ಕರ್ನಾಟಕ

karnataka

ಮರಾಠ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರು, ಸದಸ್ಯರ ನೇಮಕ: ಸಚಿವ ಆರ್. ಅಶೋಕ್ ಅಭಯ

By

Published : Dec 16, 2021, 5:05 PM IST

Minister Ashok
ಸಚಿವ ಆರ್. ಅಶೋಕ್

ಮರಾಠ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಸೇರಿದಂತೆ ಅನುದಾನ ಹೆಚ್ಚಿಸಬೇಕು ಎಂದು ಅಧೀವೇಶನದಲ್ಲಿ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು. ಈ ವೇಳೆ, ಸಚಿವ ಆರ್ ಅಶೋಕ್​ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಂಗಳೂರು/ಬೆಳಗಾವಿ :ಮರಾಠ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವುದರ ಜೊತೆಗೆ ಹೆಚ್ಚುವರಿ ಅನುದಾನ ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ್

ವಿಧಾನಸಭೆಯಲ್ಲಿ ಇಂದು ಶೂನ್ಯ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಔರಂಗಾಜೇಬ್, ಟಿಪ್ಪು ಸುಲ್ತಾನ್ ಅವರಿಂದ ಹಿಂದೂ ಧರ್ಮ ಉಳಿಯಬೇಕಾದರೆ ಅದಕ್ಕೆ ಶಿವಾಜಿ ಕಾರಣ. ಅಂತಹ ಶಿವಾಜಿಯನ್ನು ನೀಡಿದ ಮರಾಠ ಸಮುದಾಯದ ಅಭಿವೃದ್ಧಿಗಾಗಿ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅಭಿವೃದ್ಧಿ ನಿಗಮ ಘೋಷಿಸಿ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. ಆದರೆ, ಈವರೆಗೂ ಅಧ್ಯಕ್ಷರನ್ನು ನೇಮಿಸಿ ಅನುದಾನ ಬಿಡುಗಡೆ ಮಾಡಿಲ್ಲ ಎಂದರು.

ಕೂಡಲೇ 100 ಕೋಟಿ ರೂ. ಅನುದಾನ ನೀಡಬೇಕು. ಜೊತೆಗೆ 2 ಬಿ ಯಲ್ಲಿರುವ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಬೇಕು. ಬೆಳಗಾವಿ ಅಧಿವೇಶನದಲ್ಲೇ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಹಲವು ಬಿಜೆಪಿ ಸದಸ್ಯರು ದನಿಗೂಡಿಸಿದರು.

ಈ ವೇಳೆ ಸಚಿವ ಆರ್. ಅಶೋಕ್ ಮಾತನಾಡಿ, ಮರಾಠ ಅಭಿವೃದ್ಧಿ ನಿಗಮ ಮರಾಠ ಸಮುದಾಯದ ಅಭಿವೃದ್ಧಿಗಾಗಿಯೇ ಹೊರತು ಭಾಷೆಗೆ ಸಂಬಂಧಿಸಿದ ನಿಗಮವಲ್ಲ. ಚುನಾವಣಾ ನೀತಿ ಸಂಹಿತೆಯಿಂದ ಅಧ್ಯಕ್ಷರು, ಸದಸ್ಯರ ನೇಮಕ ವಿಳಂಬವಾಯಿತು. ಕೂಡಲೇ ಅಧ್ಯಕ್ಷರು ಹಾಗೂ ಸದಸ್ಯರನ್ನು ಕೂಡಲೇ ನೇಮಕ ಮಾಡಲಾಗುವುದು. ಹೆಚ್ಚುವರಿ 50 ಕೋಟಿ ರೂ. ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸದನಕ್ಕೆ ತಿಳಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ: ಖಂಡನಾ ನಿರ್ಣಯ ಕೈಗೊಂಡ ಸದನ

ABOUT THE AUTHOR

...view details