ಕರ್ನಾಟಕ

karnataka

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧ: ಸಚಿವ ಕೃಷ್ಣ ಬೈರೇಗೌಡ

By ETV Bharat Karnataka Team

Published : Dec 14, 2023, 8:59 AM IST

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

drought situation  Government ready to face  Minister Krishna Byregowda  Vidhan Parishad  ಬರ ಪರಿಸ್ಥಿತಿ  ಸರ್ಕಾರ ಸನ್ನದ್ಧ  ಸಚಿವ ಕೃಷ್ಣ ಬೈರೇಗೌಡ  ಸರ್ಕಾರ ಸಜ್ಜಾಗಿದೆ  ತಲೆದೋರಿರುವ ಬರ ಪರಿಸ್ಥಿತಿ  ವಿಧಾನ ಪರಿಷತ್ ಕಲಾಪ
ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ/ಬೆಂಗಳೂರು:ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಎಲ್ಲಾ ಹಂತದಲ್ಲಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನವರಿ, ಫೆಬ್ರವರಿ ಮತ್ತು ಮಾರ್ಚ್​ ತಿಂಗಳಲ್ಲಿ ಎದುರಾಗಬಹುದಾದ ಸವಾಲುಗಳ ಬಗ್ಗೆ ಈಗಿನಿಂದಲೇ ಎಚ್ಚೆತ್ತುಕೊಂಡು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎನ್ ರವಿಕುಮಾರ, ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ನಿಯಮ 68ರ ಮೇರೆಗೆ ಎತ್ತಿದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವರು, ಬರ ನಿರ್ವಹಣೆಗಾಗಿ ಈಗಾಗಲೇ ನಾವು ಕೇಂದ್ರ ಸರ್ಕಾರಕ್ಕೆ 18,171 ಕೋಟಿ ರೂ. ಪರಿಹಾರವನ್ನು ಎನ್‌ಡಿಆರ್‌ಎಫ್ ಅನ್ವಯ ಕೋರಿ ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 23ರಂದು ಕೇಂದ್ರ ಕೃಷಿ, ಗೃಹ ಸಚಿವರ ಭೇಟಿಗೆ ಪ್ರಯತ್ನ ಕೂಡ ನಡೆಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡವು ರಾಜ್ಯದಲ್ಲಿ ಅಕ್ಟೋಬರ್ 4 ರಿಂದ ಅಕ್ಟೋಬರ್ 9ರ ವರೆಗೆ ರಾಜ್ಯದ 13 ಜಿಲ್ಲೆಗಳಲ್ಲಿ ಭೇಟಿ ನೀಡಿ ಬರದ ಪರಿಸ್ಥಿತಿಯನ್ನು ಅವಲೋಕಿಸಿದೆ. ಈ ತಂಡದವರಿಗೆ ನಾವು ರಾಜ್ಯದಲ್ಲಿನ ಬರ ಪರಿಸ್ಥಿತಿಯ ತೀವ್ರತೆಯನ್ನು ಮನವರಿಕೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 12 ರಾಜ್ಯಗಳಲ್ಲಿ ಮಳೆ ಕೊರತೆಯಾಗಿದೆ. ಎಲ್ಲ ರಾಜ್ಯಗಳು ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡುವ ವಿಷಯದಲ್ಲಿ ಕರ್ನಾಟಕ ರಾಜ್ಯವು ಮಂಚೂಣಿಯಲ್ಲಿದೆ. ನಾವು ಮನವಿ ಮಾಡಿದ ತಿಂಗಳ ನಂತರ ಆಂಧ್ರಪ್ರದೇಶ ಮತ್ತು ಎರಡು ತಿಂಗಳ ನಂತರ ಮಹಾರಾಷ್ಟ್ರದಿಂದ ಕೇಂದ್ರಕ್ಕೆ ಮನವಿ ಸಲ್ಲಿಕೆಯಾಗಿವೆ. ಇದು ಬರ ನಿರ್ವಹಣೆ ವಿಷಯದಲ್ಲಿ ರಾಜ್ಯವು ಸಾಕಷ್ಟು ಮುಂಜಾಗ್ರತೆ ವಹಿಸಿದೆ ಎಂಬುದನ್ನು ತಿಳಿಸುತ್ತದೆ ಎಂದು ಸಚಿವರು ಸದಸ್ಯರಿಗೆ ಮನವರಿಕೆ ಮಾಡಿದರು.

