ಕರ್ನಾಟಕ

karnataka

ಕೊಪ್ಪಳದ 3 ಲಕ್ಷ ಮಕ್ಕಳಿಗೆ ಪಠ್ಯ, ಸಮವಸ್ತ್ರ ವಿತರಣೆ: ಶಿಕ್ಷಣ ಇಲಾಖೆ ಉಪನಿರ್ದೇಶಕ

By

Published : May 24, 2023, 11:26 AM IST

ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನವೇ ಮೂರು ಲಕ್ಷ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಂ.ರೆಡ್ಡಿ ರೆಡ್ಡೇರ್ ತಿಳಿಸಿದರು.

MM Reddy Reddare
ಎಂ.ಎಂ ರೆಡ್ಡಿ ರೆಡ್ಡೇರ್

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಂ ರೆಡ್ಡಿ ರೆಡ್ಡೇರ್

ಗಂಗಾವತಿ (ಕೊಪ್ಪಳ):ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನವೇ ಕೊಪ್ಪಳ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಯ 3 ಲಕ್ಷ 760 ಮಕ್ಕಳಿಗೆ ಪಠ್ಯ, ಸಮವಸ್ತ್ರ ವಿತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಂ.ರೆಡ್ಡಿ ರೆಡ್ಡೇರ್ ಹೇಳಿದರು. ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಅನುದಾನಿತ ಶಾಲೆಗಳಿಗೆ ಪೂರೈಕೆಯಾದ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳ ಪರಿಶೀಲನೆಗೆ ಅವರು ಆಗಮಿಸಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಎಲ್ಲ ಶಾಲೆಯ ಮಕ್ಕಳಿಗೆ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ನೀಡಲಾಗಿದೆ. ಎಲ್ಲ ವಿಷಯಗಳ ಪಠ್ಯಗಳನ್ನು ಈಗಾಗಲೇ ಆಯಾ ಶಾಲೆಗಳಿಗೆ ತಲುಪಿಸಲಾಗಿದೆ. ಇದೇ ತಿಂಗಳ ಕೊನೆಯಲ್ಲಿ ಆಯಾ ಶಾಲೆಯ ಆಡಳಿತ ಮಂಡಳಿ ಮತ್ತು ಶಿಕ್ಷಕರು ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಿದ್ದಾರೆ. ಮೊದಲ ಹಂತದಲ್ಲಿ ಒಂದು ಜತೆ ಶಾಲಾ ಸಮವಸ್ತ್ರ ನೀಡಲಾಗಿದೆ. ಜುಲೈ ಕೊನೆಯ ವಾರ ಅಥವಾ ಆಗಸ್ಟ್​​ನಲ್ಲಿ ಮತ್ತೊಂದು ಜೊತೆ ಸಮವಸ್ತ್ರ ರವಾನೆಯಾಗುವ ಸಾಧ್ಯತೆ ಇದೆ ಎಂದರು.

ಅನುದಾನರಹಿತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 40 ಸಾವಿರ ಮಕ್ಕಳಿಗೆ ಸಂಬಂಧಿಸಿದಂತೆ ಈಗಾಗಲೇ ಆಯಾ ಶಾಲೆಯ ಆಡಳಿತ ಮಂಡಳಿಗಳು ಶೇ.10ರಷ್ಟು ಮುಂಗಡ ಪಾವತಿಸಿ ಪಠ್ಯ ಪುಸ್ತಕಕ್ಕೆ ಬೇಡಿಕೆ ಸಲ್ಲಿಸಿದ್ದು, ಬಾಕಿ ಶೇ. 90ರಷ್ಟು ಹಣ ಪಾವತಿಸಿ ಪಠ್ಯ ಪುಸ್ತಕ ಒಯ್ಯಬಹುದು. ಸರ್ಕಾರಿ ಮತ್ತು ಅನುದಾನಿತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 2.60 ಲಕ್ಷ ಮಕ್ಕಳಿಗೆ ಉಚಿತ ಪಠ್ಯ, ಸಮವಸ್ತ್ರ ನೀಡಲಾಗುತ್ತಿದೆ. ಆರ್​ಟಿಇ ಯೋಜನೆಯಡಿ ಓದುತ್ತಿರುವ ಜಿಲ್ಲೆಯ ಏಳು ಸಾವಿರ ಮಕ್ಕಳಿಗೆ ಉಚಿತ ಪಠ್ಯ ಒದಗಿಸಿ ಕೊಡಲಾಗುವುದು. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 1 ರಿಂದ 10 ನೇ ತರಗತಿಯ ಮಕ್ಕಳ ಸಂಖ್ಯೆ 2.19 ಲಕ್ಷವಿದ್ದು ಎಲ್ಲಾ ಮಕ್ಕಳಿಗೆ ಉಚಿತ ಸಮವಸ್ತ್ರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಬಿಇಒ ಸೋಮಶೇಖರ ಗೌಡ, ತಹಶೀಲ್ದಾರ್ ಮಂಜುನಾಥ ಹಿರೇಮಠ ಭೋಗಾವತಿ ಉಪಸ್ಥಿತರಿದ್ದರು.

ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಿಸಿರುವ ಬಗ್ಗೆ ಅಗತ್ಯ ಮಾಹಿತಿ ನೀಡದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್​ ಇತ್ತೀಚೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲರಿಗೂ ಬುದ್ದಿ ಬರಲಿದೆ ಎಂದು ಇದೇ ವೇಳೆ ಸರ್ಕಾರಕ್ಕೆ ಕೋರ್ಟ್​ ಎಚ್ಚರಿಕೆ ನೀಡಿತ್ತು.

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂದು 2019 ರ ಆ.28ರಂದು ಹೈಕೋರ್ಟ್ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ರಾಜೇಶ್​ ರೈ ಅವರಿದ್ದ ವಿಭಾಗೀಯ ಪೀಠ ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಇದನ್ನೂ ಓದಿ:ಸಮರ್ಪಕವಾಗಿ ಸಮವಸ್ತ್ರ ನೀಡದ ಸರ್ಕಾರ: ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸುವುದಾಗಿ ಹೈಕೋರ್ಟ್ ಎಚ್ಚರಿಕೆ

ABOUT THE AUTHOR

...view details