ಬೆಳಗಾವಿ: ಚುನಾವಣೆ ಸಂದರ್ಭದಲ್ಲಿ ವರುಣಾ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದ ಅಧ್ಯಕ್ಷ ನಂಜಪ್ಪ ಎಂಬುವರು ತಮ್ಮ ತಂದೆಯ ಕೈಯಿಂದ ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆ ಕೊಡಿಸಿದ್ದರು ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ವಿರುದ್ಧದ ದೂರಿನ ಕುರಿತು ಕ್ರಮ ಕೈಗೊಳ್ಳದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ದಾಖಲೆಗಳ ಸಮೇತ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಸೆ.15ರಂದು ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಅವರು ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆ ಹಂಚಿದ್ದರಿಂದ ತಂದೆಯವರ ಗೆಲುವಿಗೆ ಸಹಕಾರಿಯಾಯಿತು ಎಂದು ಭಾಷಣ ಮಾಡಿದ್ದರು. ಸೆ. 21ರಂದು ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದೆವು. ಆದರೆ, 75 ದಿನಗಳಾದ್ರೂ ಕ್ರಮಕ್ಕೆ ಮುಂದಾಗದ ರಾಜ್ಯ ಚುನಾವಣಾಧಿಕಾರಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದರು.
ಸೆ.21ರಂದು ಸಲ್ಲಿಸಿದ್ದ ದೂರಿನ ಕುರಿತು ತಾವು ತೆಗೆದುಕೊಂಡ ಕ್ರಮದ ಬಗ್ಗೆ ದಾಖಲೆಗಳನ್ನು ನೀಡುವಂತೆ ಮುಖ್ಯ ಚುನಾವಣಾಧಿಕಾರಿಗೆ ಲಿಖಿತ ಉತ್ತರ ನೀಡುವಂತೆ ಅಕ್ಟೋಬರ್ 4ರಂದು ಅರ್ಜಿ ಸಲ್ಲಿಸಿದ್ದಕ್ಕೆ ಅ.25ರಂದು ಲಿಖಿತ ಉತ್ತರ ನೀಡಿರುವ ಅಧಿಕಾರಿಗಳು "ದೂರು ಅರ್ಜಿಯ ಕುರಿತು ಭಾರತ ಚುನಾವಣಾ ಆಯೋಗದ ಮಾರ್ಗದರ್ಶನವನ್ನು ಕೋರಲಾಗಿದೆ" ಎಂದು ತಿಳಿಸಿದ್ದಾರೆ ಎಂದರು.