ಕರ್ನಾಟಕ

karnataka

ಇಸ್ರೋ ಅಧ್ಯಕ್ಷ ಸೋಮನಾಥ್, ಮಾಜಿ ಪಿಎಂ ದೇವೇಗೌಡರಿಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

By ETV Bharat Karnataka Team

Published : Sep 28, 2023, 7:03 AM IST

ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತು ಮಾಜಿ ಪಿಎಂ ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಬೆಂಗಳೂರು ವಿವಿ ನಿರ್ಧರಿಸಿದೆ.

somanath
ಇಸ್ರೋ ಅಧ್ಯಕ್ಷ ಸೋಮನಾಥ್

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯ ಆಯ್ಕೆ ಶಿಫಾರಸ್ಸಿಗೆ ವಿವಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದು, ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಇಬ್ಬರೂ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.

ಇದೇ ತಿಂಗಳ 29 ರಂದು (ನಾಳೆ) ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ಆಯೋಜಿಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಂದ್ ಮಾಡುತ್ತಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ ಅವರು ಮಾಡಿದ ಅಪೂರ್ವ ಸಾಧನೆ ಮತ್ತು ರೈತನ ಮಗನಾಗಿ ಮಾಜಿ ಪ್ರಧಾನಿ ದೇವೇಗೌಡರು ಅತ್ಯುನ್ನತ ಸ್ಥಾನಕ್ಕೇರಿ ನಾಡಿಗೆ ಸಲ್ಲಿಸಿದ ಸೇವೆ ಪರಿಗಣಿಸಿ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.

ಇದನ್ನೂ ಓದಿ : ಮಂಗಳೂರು ವಿವಿ 41ನೇ ಘಟಿಕೋತ್ಸವ : ಪಿಹೆಚ್​ಡಿ ಪಡೆದ 80ರ ವೃದ್ಧ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ:ಇನ್ನು ಕಳೆದ ಜುಲೈ ತಿಂಗಳಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ 33ನೇ ವರ್ಷದ ಘಟಿಕೋತ್ಸವ ಸಂಭ್ರಮದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಿ, 141 ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ ವಿತರಿಸಲಾಗಿತ್ತು. ಮೊದಲು ಉಡುಪಿಯ ಸದಾನಂದ ಶೆಟ್ಟಿ, ವಿಜಯಪುರದ ಸಂಗೀತ ಕ್ಷೇತ್ರದ ಸಾಧನೆಗಾಗಿ ಕಲಕೇರಿ ರಾಜಗುರು ಗುರುಸ್ವಾಮಿ ಹಾಗೂ ಹೊಳಲ್ಕರೆ ಶಾಸಕ ಎಂ.ಚಂದ್ರಪ್ಪ ಅವರ ಗ್ರಾಮೀಣಾಭಿವೃದ್ಧಿ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ :ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್ , 141 ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ

ಬಿ ಎಸ್ ಯಡಿಯೂರಪ್ಪಗೆ ಡಾಕ್ಟರೇಟ್ : ಹಾಗೆಯೇ, ಜುಲೈನಲ್ಲಿಯೇ ರೈತಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿ ಗ್ರಾಮದ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ಆವರಣದಲ್ಲಿ ನಡೆದ ಸುಗ್ಗಿ ಸಂಭ್ರಮ-8 (ಘಟಿಕೋತ್ಸವ) ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿವಿಯ ಪರವಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದರು. ಇದು ಕೃಷಿ ವಿವಿಯ ಎರಡನೇ ಗೌರವ ಡಾಕ್ಟರೇಟ್ ಪ್ರಶಸ್ತಿಯಾಗಿತ್ತು. ಬಳಿಕ, ಘಟಿಕೋತ್ಸವದಲ್ಲಿ ಆರು ಜನ ವಿದ್ಯಾರ್ಥಿಗಳಿಗೆ ಪಿಹೆಚ್​​ಡಿ ಪ್ರದಾನ ಮಾಡಲಾಗಿತ್ತು.

ಇದನ್ನೂ ಓದಿ :ಕೃವಿವಿ 36ನೇ ಘಟಿಕೋತ್ಸವ : ತುಳಸಿಗೌಡ, ಅಬ್ದುಲ್​ ಖಾದರ್​ ಇಮಾಮ್‍ ಸಾನ್​ ನಡಕಟ್ಟಿಗೆ ಗೌರವ ಡಾಕ್ಟರೇಟ್ ಪ್ರದಾನ

ABOUT THE AUTHOR

...view details