ಕರ್ನಾಟಕ

karnataka

ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​

By ETV Bharat Karnataka Team

Published : Dec 13, 2023, 3:24 PM IST

ರಾಜ್ಯಾದ್ಯಂತ ಬಾಲ್ಯ ವಿವಾಹ ತಡೆಯಲು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ವಿಧಾನಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು.

strict-legal-action-to-control-child-marriage-minister-lakshmi-hebbalkar
ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಬೆಂಗಳೂರು/ ಬೆಳಗಾವಿ: ಯಾದಗಿರಿ ಸೇರಿದಂತೆ ರಾಜ್ಯದ ಯಾವುದೇ ಕಡೆಗಳಲ್ಲಿ ಬಾಲ್ಯವಿವಾಹಗಳು ಜರುಗದಂತೆ ಕಾನೂನು ಬಿಗಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ವಿಧಾನಸಭೆಯಲ್ಲಿ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿಷೇಧಿತ ಬಾಲ್ಯ ವಿವಾಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಸಹ ಅವರನ್ನು ರಕ್ಷಿಸುವ ಪ್ರಮೇಯವೇ ಇಲ್ಲ. ತಪ್ಪಿತಸ್ಥರನ್ನು ಯಾವುದೇ ಮುಲಾಜಿಲ್ಲದೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.

ಯಾದಗಿರಿ ಜಿಲ್ಲೆಯಲ್ಲಿ 2020-2021ರ ಅವಧಿಯಲ್ಲಿ 1 ಪ್ರಕರಣ, 2021-22ರಲ್ಲಿ 9 ಹಾಗೂ 2022-23ರಲ್ಲಿ 2 ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಬಾಲ್ಯ ವಿವಾಹ ಸಮಾಜಕ್ಕೆ ಮಾರಕವಾಗಿ ಪರಿಣಮಿಸಿದೆ. ಬಾಲ್ಯ ವಿವಾಹದಿಂದ ಮುಂದೆ ಆಗುವ ದುಷ್ಪರಿಣಾಮಗಳೇನು ಎಂಬುದರ ಬಗ್ಗೆ ಸಾರ್ವಜನಿಕರು ಅರಿಯಬೇಕು. ಜೊತೆಗೆ ಕಾನೂನು ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತಿತರ ಸಂಬಂಧಿಸಿದ ಇಲಾಖೆಗಳು ಕಾರ್ಯಪ್ರವೃತ್ತವಾಗಿದೆ. ಇದರ ಜೊತೆಗೆ ಸ್ಟೇಟ್ ಕ್ರೈಮ್ ರೆಕಾರ್ಡ್ ಬ್ಯೂರೋ, ಬಾಲ್ಯ ವಿವಾಹ ನಿಷೇಧ ಕೋಶ ಇತ್ಯಾದಿ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಇವುಗಳ ಮೇಲುಸ್ತುವಾರಿ ಹಾಗೂ ದಾಖಲಾಗುವ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಅಂಗನವಾಡಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ :ರಾಜ್ಯದಲ್ಲಿ ಸಾಧ್ಯವಾದಷ್ಟು ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಪ್ರಶ್ನೋತ್ತರ ವೇಳೆ ಇಂದು ತಿಪಟೂರು ಶಾಸಕ ಷಡಕ್ಷರಿ. ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 376 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, 274 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. 62 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿವೆ. 22 ಶಾಲಾ ಆವರಣಗಳಲ್ಲಿ ನಡೆಯುತ್ತಿವೆ. 8 ಸಮುದಾಯ ಭವನಗಳಲ್ಲಿ ನಡೆಯುತ್ತಿವೆ. 3 ಪಂಚಾಯಿತಿ ಕಟ್ಟಡಗಳಲ್ಲಿ ನಡೆಯುತ್ತಿವೆ. 7 ಇತರ ಕಟ್ಟಡಗಳಲ್ಲಿ ನಡೆಯುತ್ತಿವೆ. ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಕಳೆದ 3 ವರ್ಷಗಳಲ್ಲಿ ಸಾಕಷ್ಟು ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 4 ಸಾವಿರ ಸರ್ಕಾರಿ ನಿವೇಶನಗಳಿಗೆ ಅಂಗನವಾಡಿ ಹೆಸರು ಹಾಕಿಸಲಾಗಿದೆ. ನಿವೇಶನ ಸಿಕ್ಕ ತಕ್ಷಣ ಅಗತ್ಯವಿರುವ ಎಲ್ಲ ಕಡೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಸಾರ್ವಜನಿಕ ಸೌಲಭ್ಯಗಳಿಗಾಗಿ ಮೀಸಲಿಟ್ಟಿರುವ ಸೈಟ್ ಗಳನ್ನು ಅಂಗನವಾಡಿ ಕಟ್ಟಡಕ್ಕೆ ಬಳಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ :ಅಧಿವೇಶನವನ್ನ ಬಿಜೆಪಿಯವರು ಪೊಲಿಟಿಕಲ್ ಮೈಲೇಜ್‌ಗೆ ಬಳಸಿಕೊಳ್ತಿದ್ದಾರೆ: ಮಧು ಬಂಗಾರಪ್ಪ ಗರಂ

ABOUT THE AUTHOR

...view details