ಕರ್ನಾಟಕ

karnataka

ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ನಡುವೆ ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಒಪ್ಪಿಗೆ

By

Published : Dec 9, 2020, 3:38 PM IST

Updated : Dec 9, 2020, 4:40 PM IST

Land Reform Amendment
ವಿಧಾನಸಭೆ

15:34 December 09

ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ

ವಿಧಾನಸಭೆಯಲ್ಲಿ ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ

ಬೆಂಗಳೂರು :ವಿಧಾನಪರಿಷತ್​ನಿಂದ ತಿದ್ದುಪಡಿಗಳೊಂದಿಗೆ ಪುನರ್ ಪರ್ಯಾವಲೋಚನೆಗೆ ಮಂಡಿಸಲಾಗಿದ್ದ ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ - 2020 ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ನಡುವೆ ಒಪ್ಪಿಗೆ ದೊರೆಯಿತು.

ಕಂದಾಯ ಸಚಿವ ಆರ್. ಅಶೋಕ್ ಮಂಡಿಸಿದ ಈ ವಿಧೇಯಕಕ್ಕೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು. ಆದರೆ, ಜೆಡಿಎಸ್ ಸದಸ್ಯರು ಮೌನವಹಿಸಿದ್ದರು. ಸಭಾತ್ಯಾಗದ ನಡುವೆ ಸದನ ಭೂ ಸುಧಾರಣಾ (2ನೇ ತಿದ್ದುಪಡಿ) ವಿಧೇಯಕಕ್ಕೆ ಒಪ್ಪಿಗೆ ನೀಡಿತು.

ಇದಕ್ಕೂ ಮುನ್ನ ವಿಧೇಯಕಕ್ಕೆ ಕೆಲವು ತಿದ್ದುಪಡಿಗಳನ್ನು ತಂದಿದ್ದು, ಪುನರ್ ಪರ್ಯಾವಲೋಚನೆ ಮಾಡಬೇಕೆಂದು ಕಾಂಗ್ರೆಸ್ ಹಿರಿಯ ಸದಸ್ಯ ಹೆಚ್.ಕೆ.ಪಾಟೀಲ್ ಒತ್ತಾಯಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಒಮ್ಮೆ ವಿಧೇಯಕ ಅಂಗೀಕಾರವಾದ ನಂತರ ತಿದ್ದುಪಡಿಗೆ ಅವಕಾಶವಿಲ್ಲ. ವಿಧಾನ ಪರಿಷತ್‍ನಲ್ಲಿ ಆಗಿರುವ ತಿದ್ದುಪಡಿಗೆ ಸೀಮಿತವಾಗಿದೆ. ಹೆಚ್.ಕೆ.ಪಾಟೀಲ್ ಅವರು ತಂದಿರುವ ತಿದ್ದುಪಡಿಗೆ ಅವಕಾಶವಿಲ್ಲ ಎಂದು ಹೇಳಿದರು.  

ಓದಿ:ವಿಧಾನ ಪರಿಷತ್ ಜಟಾಪಟಿ : ಕಲಾಪದಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆ

ಒಂದು ಹಂತದಲ್ಲಿ ಸಚಿವ ಮಾಧುಸ್ವಾಮಿ ಮತ್ತು ಪಾಟೀಲ್ ಅವರ ನಡುವೆ ಕೆಲಕಾಲ ಮಾತಿನ ವಾಗ್ವಾದ ನಡೆಯಿತು. ಆಡಳಿತ ಪಕ್ಷದ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಸಚಿವ ಆರ್.ಅಶೋಕ್ ಇದಕ್ಕೆ ದನಿಗೂಡಿಸಿ ಮಾತನಾಡಿದರು. ಹೆಚ್.ಕೆ.ಪಾಟೀಲ್ ಅವರ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು, ರಾಜ್ಯದ ರೈತರನ್ನು ನಿರ್ಗತಿಕರನ್ನಾಗಿ ಮಾಡುತ್ತಿದ್ದೀರಿ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದರು.

ಓದಿ:  ಪರಿಷತ್​ನಲ್ಲಿ ಮತ್ತೆ ಮಂಡನೆಯಾದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ

ಈ ನಡುವೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಹೆಚ್.ಕೆ.ಪಾಟೀಲ್ ಅವರು ತಂದಿರುವ ತಿದ್ದುಪಡಿ ಪ್ರಸ್ತಾವನೆ ನಿಯಮಗಳಡಿ ಬರುವುದಿಲ್ಲ. ಹಾಗಾಗಿ ತಿರಸ್ಕಾರ ಮಾಡಲಾಗಿದೆ ಎಂದು ರೂಲಿಂಗ್ ನೀಡಿದರು.ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರೊಂದಿಗೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಆಗ ಸಭಾಧ್ಯಕ್ಷರು ವಿಧೇಯಕವನ್ನು ಮತಕ್ಕೆ ಹಾಕಿದರು. ಧ್ವನಿಮತದ ಮೂಲಕ ಈ ವಿಧೇಯಕಕ್ಕೆ ಅನುಮೋದನೆ ದೊರೆಯಿತು.

Last Updated :Dec 9, 2020, 4:40 PM IST

ABOUT THE AUTHOR

...view details