ಬೆಂಗಳೂರು :ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಾಯಿಟೋಣಿ ಗ್ರಾಮದ ಸರ್ಕಾರಿ ಕೆರೆಗೆ ಮತ್ತು ಖರಾಬು ಜಮೀನಿಗೆ ಸೇರಿದ ಸುಮಾರು 28 ಎಕರೆ ಜಾಗವನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ಎಂ.ಟಿ ಬಾಬು ಸೇರಿದಂತೆ ತಾಯಿಟೋಣಿ ಗ್ರಾಮದ 10 ಮಂದಿ ನಿವಾಸಿಗಳು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಪ್ರತಿವಾದಿಗಳಾದ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ, ಸಣ್ಣ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ, ದಾವಣಗೆರೆ ನಗರ ಕಾರ್ಯಕಾರಿ ಎಂಜಿನಿಯರ್, ಜಿಲ್ಲಾಧಿಕಾರಿ, ಉಪ ವಲಯದ ಉಪ ವಿಭಾಗಾಧಿಕಾರಿ ಮತ್ತು ಒತ್ತುವರಿದಾರರು ಎನ್ನಲಾದ ಹನುಮಂತ ರೆಡ್ಡಿ, ಬಾಬುರೆಡ್ಡಿ, ರಾಜಶೇಖರ ರೆಡ್ಡಿ ಮತ್ತು ಪ್ರಹ್ಲಾದ್ ರೆಡ್ಡಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.