ಕರ್ನಾಟಕ

karnataka

ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷರ ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ, 55 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್​ ವಶ

By

Published : Jun 15, 2023, 3:51 PM IST

ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಪ್ರದೇಶದ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಎಂಬುವರ ಮನೆಯಲ್ಲಿ 2023 ಜನವರಿ 15ರ ರಾತ್ರಿ ಅಪಾರ ಮೌಲ್ಯದ ಆಭರಣಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದರು. ತನಿಖೆ ಕೈಗೊಂಡಿದ್ದ ಮಂಗಳೂರು ನಗರ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದವರ ಪತ್ತೆಗೆ ಜಾಲ ಬೀಸಿದ್ದಾರೆ.

Arrest of two thieves
ಇಬ್ಬರ ಕಳ್ಳರ ಬಂಧನ

ಮಂಗಳೂರು: ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ 2023 ಜನವರಿ 15ರ ರಾತ್ರಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 55 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಮಲ್ಲಾರ್ ನ ಗಣೇಶ ನಾಯ್ಕ್(26), ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಳೆ ಸಿದ್ದಾಪುರದ ರಂಜಿತ್ ಕೆ. ಆರ್(26) ಬಂಧಿತ ಆರೋಪಿಗಳು. ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿ ನಡೆದ ಮನೆ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ 1 ಕೆ ಜಿ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ 2023 ಜನವರಿ 15ರ ರಾತ್ರಿ ಕಳ್ಳತನ ನಡೆದಿತ್ತು. ಬಾಗಿಲಿನ ಲಾಕನ್ನು ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದರು. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ವಹಿಸಿಕೊಂಡಿದ್ದರು. ಮಂಗಳೂರು ಸಿಸಿಬಿ ಪೊಲೀಸರು ಚಾಣಾಕ್ಷತನದಿಂದ ಪ್ರಕರಣವನ್ನು ಭೇದಿಸಿ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಗರ ಸಿಸಿಬಿ ಪೊಲೀಸ್​ ಸಿಬ್ಬಂದಿ.

1 ಕೆಜಿ 5 ಗ್ರಾಂ ಚಿನ್ನಾಭರಣ ಎರಡು ಮೊಬೈಲ್ ವಶ: ಆರೋಪಿಗಳಿಂದ 1 ಕೆಜಿ 5 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದು,ಅದರ ಒಟ್ಟು ಮೌಲ್ಯ ರೂ. 55 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೇ ಆರೋಪಿಗಳಿಂದ 2 ಮೊಬೈಲ್ ಫೋನ್ , ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತರಿಬ್ಬರ ಕಳವಿಗೆ ಸಹಕಾರ ನೀಡಿದ ಮುಖ್ಯ ಆರೋಪಿಗಳು ಸೇರಿದಂತೆ ಇನ್ನೂ ಹಲವಾರು ಜನರ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ. ಅಲ್ಲದೆ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ 2 ಕೆ ಜಿ ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.ಉಳಿದ ಚಿನ್ನಾಭರಣ ಪತ್ತೆ ಕಾರ್ಯ ಮುಂದುವರಿದಿದೆ.

ಬಂಧಿತ ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಹಾಗೂ ಇತರ ಇಬ್ಬರು ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಳರಾಯಿ ಚರ್ಚ್ ರಸ್ತೆಯ ಮನೆಯೊಂದರ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದು, ಅಪಾರ ಮೌಲ್ಯದ ವಸ್ತು ಹಾಗೂ ಮಾರುತಿ ಬ್ರೀಝಾ ಕಾರನ್ನು ಕಳವು ಮಾಡಿರುವುದನ್ನು ಪತ್ತೆ ಹಚ್ಚಲಾಗಿದೆ. ಆರೋಪಿ ಗಣೇಶ್ ನಾಯ್ಕ್ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳಿಬ್ಬರು ಚಿಕ್ಕಮಗಳೂರು ಜೈಲಿನಲ್ಲಿ ಪರಿಚಿತರಾಗಿದ್ದರು.

ಈ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ಐಯವರಾದ ಶಶಿಧರ್​ ಶೆಟ್ಟಿ, ಹರೀಶ್, ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು. ಪತ್ತೆ ಕಾರ್ಯದಲ್ಲಿ ತೊಡಗಿದ ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅವರು 10 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ.

ಇದನ್ನೂಓದಿ:ಬೆಂಗಳೂರು: ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ಚೆನ್ನೈ ಮೂಲದ ಆರೋಪಿಗಳ ಬಂಧನ

ABOUT THE AUTHOR

...view details