ಕರ್ನಾಟಕ

karnataka

NIA RAID: ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ.. ದಕ್ಷಿಣಕನ್ನಡ, ಕೊಡಗು ಜಿಲ್ಲೆಗಳಲ್ಲಿ ಎನ್ಐಎ ದಾಳಿ

By

Published : Jun 28, 2023, 6:50 AM IST

Updated : Jun 28, 2023, 7:40 AM IST

ಮಂಗಳವಾರದಂದು ರಾಷ್ಟ್ರೀಯ ತನಿಖಾ ಸಂಸ್ಥೆ ದಕ್ಷಿಣಕನ್ನಡ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದೆ.

ಎನ್ಐಎ ದಾಳಿ
ಎನ್ಐಎ ದಾಳಿ

ಸುಳ್ಯ (ದಕ್ಷಿಣಕನ್ನಡ):ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚೆನೈ ವಿಭಾಗದ ಇನ್ಸ್​​​ಪೆಕ್ಟರ್ ಷಣ್ಮುಗಂ ನೇತೃತ್ವದ 3 ಮಂದಿ ಅಧಿಕಾರಿಗಳ ತಂಡ ಜಿಲ್ಲೆಯ ಹಲವು ಕಡೆಗಳಲ್ಲಿ ಮಂಗಳವಾರದಂದು ದಾಳಿ ನಡೆಸಿ ತೆರಳಿದ್ದಾರೆ‌.

ಮಂಗಳವಾರದಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿ ಗ್ರಾಮದ ಪೊಯ್ಯೆ ಗುಡ್ಡೆ ಎಂಬಲ್ಲಿನ ನೌಶಾದ್ ಎಂಬಾತನ ಮನೆಗೆ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ನೌಶಾದ್ ಮನೆಯಲ್ಲಿ ಇರದೇ ಇದ್ದು ಬಳಿಕ ಎನ್ಐಎ ಅಧಿಕಾರಿಗಳು ಮಹಜರು ನಡೆಸಿ ತೆರಳಿರುತ್ತಾರೆ. ನೌಶಾದ್ ಈ ಹಿಂದೆ ಉಡುಪಿಯಲ್ಲಿ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಬಳಿಕ ಊರಿನಲ್ಲೇ ಲಾರಿ ಚಾಲಕ ವೃತ್ತಿ ಮಾಡಿಕೊಂಡಿದ್ದ.

ಈತ ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಆತನನ್ನು ಹುಡುಕಾಟ ನಡೆಸಿದೆ. ಇದೀಗ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ನೌಶಾದ್ ಬಗ್ಗೆ ಮನೆಮಂದಿಯಲ್ಲಿ ವಿಚಾರಿಸಿ ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮಾತ್ರವಲ್ಲದೇ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೂ ಎನ್ಐಎ ಕಾರ್ಯಾಚರಣೆ ಮುಂದುವರಿಸಿದೆ.

ಸುಳ್ಯದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿದಂತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಬೆಳ್ಳಾರೆ, ಸುಳ್ಯ‌ ಸೇರಿದಂತೆ ಕೊಡಗು ಜಿಲ್ಲೆಯಲ್ಲೂ ಎನ್ಐಎ ಶೋಧ ಕಾರ್ಯ ನಡೆಸಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಭಾವಚಿತ್ರವಿರುವ ವಾಂಟೆಡ್​ ಪೊಸ್ಟರ್‌ಗಳನ್ನು ಸಾರ್ವಜನಿಕ ‌ಸ್ಥಳಗಳಲ್ಲಿ ಅಧಿಕಾರಿಗಳು ಅಂಟಿಸಿದ್ದಾರೆ. ಆರೋಪಿಗಳ ಮನೆಯ ಗೋಡೆಯ ಮೇಲೂ ಪೊಸ್ಟರ್ ಅಂಟಿಸಲಾಗಿದೆ.

ಪ್ರಕರಣದ ಹಿನ್ನೆಲೆ :ಕಳೆದ ವರ್ಷ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್​ರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆದಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮುಖ ಆರೋಪಿ ತುಫೈಲ್ ಬೆಂಗಳೂರಿನಲ್ಲಿ ಬಂಧನ

ಪ್ರವೀಣ್ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿತ್ತು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಮಾಸ್ಟರ್ ಮೈಂಡ್​ಗಳ ವಿರುದ್ಧ NIA ಚಾರ್ಜ್​ಶೀಟ್ ಸಲ್ಲಿಕೆ

Last Updated :Jun 28, 2023, 7:40 AM IST

ABOUT THE AUTHOR

...view details