ಮೈಸೂರು/ಬೆಂಗಳೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಪ್ರಯುಕ್ತ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ನೀಡಲಾಗಿರುವ ಗೌರವ ಡಾಕ್ಟರೇಟ್ ಪದವಿಯನ್ನು ರಾಜಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯು ಜ್ಞಾನ, ವಿಜ್ಞಾನ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆ ಒಳಗೊಂಡಿದೆ. ಹೆಸರಾಂತ ಶಾಸ್ತ್ರೀಯ ಸಂಗೀತ ಗಾಯಕಿ, ಗೌರವಾನ್ವಿತ ಗಂಗೂಬಾಯಿ ಹಾನಗಲ್ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಈ ವಿಶ್ವವಿದ್ಯಾಲಯವು ಸಂಸ್ಕೃತಿ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಮುನ್ನಡೆಸುವಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಡಾ.ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ಶಿಕ್ಷಣ, ಕಲೆ, ಸಂಗೀತ ಮತ್ತು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅದರಂತೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಚ್ಚಿದಾನಂದ ಸ್ವಾಮೀಜಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ತಿಳಿಸಿದರು.