ಕರ್ನಾಟಕ

karnataka

ಕೇಂದ್ರದ ಐದು ಕೆಜಿ ಜೊತೆ ರಾಜ್ಯದಿಂದ ಐದು ಕೆಜಿ ಸೇರಿ 10 ಕೆಜಿ ಉಚಿತ ಅಕ್ಕಿ ವಿತರಣೆ: ಬಜೆಟ್​​ನಲ್ಲೇ ಸ್ಪಷ್ಟೀಕರಣ

By

Published : Jul 8, 2023, 7:50 AM IST

ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರದ 5 ಕೆಜಿ ಅಕ್ಕಿ ಜೊತೆಗೆ ರಾಜ್ಯದಿಂದ 5 ಕೆಜಿ ಸೇರಿ 10 ಕೆಜಿ ಉಚಿತ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

karnataka-budget-2023-10-kg-free-rice-from-state-govt-along-with-central-govt-rice
ಕೇಂದ್ರದ ಐದು ಕೆಜಿ ಜೊತೆ ರಾಜ್ಯದಿಂದ ಐದು ಕೆಜಿ ಸೇರಿ 10 ಕೆಜಿ ಉಚಿತ ಅಕ್ಕಿ ವಿತರಣೆ: ಬಜೆಟ್​​ನಲ್ಲೇ ಸ್ಪಷ್ಟೀಕರಣ

ಬೆಂಗಳೂರು: ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ 10 ಕೆಜಿ ಅಕ್ಕಿ ವಿಚಾರದಲ್ಲಿ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಕೇಂದ್ರದ ಐದು ಕೆಜಿ ಅಕ್ಕಿ ಜೊತೆ ರಾಜ್ಯ ಐದು ಕೆಜಿ ಸೇರಿ 10 ಕೆಜಿ ಉಚಿತ ಅಕ್ಕಿ ವಿತರಣೆಗೆ ಬದ್ಧರಿದ್ದೇವೆ. ಅಕ್ಕಿ ಲಭ್ಯವಾಗುವವರೆಗೂ ರಾಜ್ಯದ ಪಾಲಿನ ಅಕ್ಕಿಯ ಬದಲು ಹಣ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್​​ನಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಅನ್ನಭಾಗ್ಯಕ್ಕೆ ಸೀಮಿತವಾದ ಅನುದಾನವನ್ನು ಪ್ರಕಟಿಸಲಾಗಿದೆ. ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರದಿಂದ ಒದಗಿಸುತ್ತಿರುವ ಐದು ಕೆ.ಜಿ. ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದಿಂದ ಒದಗಿಸುವ ಹೆಚ್ಚುವರಿ ಐದು ಕೆ.ಜಿ. ಸೇರಿದಂತೆ ಒಟ್ಟಾರೆ 10 ಕೆ.ಜಿ. ಆಹಾರ ಧಾನ್ಯವನ್ನು ಪ್ರತಿ ತಿಂಗಳು ವಿತರಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಆದರೆ ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡುವ ಮೂಲಕ ಬಡವರ ಅನ್ನ ಕಸಿಯುವ ಕೆಲಸ ಮಾಡುತ್ತಿರುವುದು ದುರದೃಷ್ಟಕರ ಹಾಗೂ ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ನಂಬಿಕೆಯನ್ನೇ ಬುಡಮೇಲು ಮಾಡುವಂತಹ ಬೆಳವಣಿಗೆ. ಶೀಘ್ರವೇ ಕೇಂದ್ರ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿ, ಲಭ್ಯವಿರುವ ಆಹಾರ ಧಾನ್ಯವನ್ನು ಬಡವರಿಗೆ ಹಂಚಲು ಅನುವು ಮಾಡಿಕೊಡುವುದು ಎಂಬುದು ನಮ್ಮ ಆಶಯ ಎಂದಿದ್ದಾರೆ.

ನಾವು ನೀಡಿರುವ ಭರವಸೆಯಂತೆ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದೇವೆ. ಭತ್ತ ಬೆಳೆಯುವ ವಿವಿಧ ರಾಜ್ಯಗಳನ್ನು ಸಂಪರ್ಕಿಸಿದ್ದು, ಅಕ್ಕಿ ಖರೀದಿಸಲು ಮಾತುಕತೆ ನಡೆಸುತ್ತಿದ್ದೇವೆ. ಅಲ್ಲಿಯವರೆಗೂ ಪ್ರತಿ ಕಿಲೋ ಆಹಾರ ಧಾನ್ಯಕ್ಕೆ ವೆಚ್ಚವಾಗುವ ಮೊತ್ತವನ್ನು ಜುಲೈ ತಿಂಗಳಿನಿಂದಲೇ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು. ಇದರಿಂದ ಫಲಾನುಭವಿಗಳು ಮಾರುಕಟ್ಟೆಯಿಂದ ಧಾನ್ಯಗಳನ್ನು ಖರೀದಿಸಬಹುದು. ನಾವು ಯಾವುದೇ ಕಾರಣಕ್ಕೂ ನೀಡಿರುವ ವಾಗ್ದಾನದಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ಬಜೆಟ್ ನಲ್ಲಿಯೇ ಸ್ಪಷ್ಟಪಡಿಸಲಾಗಿದೆ.

