ಕರ್ನಾಟಕ

karnataka

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ʼಕಾಸಿಗಾಗಿ ಪೋಸ್ಟಿಂಗ್' ಎಂದು ಹೆಚ್​ಡಿಕೆ ಟೀಕೆ.. ರಾಮಲಿಂಗಾರೆಡ್ಡಿ ತಿರುಗೇಟು!

By

Published : Jun 28, 2023, 1:47 PM IST

ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಅವರ ಟ್ವೀಟ್​ಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

HDK tweet On Congress govt
HDK tweet On Congress govt

ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು:ಪಂಚಗ್ಯಾರಂಟಿಗಳ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೇ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಮುಖ್ಯಮಂತ್ರಿ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆ ಎನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ. ಈ ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ಸರ್ಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರ್ಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಟೀಕಿಸಿದ್ದಾರೆ.

ಕುಮಾರಸ್ವಾಮಿ ಟ್ವೀಟ್​ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ: ಪೋಸ್ಟಿಂಗ್ ಹಾಕಲು ದುಡ್ಡು ಪಡೆಯಲಾಗುತ್ತಿದೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ ದಕ್ಷ ಅಧಿಕಾರಿಗಳನ್ನು ಹುಡುಕಿ ಪೋಸ್ಟಿಂಗ್ ನೀಡುತ್ತಿದ್ದೇವೆ. ಯಾವುದೇ ಭ್ರಷ್ಟಾಚಾರ ಕೂಡ ನಡೆದಿಲ್ಲ ಎಂದಿದ್ದಾರೆ.

ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ನಾವು ಆರೋಪ ಮಾಡಿ, ನಾವೇ ಭ್ರಷ್ಟಾಚಾರ ಮಾಡಲು ಸಾಧ್ಯವಾ?, ಅದೆಲ್ಲಾ ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದರು.

ಸರಿಯಾದ ಸಮಯಕ್ಕೆ ವೇತನ: ಇನ್ನು ಈ ತಿಂಗಳ ವೇತನಕ್ಕೆ ಸಾರಿಗೆ ನಿಗಮದಲ್ಲಿ ಹಣ ಇಲ್ಲದಿರೋ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸರ್ಕಾರದಿಂದ ನಮಗೆ ಮಹಿಳಾ ಪ್ರಯಾಣಿಕರು ಎಷ್ಟು ಓಡಾಡಿದ್ದಾರೆ ಅನ್ನೋದರ ಬಗ್ಗೆ ಮಾಹಿತಿ ಬೇಕು. ಅದರ ವೆಚ್ಚ ಮಾಹಿತಿ ನೀಡಲಿದ್ದೇವೆ. ಆ ಮೊತ್ತ ಸರ್ಕಾರ ಭರಿಸಲಿದೆ. ನಾಲ್ಕು ಸ್ವಾಮ್ಯದ ಸಂಸ್ಥೆಗಳಿಗೆ ವೇತನ ನೀಡಲಾಗುವುದು. ಊಹೆ ಮಾಡಿಕೊಂಡು ಹೇಳಿದ್ದಕ್ಕೆ ಉತ್ತರ ಕೊಡಲು ಆಗಲ್ಲ. ನಾವು ಸಂಬಳ ಕೊಡದೇ ಇದ್ದಾಗ ಕೊಡೊಲ್ಲ ಅಂತ ಹೇಳಿ, ನಾವು ಸರಿಯಾದ ಸಮಯಕ್ಕೆ ಸಂಬಳ ಕೊಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದೂರು ದಾಖಲಾದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ವಾಟ್ಸ್​ಆ್ಯಪ್​ ಯುನಿವರ್ಸಿಟಿ ಇದ್ದಂತೆ. ಬೆಳಗ್ಗೆಯಿಂದ ಸಂಜೆಯವರೆಗೂ ಸುಳ್ಳು ಸುದ್ದಿ ಕೊಡುವುದೇ ಅವರ ಕೆಲಸ. ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಕೆಲಸ ಸರಿ ಇದೆ ಎಂದು ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. ಸ್ಟೀಲ್ ಬ್ರಿಡ್ಜ್ ಯೋಜನೆ ಬಗ್ಗೆಯೂ ಪ್ರಸ್ತಾಪಿಸಿ, ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಅನ್ನುವುದಾದರೆ ನಾವು ಖಂಡಿತ ಆ ಯೋಜನೆಯನ್ನು ಮುಂದುವರೆಸುತ್ತೇವೆ ಎಂದರು.

ಚಾಮರಾಜನಗರ ಡಿಸಿ, ಎಡಿಸಿ, ವರ್ಗಾವಣೆ: ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ. ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್‌.ರಮೇಶ್ ಅವರನ್ನು ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದು ಚಾಮರಾಜನಗರ ಡಿಸಿಯಾಗಿ ಇನ್ನೂ ಯಾರನ್ನೂ ಸರ್ಕಾರ ನೇಮಕ ಮಾಡಿಲ್ಲ.

ಚಾಮರಾಜನಗರ ಹೆಚ್ಚುವರಿ ಡಿಸಿ ಹಾಗೂ ಮಲೆಮಹದೇಶ್ಚರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಕಾತ್ಯಾಯಿನಿದೇವಿ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದ್ದು ಇವರ ಜಾಗಕ್ಕೆ ಕೊಳ್ಳೇಗಾಲ ಎಸಿಯಾಗಿ ಬಡ್ತಿ ಹೊಂದಿದ್ದ ಗೀತಾ ಹುಡೇದಾ ಅವರನ್ನು ನೇಮಕ ಮಾಡಲಾಗಿದೆ. ಚಾಮರಾಜನಗರ ಎಡಿಸಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಗೀತಾ ಹುಡೇದಾ ಅಧಿಕಾರ ಸ್ವೀಕರಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದೂರು ದಾಖಲು.. ಪ್ರಿಯಾಂಕ್​ ಖರ್ಗೆ

ABOUT THE AUTHOR

...view details