ಕರ್ನಾಟಕ

karnataka

ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ.. ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅವಕಾಶವಿಲ್ಲ: ಹೈಕೋರ್ಟ್

By ETV Bharat Karnataka Team

Published : Sep 22, 2023, 7:12 PM IST

ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆಯಾಗಿದ್ದು, ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.

High Court
ಹೈಕೋರ್ಟ್

ಬೆಂಗಳೂರು:ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದನ್ನು ವಾಣಿಜ್ಯ ಚಟುವಟಿಕೆ ಎಂಬುದಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ತನ್ನ ಕೋಳಿ ಸಾಕಾಣಿಕೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಮ ಪಂಚಾಯ್ತಿ ಕ್ರಮ ಪ್ರಶ್ನಿಸಿ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿವಾಸಿ ಕೆ. ನರಸಿಂಹಮೂರ್ತಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯ ಪೀಠವು ಈ ಆದೇಶ ನೀಡಿದೆ.

ಜೊತೆಗೆ, ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದಕ್ಕಾಗಿ ಕಟ್ಟಡ ನಿರ್ಮಾಣ ಸಲುವಾಗಿ ಕೃಷಿ ಭೂಮಿಯನ್ನು ವಾಣಿಜ್ಯ ಭೂಮಿಯನ್ನಾಗಿ ಪರಿವರ್ತನೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇ. ಭಾಸ್ಕರ್ ರಾವ್ ಪ್ರಕರಣದಲ್ಲಿ ಹೈಕೋರ್ಟ್ ತಿಳಿಸಿದೆ. ಕೋಳಿ ಸಾಕಾಣಿಕೆ ಕೇಂದ್ರಕ್ಕಾಗಿ ನಿರ್ಮಾಣ ಮಾಡುವ ಕಟ್ಟಡವನ್ನು ಕನಾರ್ಟಕ ಗ್ರಾಮ ಸ್ವರಾಜ್ ಕಾಯ್ದೆ-4ರ (ಎ)(2) ಅಡಿಯಲ್ಲಿ ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಅವಕಾಶವಿಲ್ಲ. ಕೋಳಿ ಸಾಕಾಣಿಕೆ ಕೇಂದ್ರವಿರುವ ಭೂಮಿ ಕೃಷಿ ಭೂಮಿಯಾಗಿಯೇ ಮುಂದುವರೆಯಲಿದ್ದು, ಅದನ್ನು ವಾಣಿಜ್ಯ ಭೂಮಿಯನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಅರ್ಜಿದಾರರಿಂದ ತೆರಿಗೆ ರೂಪದಲ್ಲಿ ಈಗಾಗಲೇ ಸಂಗ್ರಹಿಸಿರುವ 59,551 ರೂ.ಗಳನ್ನು ಹಿಂದಿರುಗಿಸಬೇಕು ಎಂದೂ ನಿರ್ದೇಶನ ನೀಡಿದೆ. ಇಷ್ಟೇ ಅಲ್ಲ, ಗ್ರಾಮ ಪಂಚಾಯ್ತಿ ಜಾರಿ ಮಾಡಿದ್ದ ನೊಟೀಸ್ಅ​ನ್ನು ರದ್ದುಪಡಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು?:ಅರ್ಜಿದಾರರ ಕೆ.ನರಸಿಂಹಮೂರ್ತಿ ಅವರು, ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಸಂದ್ರ ಎಂಬ ಗ್ರಾಮದಲ್ಲಿ ನಾಲ್ಕು ಎಕರೆ ಜಮೀನನ್ನು ಹೊಂದಿದ್ದು, ಈ ಭಾಗದಲ್ಲಿ ಕೋಳಿ ಸಾಕಾಣಿಕೆ ಮಾಡುವ ಸಲುವಾಗಿ ಕಟ್ಟಡ ನಿರ್ಮಾಣ ಮಾಡುವುದು ಹಾಗೂ ವಿದ್ಯುತ್ ಸಂಪರ್ಕ ಪಡೆಯುವುದಕ್ಕಾಗಿ ನಿರಾಕ್ಷೇಪಣಾ ಪತ್ರಕ್ಕಾಗಿ ಗ್ರಾಮ ಪಂಚಾಯ್ತಿಗೆ ಮನವಿ ಸಲ್ಲಿಸಿದ್ದರು.

ಈ ಮನವಿ ಪರಿಗಣಿಸಿದ್ದ ಪಂಚಾಯ್ತಿ ಅಧಿಕಾರಿಗಳು, ಕೋಳಿ ಸಾಕಾಣಿಕೆ ಕೇಂದ್ರವು ಕೈಗಾರಿಕೆಗಳ ಅಡಿಯಲ್ಲಿ ಬರಲಿದ್ದು, ಅದನ್ನ ನಿರಾಕ್ಷೇಪಣಾ ಪತ್ರ ವಿತರಣೆ ಮಾಡುವುದಕ್ಕಾಗಿ 1.3 ಲಕ್ಷ ರೂ.ಗಳನ್ನು ಪಾವತಿ ಮಾಡಲೇಬೇಕು ಎಂದು ಸೂಚನೆ ನೀಡಿ ನೊಟೀಸ್ ನೀಡಿದ್ದರು. ಇದರಿಂದ ಅರ್ಜಿದಾರ 59,551 ಪಾವತಿ ಮಾಡಿದ್ದರು.

ನಂತರ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆಗೆ ಕೃಷಿ ಚಟುವಟಿಕೆಗಳಾಗಿದ್ದು, ಇದಕ್ಕಾಗಿ ನಿರಾಕ್ಷೇಪಣಾ ಪತ್ರ ಪಡೆಯುವುದು ಹಾಗೂ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ. ಈ ರೀತಿ ತೆರಿಗೆ ವಿಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಅಂಶ ಮನಗಂಡು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು, ಕೋಳಿ ಸಾಕಾಣಿಕೆ ಮಾಡುವುದು ವಾಣಿಜ್ಯ ಚಟುವಟಿಕೆಯಾಗಿದ್ದು, ಕೋಳಿ ಸಾಕಾಣಿಕೆ ಕೇಂದ್ರದ ಕಟ್ಟಡಕ್ಕೆ ವಾಣಿಜ್ಯ ತೆರಿಗೆ ವಿಧಿಸಬಹುದಾಗಿದೆ ಎಂದು ವಾದ ಮಂಡಿಸಿದ್ದರು. ಈ ವಾದವನ್ನು ತಳ್ಳಿ ಹಾಕಿರುವ ಹೈಕೋರ್ಟ್, ಗ್ರಾಮ ಪಂಚಾಯ್ತಿಯ ನೊಟೀಸ್​ ರದ್ದು ಪಡಿಸಿದೆ.

ಇದನ್ನೂ ಓದಿ:ಮುಕ್ತ ವಿವಿಯ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣ : ಇಬ್ಬರು ವಿದ್ಯಾರ್ಥಿಗಳ ಬಂಧನ

ABOUT THE AUTHOR

...view details