ಅನ್ನಭಾಗ್ಯ ಯೋಜನೆಯ ಮೂಲಕ ಬಡತನ ರೇಖೆಗಿಂತ ಕೆಳಗಿರುವ 4.42 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಇದಕ್ಕೆ ವರ್ಷಕ್ಕೆ ಸುಮಾರು 10,000 ಕೋಟಿ ರೂ.ಗಳಷ್ಟು ವೆಚ್ಚ ಮಾಡಲಾಗುತ್ತದೆ. ರಾಜ್ಯ ಸರ್ಕಾರವು ಗುರುತಿಸಿರುವ ಸುಮಾರು 40 ಲಕ್ಷ ಬಡತನ ರೇಖೆಗಿಂತ ಕೆಳಗಿರುವ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡದೇ ಇರುವುದರಿಂದ ಅವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆ.ಜಿ. ಆಹಾರ ಧಾನ್ಯಗಳನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರದ ವತಿಯಿಂದ ಖರೀದಿಸಿ ವಿತರಿಸಲು ವಾರ್ಷಿಕ 1,680 ಕೋಟಿ ರೂ. ಭರಿಸಲಾಗುವುದು ಎಂದು ತಿಳಿಸಿದೆ.

ಯುವ ಸಬಲೀಕರಣ ಮತ್ತು ಕ್ರೀಡೆ :ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್‌ಬಾಲ್‌ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್‌ ವೇಲೋಡ್ರೋಮ್‌ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ, ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ಒದಗಿಸಲು 10 ಕೋಟಿ ರೂ. ಅನುದಾನವನ್ನು ಒದಗಿಸುವುದಾಗಿ ಬಜೆಟ್ ನಲ್ಲಿ ಹೇಳಲಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಐದು ಕೋಟಿ ರೂ. ಅನುದಾನ, ಮತ್ತು ಕ್ರೀಡಾಪಟುಗಳಿಗೆ ತಂಗಲು ಅನುಕೂಲವಾಗುವಂತೆ ಸುಸಜ್ಜಿತವಾದ ಕ್ರೀಡಾ ವಸತಿ ನಿಲಯವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು 10 ಕೋಟಿ ರೂ. ಅನುದಾನ ನೀಡುವ ಘೋಷಣೆ ಮಾಡಲಾಗಿದೆ.

ಒಲಂಪಿಕ್‌ ಹಾಗೂ ಪ್ಯಾರಾಲಿಂಪಿಕ್‌ ವಿಜೇತರಿಗೆ ಗ್ರೂಪ್‌ ಎ ಹುದ್ದೆ ಮತ್ತು ಏಷಿಯನ್‌ ಹಾಗೂ ಕಾಮನ್‌ ವೆಲ್ತ್‌ ಕ್ರೀಡಾ ವಿಜೇತರಿಗೆ ಗ್ರೂಪ್‌-ಬಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಪ್ರಸಕ್ತ ಸಾಲಿನಿಂದ ಕ್ರಮಕೈಗೊಳ್ಳಲಾಗುವುದು.

ಕ್ರೀಡಾಪಟುಗಳಿಗೆ ಪೊಲೀಸ್‌ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಶೇ. 3 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು. ಕರ್ನಾಟಕ ಈಜು ಅಸೋಸಿಯೇಷನ್‌ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಭಾವಂತ ಈಜು ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ವಿಯಾಗಿ ಭಾಗವಹಿಸಲು ತರಬೇತಿಯನ್ನು ನೀಡುವ ಸಲುವಾಗಿ ಮುಂದಿನ ಐದು ವರ್ಷಗಳವರೆಗೆ ಪ್ರತಿ ವರ್ಷ ಎರಡು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

ಇದನ್ನೂ ಓದಿ :ಬಜೆಟ್ ಅಧಿವೇಶನದಲ್ಲಿ‌ ಶಾಸಕಿಯ ಸ್ಥಾನದಲ್ಲಿ ಕುಳಿತ ಅನಾಮಿಕ : ಪೊಲೀಸ್ ಭದ್ರತಾ ವೈಫಲ್ಯವೇ..? ವರದಿ‌ ಕೇಳಿದ ಹೋಮ್ ಮಿನಿಸ್ಟರ್

ABOUT THE AUTHOR

...view details