ರಾಜ್ಯದ 26 ಗ್ರಾಮಗಳಲ್ಲಿ 22 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. 89 ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಬೋರ್​ವೆಲ್ ಮೂಲಕ ನೀರು ಪೂರೈಸಲಾಗುತ್ತಿದೆ. ಪ್ರತಿ 15 ದಿನಕ್ಕೊಮ್ಮೆ ಅಧಿಕಾರಿಗಳಿಗೆ ಬರ ನಿರ್ವಹಣೆ ಕುರಿತು ಸಭೆ ನಡೆಸಲಾಗುತ್ತಿದೆ. ಸಮಸ್ಯಾತ್ಮಕ ಗ್ರಾಮಗಳನ್ನು ಪಟ್ಟಿ ಮಾಡಿ ಅಂತಹ ಕಡೆಗಳಲ್ಲಿ ಮುಂದೆ ಎದುರಾಗಲಿರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಟೆಂಡರ್ ಪ್ರಕ್ರಿಯೆ ನಡೆಸಿ ನೀರು ಸರಬರಾಜು ಸಿದ್ಧತೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಜನವರಿ, ಫೆಬ್ರುವರಿ ಮತ್ತು ಮಾರ್ಚ್​ನಲ್ಲಿ ಜಾನುವಾರುಗಳಿಗೆ ಮೇವಿನ ಪೂರೈಕೆಗೆ ಅನುಕೂಲವಾಗುವಂತೆ 7,63,000 ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲಾಗಿದೆ. ರಾಜ್ಯದ ಮೇವನ್ನು ಬೇರೆಡೆ ಸಾಗಿಸದಂತೆ ಈಗಾಗಲೇ ನವೆಂಬರ್ 22ರಂದೇ ನಿರ್ಬಂಧ ಆದೇಶ ಹೊರಡಿಸಲಾಗಿದೆ. ನೀರು ಸರಬರಾಜು, ಮೇವು ಖರೀದಿ ಸೇರಿದಂತೆ ಬರ ನಿರ್ವಹಣೆಗಾಗಿ ಜಿಲ್ಲಾ ಹಂತದಲ್ಲಿ ಈಗಾಗಲೇ 895 ಕೋಟಿ ರೂ.ಗಳನ್ನು ಇಟ್ಟಿದ್ದೇವೆ ಎಂದು ಸಚಿವರು ತಿಳಿಸಿದರು.

ಬರ ಹಿನ್ನೆಲೆಯಲ್ಲಿ ಜನರು ಗುಳೆ ಹೋಗುವುದನ್ನು ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಲಾಗಿದೆ. ಒಟ್ಟು 13 ಕೋಟಿ ರೂಪಾಯಿ ಮಾನವ ದಿನಗಳ ಅನುದಾನ ನಮ್ಮ ರಾಜ್ಯಕ್ಕೆ ಲಭ್ಯವಾಗಿದೆ. ಈ ಗುರಿಯನ್ನು ಈಗಾಗಲೇ ನಾವು ತಲುಪಿದ್ದು, ಈ ಅವಧಿಯಲ್ಲಿ ನರೇಗಾಕ್ಕೆ ನಾವು ವಿಶೇಷ ಆದ್ಯತೆ ನೀಡಿದ್ದೇವೆ. ಬರ ಹಿನ್ನೆಲೆಯಲ್ಲಿ ಮಾನವು ಉದ್ಯೋಗ ದಿನಗಳನ್ನು 50 ದಿನಗಳಿಗೆ ಹೆಚ್ಚಿಸಲು ಸೆ.23ರಂದು ಮನವಿ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

ಬರ ನಿರ್ವಹಣೆಗಾಗಿ ತಮ್ಮ ಅಧ್ಯಕ್ಷತೆಯಲ್ಲಿ ಈಗಾಗಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಲಾಗಿದೆ. ಜೂನ್‌ದಿಂದ ಇಲ್ಲಿವರೆಗೆ ಒಟ್ಟು 8 ಸಭೆಗಳು ನಡೆದಿವೆ. ತಾವು ರಾಜ್ಯದ ಜಿಲ್ಲೆಗಳಿಗೆ ತೆರಳಿ ಬರದ ತಯಾರಿ ಕೆಲಸವನ್ನು ಅವಲೋಕಿಸಿದ್ದನ್ನು ಸಚಿವರು ತಿಳಿಸಿದರು. ರಾಜ್ಯ ನಾಲ್ಕು ವಿಭಾಗಗಳ ಅಧಿಕಾರಿಗಳ ಸಭೆ ನಡೆಸಿ ಬರ ನಿರ್ವಹಣೆಯ ಬಗ್ಗೆ ಸಮಗ್ರ ಚರ್ಚಿಸಿದ್ದಾಗಿ ಸಚಿವರು ತಿಳಿಸಿದರು.

ಬರ ನಿರ್ವಹಣೆ ವಿಷಯವನ್ನು ಯಾರು ಸಹ ಹಗುರವಾಗಿ ತೆಗೆದುಕೊಳ್ಳಬಾರದು. ಖುದ್ದು ಶಾಸಕರೇ ನೋಡಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಶಾಸಕರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಬರ ನಿರ್ವಹಣೆಗಾಗಿ 18,171 ಕೋಟಿ ರೂ. ಪರಿಹಾರವನ್ನು ಎನ್‌ಡಿಆರ್‌ಎಫ್ ಅನ್ವಯ ರಾಜ್ಯಕ್ಕೆ ನೀಡಲು ಕೋರಿ ಮಾನ್ಯ ಮುಖ್ಯಮಂತ್ರಿಗಳು ಈಗಾಗಲೇ ಎರಡ್ಮೂರು ಬಾರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈಗಾಗಲೇ 183 ಟಾಸ್ಕ್​ಫೋರ್ಸ್ ಸಭೆಗಳು ನಡೆದಿವೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 133 ಸಭೆಗಳು ಜರುಗಿವೆ. ಕೇಂದ್ರ ಗೃಹ, ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದಸ್ಯರಿಗೆ ವಿವರಿಸಿದರು.

ಓದಿ:3542.10 ಕೋಟಿ ರೂ. ಮೊತ್ತದ ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

ABOUT THE AUTHOR

...view details