ಕರ್ನಾಟಕ

karnataka

ಮೂವರು ಮಕ್ಕಳ ಅಸ್ವಸ್ಥ ಘಟನೆಗೆ ಟ್ವಿಸ್ಟ್: ತನಿಖೆ ವೇಳೆ ಅಸಲಿ ಕೃತ್ಯ ಬಯಲು

By ETV Bharat Karnataka Team

Published : Nov 28, 2023, 9:32 PM IST

ಕಲುಷಿತ ನೀರು ಸೇವನೆ ಮಾಡಿ ಮೂವರು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆಗೆ ಟ್ವಿಸ್ಟ್ ಸಿಕ್ಕಿದೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋಲಾರ:ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವನೆ ಮಾಡಿ ಮೂವರು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆಗೆ ಟ್ವಿಸ್ಟ್ ಸಿಕ್ಕಿದೆ. ಇದೇ ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ವಿಷ ಪೂರಿತ ಪುಡಿ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದರಿಂದಲೇ ವಸತಿ ಶಾಲೆಯ ಮೂರು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯಿಂದ ವಿದ್ಯಾರ್ಥಿಯ ಕೃತ್ಯ ಬಯಲು ಮಾಡಿದ್ದಾರೆ.

ಸೋಮವಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಗಡಿಯಲ್ಲಿರುವ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿಯ ಇಬ್ಬರು ಮತ್ತು 9ನೇ ತರಗತಿ ಓರ್ವ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದರು. ಅಸ್ವಸ್ಥರಾಗಿದ್ದ ಮೂವರು ವಿದ್ಯಾರ್ಥಿಗಳಿಗೆ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳ ಪ್ರಾಣಕ್ಕೆ ತೊಂದರೆ ಇಲ್ಲ ಎಂದು ವೈದ್ಯರು ಕೂಡ ದೃಢಪಡಿಸಿದ್ದಾರೆ. ಕುಡಿಯುವ ನೀರಿನಲ್ಲಿ ವಿಷ ಪೂರಿತ ಪುಡಿ ಮಿಶ್ರಣ ಮಾಡಿರುವ ಕುರಿತು ಸಂಶಯಗೊಂಡು ವಿಚಾರಣೆ ನಡೆಸಿದ ಕಾಮಸಮುದ್ರ ಪೊಲೀಸರು, ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಸಹ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಹಾಸ್ಟೆಲ್​ ಆಹಾರ ಪೂರೈಕೆಯಲ್ಲಿ ವ್ಯತ್ಯಯ ಆರೋಪ: ವಿದ್ಯಾರ್ಥಿಗಳಿಂದ ವಿಜಯಪುರ ಡಿಸಿ ಮನೆಗೆ ಮುತ್ತಿಗೆ

ಕಲುಷಿತ ನೀರು ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದ ಪ್ರಕರಣ ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಯಕ್ತಾಪುರ ಗ್ರಾಮದ ಕಸ್ತೂರ ಬಾ ವಸತಿ ನಿಲಯದಲ್ಲಿ ಇತ್ತೀಚೆಗೆ ನಡೆದಿತ್ತು. 100 ವಿದ್ಯಾರ್ಥಿನಿಯರು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಓದುತ್ತಿದ್ದು, ಬೆಳಗ್ಗೆ ನೀರು, ಬಿಸ್ಕಿಟ್ ಹಾಗೂ ಚಹಾ ಸೇವನೆ ಮಾಡಿ ಶಾಲೆಗೆ ಬಂದ ವಿದ್ಯಾರ್ಥಿನಿಯರ ಪೈಕಿ ಐದಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಲೆ ಸುತ್ತು ಬಂದು ಶಾಲೆಯಲ್ಲಿ ಬಿದ್ದಿದ್ದರು.

ಇದನ್ನು ಗಮನಿಸಿದ ಶಾಲಾ ಮುಖ್ಯಶಿಕ್ಷಕ ಮತ್ತು ವಸತಿ ನಿಲಯದ ಮೇಲ್ವಿಚಾರಕರು ಯಕ್ತಾಪುರ ಪ್ರಾಥಮಿಕ ಮತ್ತು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಗಳಿಗೆ ವಿದ್ಯಾರ್ಥಿನಿಯರಿಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಹಾಗೂ ಜಿಪಂ ಸಿಇಒ ಗರೀಮಾ ಪನ್ವಾರ ಅವರು ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರು ಹಾಗೂ ನಿಲಯ ಮೇಲ್ವಿಚಾರಕರಿಂದ ಮಾಹಿತಿ ಪಡೆದಿದ್ದರು

ಇದನ್ನೂ ಓದಿ:ಯಾದಗಿರಿ: ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ, ಡಿಸಿ ಪರಿಶೀಲನೆ

ABOUT THE AUTHOR

...view details