ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು, ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ, ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ರದ್ದು (ಪಿಎಫ್ಐ ) ಸೇರಿದಂತೆ ಕಳೆದ ಒಂದು ವರ್ಷದಲ್ಲಿ ಹಲವು ಮಹತ್ವದ ಆದೇಶಗಳನ್ನು ರಾಜ್ಯ ಹೈಕೋರ್ಟ್ ನೀಡಿದೆ. ಅವುಗಳಲ್ಲಿ ಪ್ರಮುಖ ಆದೇಶಗಳ ಮಾಹಿತಿ ಇಲ್ಲಿದೆ ನೋಡಿ.
ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್:ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಮಾಡಿ 2016 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಆ ಮೂಲಕ ಈ ಹಿಂದೆ ಇದ್ದ ಲೋಕಾಯುಕ್ತ ಸಂಸ್ಥೆಗೆ ಮತ್ತೆ ಅಧಿಕಾರ ಸಿಕ್ಕಂತಾಗಿದೆ. ಜತೆಗೆ, ಎಸಿಬಿ ಪೊಲೀಸರು ದಾಖಲಿಸಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತ ತನಿಗೆ ವಹಿಸಿ ಆದೇಶಿಸಿದೆ.
ಹಿಜಾಬ್ ಅಗತ್ಯವಿಲ್ಲ: ಇಸ್ಲಾಂ ಧರ್ಮದಲ್ಲಿ ಮಹಿಳೆಯರು ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆ ಅಲ್ಲ. ಹೀಗಾಗಿ, ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿರ್ಬಂಧಿಸಿದ್ದ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರ ಸಂಹಿತೆ ಜಾರಿ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದರಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಅವಕಾಶವಿಲ್ಲ.
ಇದನ್ನೂ ಓದಿ:ಹೈಕೋರ್ಟ್ ಆದೇಶದನ್ವಯ ಎಸಿಬಿ ರದ್ದು ಮಾಡಿ ಸರ್ಕಾರ ಅಧಿಕೃತ ಆದೇಶ
ಪಿಎಫ್ಐ ರದ್ದು:ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈಜೋಡಿಸಿದ್ದ ಆರೋಪದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ರದ್ದು ಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಜತೆಗೆ, ದೇಶದ್ರೋಹ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) 1967 ಅಡಿ ಕೇಂದ್ರ ಸರ್ಕಾರಕ್ಕೆ ಅವಕಾಶವಿದೆ ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಸಿಡಿ ಪ್ರಕರಣ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಯುವತಿ ದಾಖಲಿಸಿದ್ದ ಅತ್ಯಾಚಾರ ಆರೋಪ ದೂರಿನ ತನಿಖಾ ವರದಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಹೈಕೋರ್ಟ್ ಅನುಮತಿ ನೀಡಿತ್ತು.