ಕರ್ನಾಟಕ

karnataka

'ಮಹಾ'- ಕರ್ನಾಟಕಕ್ಕೆ 19ರಂದು ನಮೋ ಭೇಟಿ: ಚುನಾವಣೆ ಹೊಸ್ತಿಲಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

By

Published : Jan 17, 2023, 9:25 PM IST

PM to visit Karnataka and Maharashtra

ಜನವರಿ 19ರಂದು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಮೋದಿ ಆಗಮನ - ಯಾದಗಿರಿ ಮತ್ತು ಕಲಬುರಗಿಯಲ್ಲಿ ಮೋದಿ ಬರುವಿಕೆಗೆ ಸಕಲ ಸಿದ್ಧತೆ.

ನವದೆಹಲಿ​:ದೆಹಲಿಯಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಣಿ ನಡೆದಿದೆ. ಮುಂಬರುವ ಒಂಬತ್ತು ರಾಜ್ಯಗಳ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ ಎನ್ನಲಾಗಿದೆ. ಇನ್ನು ಕೆಲವೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ಇದ್ದು ಕೇಂದ್ರ ಬಿಜೆಪಿಯಿಂದ ಪ್ರಭಾವಿ ನಾಯಕರು ಪ್ರಚಾರಕ್ಕೆ ಬರಲಿದ್ದಾರೆ. ಕಾರ್ಯಕಾರಿಣಿ ವೇಳೆ ಮೋದಿ ಜೊತೆ ಯಡಿಯೂರಪ್ಪ ಅರ್ಧ ಗಂಟೆಗೂ ಹೆಚ್ಚು ಕಾಲ ಸಂವಾದ ಮಾಡಿದ್ದು ರಾಜ್ಯದ ಹಲವು ಕಾರ್ಯಕ್ರಮಗಳಿಗೆ ಆಹ್ವಾನಿಸಿದ್ದಾರೆ ಎಂದು ಹೇಳಲಾಗಿದೆ.

ಜನವರಿ 19 ಕರ್ನಾಟಕಕ್ಕೆ ಮೋದಿ:ಜನವರಿ 19 ರಂದು ಪ್ರಧಾನಿ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಕರ್ನಾಟಕದಲ್ಲಿ 10,800 ರೂ. ಕೋಟಿ ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ವೇಳೆ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಪ್ರಧಾನಿ ಭೇಟಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಸುಮಾರು ಐವತ್ತು ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಪ್ರಧಾನಿ ವಿತರಿಸಲಿದ್ದಾರೆ. ಜಲ ಜೀವನ್ ಮಿಷನ್ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಾರಾಯಣಪುರ ಎಡದಂಡೆ ಕಾಲುವೆ - ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಯೋಜನೆ ಮತ್ತು ಸೂರತ್ - ಚೆನ್ನೈ ಎಕ್ಸ್‌ಪ್ರೆಸ್‌ವೇ ಭಾಗವಾಗಿರುವ ಎರಡು ಗ್ರೀನ್‌ಫೀಲ್ಡ್ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಯಾದಗಿರಿ ಜಿಲ್ಲೆಯ ಕೊಡೇಕಲ್‌ನಲ್ಲಿ ನೀರಾವರಿ, ಕುಡಿಯುವ ನೀರು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ ಸುಮಾರು 2:15 ಗಂಟೆಗೆ ಕಲಬುರಗಿ ಜಿಲ್ಲೆಯ ಮಳಖೇಡ್‌ಗೆ ಆಗಮಿಸುವ ಪ್ರಧಾನಮಂತ್ರಿಯವರು ಅಲ್ಲಿ ಹೊಸದಾಗಿ ಘೋಷಣೆಯಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಮೋದಿ ಆಗಮನಕ್ಕೆ ಪೂರ್ವ ತಯಾರಿ: ಕಾರ್ಯಕ್ರಮಕ್ಕೆ ಬರುವ ಜನರಿಗೆ ಊಟದ ವ್ಯವಸ್ಥೆಗೆ ಈಗಾಗಲೇ ಆರ್​ ಅಶೋಕ್ ಸಭೆ ನಡೆಸಿದ್ದಾರೆ. ಊಟಕ್ಕೆ 200 ಕೌಂಟರ್ ಸ್ಥಾಪಿಸಲಾಗುತ್ತದೆ. 600 ಬಾಣಸಿಗರು ಇರಲಿದ್ದಾರೆ. ಜಿಲ್ಲೆಯ ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,582 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗುವುದು. ಪ್ರತಿ ಬಸ್‍ಗೆ ಮತ್ತು ಫಲಾನುಭವಿಗಳನ್ನು ನೋಡಿಕೊಳ್ಳಲು ಗ್ರಾಮ ಲೆಕ್ಕಿಗರನ್ನು ನಿಯೋಜಿಸಲಾಗುವುದು. ಮುಖ್ಯ ವೇದಿಕೆ ಜರ್ಮನ್ ಟೆಂಟ್‍ನಿಂದ ಹಾಕಲಾಗುವುದು, ಐದು ಕಡೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದರು.

ಮಹಾದಲ್ಲಿ ಮೋದಿ:ಮಹಾರಾಷ್ಟ್ರದಲ್ಲಿ 38,800 ಕೋಟಿ ರೂವಿನ ವಿವಿಧ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಇಲ್ಲಿನ ಮುಂಬೈ ಮೆಟ್ರೋ ರೈಲು ಮಾರ್ಗಗಳು 2A ಮತ್ತು 7 ನ್ನು ಉದ್ಘಾಟಿಸಲಿದ್ದಾರೆ. ಏಳು ಒಳಚರಂಡಿ ಸಂಸ್ಕರಣಾ ಘಟಕಗಳಿಗೆ ಶಂಕುಸ್ಥಾಪನೆ, ಮುಂಬೈನಲ್ಲಿ ರಸ್ತೆ ಕಾಂಕ್ರೀಟೀಕರಣ ಯೋಜನೆ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನ ಪುನರಾಭಿವೃದ್ಧಿಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ:ಜ.19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ: ಅಧಿಕಾರಿಗಳ ಜೊತೆ ಸಚಿವ ಆರ್ ಅಶೋಕ್ ಪೂರ್ವ ಸಿದ್ಧತೆ ​ಸಭೆ

ABOUT THE AUTHOR

...view details