ಕರ್ನಾಟಕ

karnataka

ಕೊಡಗು: ಅರಣ್ಯ ಇಲಾಖೆ ಸಿಬ್ಬಂದಿ ಬಲಿ ಪಡೆದಿದ್ದ ಕಾಡಾನೆ ಸೆರೆ

By ETV Bharat Karnataka Team

Published : Sep 6, 2023, 10:57 PM IST

Elephant captured in kodagu: ಕಳೆದೊಂದು ವಾರದಿಂದ ಜನರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದೆ.

elephant-captured-in-kodagu
ಕೊಡಗು: ಅರಣ್ಯ ಸಿಬ್ಬಂದಿಯನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ

ಕೊಡಗು: ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ

ಕೊಡಗು: ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಮಡಿಕೇರಿ ಬಳಿಯ ಕೆದಕಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ಗಿರೀಶ್ ಎಂಬುವವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ದುಬಾರೆ ಆನೆ ಶಿಬಿರದ 5 ಸಾಕಾನೆಗಳ ನೆರವಿನಿಂದ ಸುಮಾರು 100 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸಪಟ್ಟು ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಒಂದು ವಾರದಿಂದ ಆತಂಕ ಸೃಷ್ಟಿಸಿದ್ದ ಕಾಡಾನೆ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಆನೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿ ನಿನ್ನೆಯಿಂದ ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಡಾನೆಯ ಪತ್ತೆ ಮಾಡಿ ಮಧ್ಯಾಹ್ನದ ವೇಳೆಗೆ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ಸ್ವಲ್ಪ ದೂರ ಓಡಿಹೋಗಿ ಸುಸ್ತಾಗಿ ಕೆಳಗೆ ಬಿದ್ದಿದ್ದ ಆನೆಗೆ ಮಾವುತರು ಮತ್ತು ಕಾವಾಡಿಗಳು ಹಗ್ಗ ಕಟ್ಟಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದಿದ್ದಾರೆ.

ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ:ಇತ್ತೀಚಿಗೆ, ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ಸೋಮವಾರ ಕಾಡಾನೆ ಕಾರ್ಯಾಚರಣೆಗೆ ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಸಿಬ್ಬಂದಿ ಗಿರೀಶ್ (35) ಮೃತಪಟ್ಟವರು. ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ಈ ವೇಳೆ, ಆನೆ ದಾಳಿ ಮಾಡಿದ್ದರಿಂದ ಗಿರೀಶ್ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು.

ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಪಂ ವ್ಯಾಪ್ತಿಯ ಡಿ ಬ್ಲಾಕ್ ಬಳಿ ಬೈಕ್​​ನಲ್ಲಿ ಮರದ ಕೆಲಸಕ್ಕೆ ಎಂದು ತೆರಳುತ್ತಿದ್ದ ಸುಂಟಿಕೊಪ್ಪದ ನಿವಾಸಿ ಮುರುಗೇಶ್ ಎಂಬುವವರ ಮೇಲೆ ಒಂಟಿಸಲಗ ಮೊದಲು ದಾಳಿ ಮಾಡಿತ್ತು. ಇದರಿಂದ ಗಾಯಗೊಂಡಿದ್ದ ಮುರುಗೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯಿಂದ ಬೈಕ್​ಗೆ ಹಾನಿಯಾಗಿತ್ತು. ಅಲ್ಲಿಂದ ಕಾಲ್ಕಿತ್ತ ಕಾಡಾನೆ ಸ್ವಲ್ಪ ದೂರದಲ್ಲೇ ಇದ್ದ ಹಬೀಬ್ ತೋಟದತ್ತ ತೆರಳಿ ಮತ್ತೊಬ್ಬ ವ್ಯಕ್ತಿಯ ಮೇಲೂ ದಾಳಿ ಮಾಡಿತ್ತು. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸುತ್ತಿದ್ದರು.

ಸುಂಟಿಕೊಪ್ಪ ಕೆದಕಲ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಮೀನುಕೊಲ್ಲಿ ಮೀಸಲು ಅರಣ್ಯಕ್ಕೆ ಓಡಿಸಲು 20 ಮಂದಿಯ ಆರ್​ಆರ್​ಟಿ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿಕೊಂಡು ಬಂದ ಕಾಡಾನೆ, ಗಿರೀಶ್ ಮೇಲೆ ದಾಳಿ ಮಾಡಿ ತುಳಿದು ಹಾಕಿದೆ. ಇದರಿಂದ ಗಿರೀಶ್ ಸಾವನ್ನಪ್ಪಿದ್ದರು.

ಕಾಡಾನೆ ದಾಳಿಗೆ ಅರವಳಿಕೆ ತಜ್ಞ ಬಲಿ: ಕಳೆದ ವಾರ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಗಾಯಗೊಂಡ ಕಾಡಾನೆಗೆ ಚಿಕಿತ್ಸೆ ನೀಡಲು ಕಾರ್ಯಾಚರಣೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ತೆರಳಿತ್ತು. ಈ ವೇಳೆ, ಕಾಡಾನೆ ದಾಳಿ ಮಾಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್​ಶೂಟರ್ ಮತ್ತು ಅರವಳಿಕೆ ತಜ್ಞ ವೆಂಕಟೇಶ್ ಮೃತಪಟ್ಟಿದ್ದರು.

ಇದನ್ನೂ ಓದಿ:ಅರಿವಳಿಕೆ ಮದ್ದು ನೀಡಲೆಂದು ತೆರಳಿದಾಗ ದಾಳಿ ಮಾಡಿದ ಕಾಡಾನೆ: ಅರಣ್ಯ ಸಿಬ್ಬಂದಿ ಸಾವು

ABOUT THE AUTHOR

...view details