ಕರ್ನಾಟಕ

karnataka

ಮೈಸೂರು: ಮಹಿಳೆ ಬಲಿ ಪಡೆದ ಹುಲಿ ಸೆರೆಗೆ 3 ಸಾಕಾನೆ, 207 ಸಿಬ್ಬಂದಿಯಿಂದ ಕಾರ್ಯಾಚರಣೆ

By ETV Bharat Karnataka Team

Published : Nov 26, 2023, 9:33 AM IST

Updated : Nov 26, 2023, 11:29 AM IST

Operation Tiger begins in Mysuru: ಮಹಿಳೆಯನ್ನು ಬಲಿ ಪಡೆದ ಹುಲಿ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದೆ. 207 ಸಿಬ್ಬಂದಿ ಮತ್ತು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.

ಹುಲಿ ಸೆರೆ ಕಾರ್ಯಾಚರಣೆ tiger capture operation
ಹುಲಿ ಸೆರೆ ಕಾರ್ಯಾಚರಣೆ

ಮೈಸೂರು: ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದ ಬೆಳ್ಳೂರು ಹುಂಡಿ ಜಮೀನಿನಲ್ಲಿ ದನಗಾಹಿ ಮಹಿಳೆಯನ್ನು ಹುಲಿಯೊಂದು ಕೊಂದು ಹಾಕಿದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಒಳಗೊಂಡಂತೆ 207 ಸಿಬ್ಬಂದಿಯೊಂದಿಗೆ ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದೆ.

ಡ್ರೋನ್ ಮೂಲಕವೂ ಕಾರ್ಯಾಚರಣೆ:ಹುಲಿ ಚಲನವಲನಗಳ ಪತ್ತೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ವಲಯದಲ್ಲಿ ಕಾರ್ಯಾಚರಣೆ ಚುರುಕುಗೊಂಡಿದೆ. ಇದಕ್ಕಾಗಿ ಪಾರ್ಥ, ರೋಹಿತ್, ಹಿರಣ್ಯ ಎಂಬ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಹುಲಿ ದಾಳಿ ಮಾಡಿದ ಸ್ಥಳದಲ್ಲಿ ಬೋನಿರಿಸಲಾಗಿದೆ‌. ಡ್ರೋನ್ ಮೂಲಕವೂ ಚಲನವಲನ ಪತ್ತೆಗೆ ಇಲಾಖೆ ಮುಂದಾಗಿದೆ.

ಹುಲಿ ಸೆರೆ ಕಾರ್ಯಾಚರಣೆ

ಇತ್ತೀಚೆಗೆ ಇಬ್ಬರ ಮೇಲೆ ದಾಳಿ ಮಾಡಿದ ಹುಲಿ (ನವೆಂಬರ್ 24) ಮಹಿಳೆಯನ್ನು ಬಲಿ ಪಡೆದಿತ್ತು. ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಮೃತಪಟ್ಟಿದ್ದರು. ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆಗಿಳಿದು, ಹುಲಿ ಪತ್ತೆಗೆ ಹರಸಾಹಸಪಡುತ್ತಿದೆ. ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಹುಲಿ ಸೆರೆಗೆ ಬೋನ್ ಇಟ್ಟ ಸಿಬ್ಬಂದಿ

ಇದನ್ನೂ ಓದಿ: ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ದನಗಾಹಿ ಮಹಿಳೆ ಕೊಂದು ತಿಂದ ವ್ಯಾಘ್ರ

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮದಲ್ಲಿ 52 ವರ್ಷದ ರತ್ನಮ್ಮ ಹುಲಿ ದಾಳಿಯಿಂದ ಸಾವನ್ನಪ್ಪಿದ್ದಾರೆ. ಶುಕ್ರವಾರ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ರತ್ನಮ್ಮ ಮೇಲೆ ಹುಲಿ ದಾಳಿ ಮಾಡಿ ಹೊತ್ಯೊಯ್ದಿತ್ತು. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಶೋಧ ಕಾರ್ಯ ನಡೆಸಿದಾಗ ರತ್ನಮ್ಮ ಮೃತದೇಹ ಕಾಡಂಚಿನ ಪ್ರದೇಶದಲ್ಲಿ ಪತ್ತೆಯಾಗಿತ್ತು.

ಹುಲಿ ಸೆರೆ ಕಾರ್ಯಾಚರಣೆ

ಇದೇ ಸ್ಥಳದಲ್ಲಿ ಸುಮಾರು ಒಂದು ತಿಂಗಳ ಹಿಂದೆ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಹುಲಿಯನ್ನು ಸೆರೆಗೆ ಸ್ಥಳೀಯರು ಆಗ್ರಹಿಸಿದ್ದರು. ಇನ್ನು ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮೊಳೆಯೂರು ವಲಯ ಅರಣ್ಯ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ರೈತನ ಮೇಲೆ ಕೂಡ ಹುಲಿ ದಾಳಿ ಮಾಡಿ ಎಳೆದೊಯ್ದಿತ್ತು. ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಬೇಗೂರು ಗ್ರಾಮದ ರೈತ ಮತ್ತು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ (42) ಮೃತದೇಹ ಕಾಡಿನಲ್ಲಿ ಪತ್ತೆಯಾಗಿತ್ತು.

Last Updated :Nov 26, 2023, 11:29 AM IST

ABOUT THE AUTHOR

...view details