ಕರ್ನಾಟಕ

karnataka

ಶಾಸಕ ಎಂ.ಕೃಷ್ಣಪ್ಪ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ: ತೆರವು ವರದಿ ಕೇಳಿದ ಹೈಕೋರ್ಟ್

By

Published : Feb 17, 2021, 7:40 PM IST

ಶಾಸಕ ಎಂ. ಕೃಷ್ಣಪ್ಪ ಅವರಿಗೆ ಸೇರಿದ್ದು ಎನ್ನಲಾದ ರೈಂಬೋ ಹೋಟೆಲ್ ನಿರ್ಮಾಣಕ್ಕಾಗಿ ಉತ್ತರಹಳ್ಳಿ ಕೆರೆಯ 1.9 ಎಕರೆ ಭೂಮಿಯನ್ನು ಒತ್ತುವರಿ ಮಾಡಲಾಗಿದೆ ಎಂದು ಭೂಮಾಪನ ಇಲಾಖೆ ಅಧಿಕಾರಿಗಳು ವರದಿ ನೀಡಿದೆ. ಈ ಬಗ್ಗೆ ತೆರವು ಮಾಡಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

Highcour
ಹೈಕೋರ್ಟ್

ಬೆಂಗಳೂರು:ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರಿಗೆ ಸೇರಿದ್ದು ಎನ್ನಲಾದ ರೈಂಬೋ ಹೋಟೆಲ್ ನಿರ್ಮಾಣಕ್ಕಾಗಿ ಉತ್ತರಹಳ್ಳಿ ಕೆರೆಯ 1.9 ಎಕರೆ ಭೂಮಿಯನ್ನು ಒತ್ತುವರಿ ಮಾಡಲಾಗಿದೆ ಎಂದು ಭೂಮಾಪನ ಇಲಾಖೆ ಅಧಿಕಾರಿಗಳು ವರದಿ ನೀಡಿದ್ದು, ಈ ಒತ್ತುವರಿ ತೆರವು ಮಾಡಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ನಗರದ ಪ್ರಜಾ ಹಕ್ಕುಗಳ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸರ್ವೆ ವರದಿಯಂತೆ ರೈಂಬೋ ಹೋಟೆಲ್ ಕಟ್ಟಡ ನಿರ್ಮಾಣ, ರಸ್ತೆ ಹಾಗೂ ಅದರ ಪಾರ್ಕ್​ಗೆ ಒಟ್ಟು 1.9 ಎಕರೆ ಭೂಮಿಯನ್ನು ಒತ್ತುವರಿ ಮಾಡಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಒತ್ತುವರಿ ತೆರವಿಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ವಕೀಲರು ಉತ್ತರಿಸಿ, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಸ್ಥಳೀಯ ತಹಶೀಲ್ದಾರ್​ಗೆ ಸೂಚಿಸಲಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮಂದೂಡಿದ ಪೀಠ, ಮಾ.17ರೊಳಗೆ ಒತ್ತುವರಿ ತೆರವಿಗೆ ಅಗತ್ಯ ಕ್ರಮ ಜರುಗಿಸಿ ಆ ಕುರಿತ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತು.

ಅರ್ಜಿದಾರರ ಆರೋಪ:ಬನಶಂಕರಿ 5ನೇ ಹಂತ ನಿರ್ಮಾಣಕ್ಕಾಗಿ ಬಿಡಿಎ 1988ರಲ್ಲಿ ನೋಟಿಫೈ ಮಾಡಿದ್ದ ಉತ್ತರಹಳ್ಳಿಯ ಸರ್ವೆ 103/1ರಲ್ಲಿನ 36 ಗುಂಟೆ ಹಾಗೂ 103/2ರಲ್ಲಿನ 39 ಗುಂಟೆ ಭೂಮಿಯನ್ನು ಎಂ. ಕೃಷ್ಣಪ್ಪ ಅವರು ಅಕ್ರಮವಾಗಿ 1994ರಲ್ಲಿ ಖರೀದಿಸಿದ್ದರು. ಬಳಿಕ 2007ರಲ್ಲಿ ಈ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದರು. ಆ ಬಳಿಕ ಇವೇ ಜಮೀನುಗಳ ಪಕ್ಕದಲ್ಲಿದ್ದ ಉತ್ತರಹಳ್ಳಿ ಕೆರೆಗೆ ಸೇರಿದ ಸರ್ವೆ ನಂಬರ್ 111ರಲ್ಲಿನ 15.16 ಎಕರೆ ಭೂಮಿಯನ್ನು ರೈನ್​ಬೋ ಹೋಟೆಲ್ ನಿರ್ಮಾಣಕ್ಕಾಗಿ ಒತ್ತುವರಿ ಮಾಡಿದ್ದಾರೆ.

ಅಲ್ಲದೇ, ಉತ್ತರಹಳ್ಳಿ ಹೋಬಳಿಯ ವಡ್ಡರಪಾಳ್ಯ ಗ್ರಾಮದ ಗೋಮಾಳಕ್ಕೆ ಸೇರಿದ ಸರ್ವೆ ನಂಬರ್ 32 ರಿಂದ 40ವರೆಗಿನ (ಹಳೆ ಸರ್ವೆ ನಂಬರ್ 8) 10ಎಕರೆ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಲ್ಲಿ ನಿವೇಶನಗಳನ್ನು ನಿರ್ಮಿಸಿ ಮಾರಾಟ ಮಾಡಿದ್ದಾರೆ. ಈ ಸಂಬಂಧ ಸಿಎಂ, ಕಂದಾಯ ಸಚಿವರು, ಸ್ಪೀಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹದಳ ಸೇರಿದಂತೆ ಸಂಬಂಧಿಸಿದ ಪ್ರಾಧಿಕಾರಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಒತ್ತುವರಿ ತೆರವು ಮಾಡುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details