದ 10 ಹಿರಿಯ ಶಾಸಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ನಂತರ ಕುಳಿತು ಮಾತುಕತೆ ನಡೆಸಿ, ಜಾತಿ, ಸಂಘಟನೆಗೆ ಕೊಡುಗೆ ಬಗ್ಗೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್​ಗೆ ಬೆಂಬಲ ಸಿಕ್ಕ ಪ್ರದೇಶವಾರು ಸಚಿವ ಸ್ಥಾನ ಹಂಚಿಕೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಲಿದ್ದಾರೆ.

ಮೊದಲ ಹಂತದಲ್ಲಿ ಬಿ ಕೆ ಹರಿಪ್ರಸಾದ್, ಕೆ ಜೆ ಜಾರ್ಜ್, ಈಶ್ವರ್ ಖಂಡ್ರೆ, ಎಂ ಬಿ ಪಾಟೀಲ್, ಆರ್ ವಿ ದೇಶಪಾಂಡೆ, ರಾಮಲಿಂಗ ರೆಡ್ಡಿ, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಡಾ. ಜಿ ಪರಮೇಶ್ವರ್, ಕೆ ಹೆಚ್ ಮುನಿಯಪ್ಪ ಸಚಿವರಾಗುವ ಸಾಧ್ಯತೆ ಹೆಚ್ಚಿದೆ.

ಶಿವರಾಜ ತಂಗಡಗಿ ಪರ ಧ್ವನಿಯೆತ್ತಿದ ಭೋವಿ: ಶ್ರೀಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಆಗ್ರಹಿಸಿದ್ದಾರೆ. ಒಳಮೀಸಲಾತಿ ವಿರೋಧಿಸಿದ ಭೋವಿ ಬಂಜಾರ ಕೊರಮ ಕೊರಚ ಸಮುದಾಯಗಳು ಕಾಂಗ್ರೆಸ್​ಗೆ ಮತ ನೀಡಿದ್ದಾವೆ. ಈ ಸಮುದಾಯಗಳ ಸಾಂಘಿಕ ಶಕ್ತಿಯನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನ ನೀಡಲು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಮುನಿಸು ಮುಗಿಸಿ 'ಕೈ' ಜೋಡಿಸಿದ ಸಿದ್ದು, ಡಿಕೆಶಿ: ಜನಪರ ಆಡಳಿತದ ಭರವಸೆ

ABOUT THE AUTHOR

...view details