ಚಿಕ್ಕಮಗಳೂರು:ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೀನಾ (45) ಎಂದು ಗುರುತಿಸಲಾಗಿದೆ. ಮಹಿಳೆ ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಆನೆ ದಾಳಿ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮೀನಾ ಸಾವಿಗೀಡಾಗಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಶೃಂಗೇರಿ - ಚಿಕ್ಕಮಗಳೂರು ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಡಿಎಫ್ಒಗೆ ಮತ್ತು ಶಾಸಕಿ ನಯನ ಮೋಟಮ್ಮ ಅವರನ್ನು ತರಾಟೆಗೆ ತೆಗೆದುಕೊಂಡರು. ನಾವು ಹಲವಾರು ಬಾರಿ ಈ ಸಮಸ್ಯೆಯ ಬಗ್ಗೆ ನಿಮ್ಮ ಗಮನಕ್ಕೆ ತಂದಿದ್ದರೂ ಕೂಡ ನೀವು ಯಾವುದೇ ಕ್ರಮ ಕೈಗೊಂಡಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಸಹ ಏನು ಮಾಡುತ್ತಿಲ್ಲ. ನಾವು ಜೀವ ಭಯದಿಂದಲೇ ಜೀವನ ನಡೆಸುವಂತಾಗಿದೆ ಎಂದು ಗ್ರಾಮಸ್ಥರು ಶಾಸಕಿಯ ಎದುರು ಅಳಲು ತೋಡಿಕೊಂಡರು. ಇದಕ್ಕೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.
ಈ ಕುರಿತು ಮಾಹಿತಿ ತಿಳಿದ ಸಿಎಂ ಸಿದ್ದರಾಮಯ್ಯ ಅವರು ಫೋನ್ ಮೂಲಕ ಗ್ರಾಮಸ್ಥರೊಂದಿಗೆ ಮಾತನಾಡಿ, ಕಾಡಾನೆಗಳಿಂದ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು. ಇನ್ನು ಸಿಎಂ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ 15 ಲಕ್ಷ ರೂಪಾಯಿ ಚೆಕ್ ಅನ್ನು ಮೃತಳ ಕುಟುಂಬಸ್ಥರಿಗೆ ವಿತರಿಸಿದರು.