ಕರ್ನಾಟಕ

karnataka

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

By ETV Bharat Karnataka Team

Published : Oct 2, 2023, 3:19 PM IST

ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಗಾಂಧಿ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ
ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು :ಮಹಾತ್ಮ ಗಾಂಧಿ ಅವರ ತತ್ವ ಸಿದ್ಧಾಂತ, ಚಿಂತನೆಗಳು ನಮಗೆ ಮಾರ್ಗದರ್ಶಕವಾಗಿರಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಇಂದು (ಸೋಮವಾರ) ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಮಲ್ಲೇಶ್ವರ ಮಂಡಲ ಅಧ್ಯಕ್ಷೆ ಕಾವೇರಿ ಕೇದಾರನಾಥ್, ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗಾಂಧಿ ಮತ್ತು ಶಾಸ್ತ್ರಿ ಭಾವಚಿತ್ರಕ್ಕೆ ಗೌರವ ಸಮರ್ಪಣೆ ನಡೆಯಿತು.

"ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಸತ್ಯ ಮತ್ತು ಅಹಿಂಸೆಯ ಉನ್ನತ ಧ್ಯೇಯದೊಂದಿಗೆ ಗಾಂಧೀಜಿ ಅವರ ಚಿಂತನೆಗಳು ಇಂದು ಇಡೀ ಜಗತ್ತಿಗೆ ಸ್ಫೂರ್ತಿ ಮತ್ತು ಪ್ರೇರಣೆ ನೀಡಿವೆ. ಗಾಂಧೀಜಿ ಕಂಡ ಕನಸು ನನಸಾಗಿಸಲು ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಹಗಲಿರುಳು ಶ್ರಮಿಸುತ್ತಿದ್ದಾರೆ" ಎಂದು ಎನ್.ರವಿಕುಮಾರ್ ನುಡಿದರು.

"ಆಡಳಿತವನ್ನು ಗ್ರಾಮದತ್ತ ಕೊಂಡೊಯ್ದು, ಅಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮೀಣ ಮಟ್ಟದಲ್ಲಿಯೇ ಕೈಗೊಂಡು ಗ್ರಾಮ ಸ್ವರಾಜ್ಯದಿಂದ ರಾಮರಾಜ್ಯ ಮಾಡಲು ಶ್ರಮಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್‍ನವರು ಗಾಂಧೀಜಿ ಅವರ ಯಾವುದೇ ತತ್ವ, ಸಿದ್ಧಾಂತ, ಚಿಂತನೆಗಳನ್ನು ಪಾಲಿಸದೇ ಕೇವಲ ಅವರ ಗಾಂಧಿ ಹೆಸರನ್ನು ಉಲ್ಲೇಖಿಸುತ್ತಾ ರಾಜಕೀಯ ಮಾಡುತ್ತಿದ್ದಾರೆ" ಎಂದು ಟೀಕಿಸಿದರು

ಗಾಂಧೀಜಿ ತತ್ವ, ಸಿದ್ಧಾಂತದ ವಿರುದ್ಧ ಕಾಂಗ್ರೆಸ್: "ಮಹಾತ್ಮ ಗಾಂಧಿಗೆ ಹಿಂದುತ್ವದ ಬಗ್ಗೆ ಅಪಾರ ಗೌರವ ಇತ್ತು. ಆದರೆ, ಕಾಂಗ್ರೆಸ್ ಪಕ್ಷದವರು ಹಿಂದುತ್ವ ಎಂದರೆ ಕೋಮುವಾದ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಗಾಂಧಿ ಕೊನೆಯುಸಿರೆಳೆಯುವ ಸಂದರ್ಭದಲ್ಲಿ ಹೇರಾಮ್ ಎಂದು ಸಂಬೋಧಿಸಿ ಜೀವತ್ಯಾಗ ಮಾಡಿದರು. ಆದರೆ, ಕಾಂಗ್ರೆಸ್ ಪಕ್ಷದವರು ರಾಮನಿಗೆ ವಿರೋಧ ವ್ಯಕ್ತಪಡಿಸಿದರು. ಹಾಗಾಗಿ ಕಾಂಗ್ರೆಸ್ ಪಕ್ಷವೇ ಗಾಂಧೀಜಿ ತತ್ವ ಸಿದ್ಧಾಂತದ ವಿರುದ್ಧ ಇದೆ. ಗಾಂಧೀಜಿ ಮದ್ಯಪಾನವನ್ನು ವಿರೋಧಿಸಿದ್ದರು. ಕಾಂಗ್ರೆಸ್ ಸರಕಾರ ಪ್ರತಿ ಪಂಚಾಯಿತಿಗೆ ಒಂದು ಮದ್ಯದಂಗಡಿ ತೆರೆಯಲು ಹೊರಟಿರುವುದು ದುರಂತ ಅಲ್ಲವೇ? ಇದರಿಂದ ಗ್ರಾಮಗಳು ರಾಮರಾಜ್ಯವಾಗಲು ಹೇಗೆ ಸಾಧ್ಯ" ಎಂದು ಪ್ರಶ್ನಿಸಿದರು.

ಗಾಂಧೀಜಿ ಅವಹೇಳನಕ್ಕೆ ಅವಕಾಶವಿಲ್ಲ- ಸಿಎಂ: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಹಲವು ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಯಾವುದೇ ಕಾರಣಕ್ಕೂ ಮಹಾತ್ಮ ಗಾಂಧೀಜಿಯವರ ಅವಹೇಳನಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಯಾರಾದರೂ ಅವಹೇಳನದಂತಹ ಪ್ರಯತ್ನಕ್ಕೆ ಮುಂದಾದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಗಾಂಧಿ ಅವಹೇಳನಕ್ಕೆ ಅವಕಾಶ ನೀಡಲ್ಲ, ಅವಹೇಳನ ಮಾಡಿದಲ್ಲಿ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ..!

ABOUT THE AUTHOR

...view details