ಮಂಗಳೂರು: ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನದ ಸಮೀಪ ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದೆ. ದೇವಸ್ಥಾನದ ಸುತ್ತಮುತ್ತ ಓಡಾಡುತ್ತಿದ್ದ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳನ್ನು ತಡೆದು ಸಂಘಟನೆಯೊಂದರ ಕಾರ್ಯಕರ್ತರು ವಿಚಾರಿಸಿದ್ದಾರೆ. ವಿದ್ಯಾರ್ಥಿಗಳ ತಂಡದಲ್ಲಿ ಇಬ್ಬರು ಹುಡುಗಿಯರು, ಇಬ್ಬರು ಹುಡುಗರಿದ್ದು, ಇವರು ಉಳ್ಳಾಲದ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಂತರ ಕಾರ್ಯಕರ್ತರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕ-ಯುವತಿಯರ ವಿಚಾರಣೆ ನಡೆಸಿ, ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ನೈತಿಕ ಪೊಲೀಸ್ಗಿರಿ, ಮೂವರ ಬಂಧನ:ಇತ್ತೀಚಿಗೆ, ಮಂಗಳೂರು ನಗರದಲ್ಲಿ ನೈತಿಕ ಪೊಲೀಸ್ಗಿರಿ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಡಿಸೆಂಬರ್ 21ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಂಪನಕಟ್ಟೆಯ ಗುಡ್ಟೈಮ್ ಶಾರ್ಟ್ ಈಟ್ಸ್ ಶಾಪ್ ಬಳಿ ಕೇರಳದ ಯುವಕ ಮತ್ತು ಯುವತಿಯನ್ನು ವ್ಯಕ್ತಿಯೊಬ್ಬ ತಡೆದಿದ್ದ. ಯುವಕ ಮತ್ತು ಯುವತಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾ ಎಂದು ಪರಿಶೀಲಿಸುವ ನೆಪದಲ್ಲಿ ಅವರ ಮೇಲೆ ರೇಗಾಡಿ ಐಡಿ ಕಾರ್ಡ್ ಕೇಳಿದ್ದ ಎನ್ನಲಾಗಿತ್ತು. ಈ ಸಂದರ್ಭದಲ್ಲಿ ಯುವಕ ಮತ್ತು ಯುವತಿ ಆಟೋ ರಿಕ್ಷಾವನ್ನು ಹತ್ತಿ ಅಲ್ಲಿಂದ ತೆರಳಲು ಯತ್ನಿಸಿದ್ದರು. ಆಗ ಆಟೋ ನಿಲ್ಲಿಸಲು ಯತ್ನಿಸಿದ ಆರೋಪಿಯು ಆಟೋ ಚಾಲಕನಿಗೂ ಗದರಿಸಿದ್ದ. ಅಷ್ಟರಲ್ಲಿ ಸ್ಥಳದಲ್ಲಿದ್ದವರು ಮಧ್ಯಪ್ರವೇಶಿಸಿದ್ದರು.