ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಹಲವಾರು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಆದರೆ, ಇವುಗಳನ್ನೆಲ್ಲ ಸಹಿಸದೆ ಸ್ವಯಂಘೋಷಿತ ಶಾಸಕರು ಹಾಗೂ ಗೋಕಾಕ್ ಶಾಸಕ ನಮ್ಮ ಕ್ಷೇತ್ರಕ್ಕೆ ಬಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು.
ಅವರು ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಪ್ರಜಾದ್ವನಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕಳೆದ 24 ವರ್ಷದಿಂದ ಶಾಸಕರಾಗಿ 16 ವರ್ಷದಿಂದ ಅವರದೇ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ನಮ್ಮ ಬಗ್ಗೆ ಮಾತನಾಡುತ್ತಾರೆ. ನಾನು ಕೇವಲ 4 ವರ್ಷ ಶಾಸಕಿಯಾಗಿ ನನ್ನ ಶಕ್ತಿ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಆದರೆ ನನ್ನ ಬಗ್ಗೆ ಮಾತನಾಡುತ್ತಾರೆ ಎಂದರು.
ಗೋಕಾಕ್ನಲ್ಲಿ ರಿಪಬ್ಲಿಕ್ ಕ್ಷೇತ್ರವಾಗಿದೆ. ಅಲ್ಲಿ ಪೊಲೀಸ್ ಸ್ಟೇಷನ್, ತಹಶೀಲ್ದಾರ್ ಕಚೇರಿ, ಸಬ್ ರಿಜಿಸ್ಟರ್ ಯಾವ ರೀತಿ ಕೆಲಸ ಮಾಡುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ತಮ್ಮನ್ನು ತಾವು ಮಾರಿಕೊಂಡು ಇನ್ನೊಬ್ಬರ ಬಗ್ಗೆ ಮಾತನಾಡುತ್ತಾರೆ ಎಂದು ನೇರವಾಗಿ ಹೆಸರು ಹೇಳದೇ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೀವು ಮೊದಲು ಕಬ್ಬಿನ ಬಿಲ್ಲನ್ನು ಕೊಟ್ಟು ನನ್ನ ಕ್ಷೇತ್ರದ ಬಗ್ಗೆ ಮಾತನಾಡಿ, ನಂದಿಹಳ್ಳಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಮ್ಮ ಹೆಸರನ್ನೇ ಬರೆದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಡಿಗೇರಿ, ಮುತ್ನಾಳ ಗ್ರಾಮದ ಹಲವು ರೈತರ ಕಬ್ಬಿನ ಬಿಲ್ ಬಾಕಿ ಉಳಿದಿದೆ. ನನ್ನ ಕ್ಷೇತ್ರದ ರೈತರ ಕಬ್ಬಿನ ಬಾಕಿ ಹಣವನ್ನು ನೀಡಿ ನನ್ನ ಕ್ಷೇತ್ರಕ್ಕೆ ಕಾಲಿಡಿ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.