ಹಾವೇರಿ: ಶಿಗ್ಗಾಂವಿ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂರ್ಣವಿರಾಮ ಇಟ್ಟಿದ್ದಾರೆ. ಈ ಕುರಿತು ಜಿಲ್ಲೆಯ ಸವಣೂರಲ್ಲಿ ಸೋಮವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕೊಂಚ ಗರಂ ಆಗಿಯೇ ಪ್ರತಿಕ್ರಿಯಿಸಿದ ಅವರು, ''ಯಾವನು ಹೇಳಿದ್ದು?'' ಎಂದರು.
''ಯಾವುದೇ ಕಾರಣಕ್ಕೂ ಶಿಗ್ಗಾಂವಿ ಬಿಡೋದಿಲ್ಲ'' ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು. ''ಶಿಗ್ಗಾಂವಿ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ರಂಗದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಈ ಹಿಂದೆಂದೂ ಆಗದ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಆಗಿವೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಮಾಡಿದ್ದೇನೆ. ಹೀಗಾಗಿ ಇಲ್ಲಿಂದಲೇ ನನ್ನ ಸ್ಪರ್ಧೆ'' ಎಂದರು. ಇದೇ ವೇಳೆ, ಶೀಘ್ರದಲ್ಲಿಯೇ ಹಾವೇರಿ ಮೆಡಿಕಲ್ ಕಾಲೇಜ್ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.
ಶಿಗ್ಗಾಂವಿಗೆ ಕಾಂಗ್ರೆಸ್ ರಣತಂತ್ರ:ಬಿಜೆಪಿ ವಿಧಾನಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಆಡಳಿತ ಪಕ್ಷದ ಸಾರಥಿಯನ್ನೇ ಚುನಾವಣಾ ಸಮರದಲ್ಲಿ ಪರಾಭವಗೊಳಿಸಲು ಕಾಂಗ್ರೆಸ್ ಬಲವಾದ ರಾಜಕೀಯ ರಣತಂತ್ರ ರೂಪಿಸುತ್ತಿದೆ. ಲಿಂಗಾಯತ (ಸಾದರ) ಸಮುದಾಯಕ್ಕೆ ಸೇರಿದ ಬೊಮ್ಮಾಯಿ ವಿರುದ್ಧ ಅದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಲಿಂಗಾಯತ ಮತ ವಿಭಜಿಸಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ರಹಸ್ಯ ಲೆಕ್ಕಾಚಾರ ನಡೆಯುತ್ತಿದೆ.
ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿಯಲ್ಲಿ ಲಿಂಗಾಯತ ಸಮುದಾಯದ ಪಂಚಮಸಾಲಿ ಮತಗಳೇ ಅತ್ಯಧಿಕ ಸಂಖ್ಯೆಯಲ್ಲಿದೆ. ಆ ಮತಗಳು ಗೆಲುವಿಗೆ ನಿರ್ಣಾಯಕವಾಗಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮತ್ತು ಪಂಚಮಸಾಲಿ ಮೀಸಲು ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನು ಬೊಮ್ಮಾಯಿ ವಿರುದ್ಧ ಕಣಕ್ಕಿಳಿಸಲು ಚಿಂತನೆ ನಡೆಸಿರುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸಲು ಬಿಜೆಪಿ ಒಂದೆಡೆ ಸಿದ್ಧತೆ ನಡೆಸುತ್ತಿದೆ. ಇದಕ್ಕೆ ಪ್ರತಿಯಾಗಿ ಮತ್ತೊಂದೆಡೆ ಬಿಜೆಪಿಯ ಚುನಾವಣೆ ಸಾರಥ್ಯ ವಹಿಸಿರುವ ಬೊಮ್ಮಾಯಿಗೆ ಕಠಿಣ ಸ್ಪರ್ಧೆವೊಡ್ಡುವಂತಹ ವಿನಯ್ ಕುಲಕರ್ಣಿ ಅವರನ್ನು ಪ್ರತಿಸ್ಪರ್ಧಿಯಾಗಿ ಅಖಾಡಕ್ಕಿಳಿಸಲು ಭೂಮಿಕೆ ತಯಾರು ಮಾಡುತ್ತಿದೆ.