ಮೈಸೂರು:ಕನ್ನಡ ನಾಡಿನಲ್ಲಿ ವೀರ ಸಾವರ್ಕರ್ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
ಮೈಸೂರಿನ ಕೋಟೆ ಆಂಜನೇಯ ದೇವಾಲಯದ ಮುಂಭಾಗ ಮಂಗಳವಾರ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಮಾಜಿ ಸಿಎಂ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಸ್ಥಾನಮಾನವಿದೆ. ಇಂತಹ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಅಷ್ಟ ದಿಕ್ಕುಗಳಲ್ಲಿ ವೀರ ಸಾವರ್ಕರ್ ಅವರ ಜೀವನ ಮೌಲ್ಯ, ತ್ಯಾಗ ಪಸರಿಸಲಿ ಎಂದರು.
ಒಂದೆಡೆ ದೇಶ ವಿಶ್ವಗುರು ಆಗಲು ದಾಪುಗಾಲು ಹಾಕುತ್ತಿದ್ದರೆ, ಮತ್ತೊಂದೆಡೆ ದೇಶದ ಮೌಲ್ಯಗಳಿಗೆ ಮಸಿ ಬಳಿಯುವ ಕೆಲಸ ಆಗುತ್ತಿದೆ. ಸಾವರ್ಕರ್ ಬಗ್ಗೆ ಅಪಪ್ರಚಾರ ಕೂಡ ಆಗುತ್ತಿದೆ. ಸಾವರ್ಕರ್ ಸಂದೇಶವನ್ನು ಮನೆ ಮನಸ್ಸುಗಳಿಗೆ ತಿಳಿಸಬೇಕು ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕರೆ ನೀಡಿದ್ದರು. ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಅವರಿಂದ ಸ್ವಾತಂತ್ರ್ಯ ಯೋಧ ಎಂದು ಬಿರುದು ಪಡೆದಿದ್ದರು ಎಂದು ಹೇಳಿದರು.