ಕರ್ನಾಟಕ

karnataka

ದಸರಾದಲ್ಲಿಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ: ಕಮಿಷನರ್ ಡಾ ಚಂದ್ರಗುಪ್ತ

By

Published : Sep 24, 2022, 5:57 PM IST

ಮೈಸೂರು ನಗರದಿಂದ 1,255, ಹೊರಜಿಲ್ಲೆಗಳಿಂದ 3,580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, 650ಗೃಹ ರಕ್ಷಕ ಸಿಬ್ಬಂದಿಗಳು ಸೇರಿದಂತೆ ಒಟ್ಟು 5,485 ಸಂಖ್ಯೆಯ ಪೊಲೀಸರನ್ನು ದಸರಾದ ಬಂದೋಬಸ್ತ್​ಗೆ ನೇಮಕ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ತಿಳಿಸಿದರು.

Police Commissioner press conference on Mysore Dussehra  security
ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಲಾಗಿದೆ. ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ತಿಳಿಸಿದರು.

ಖಾಸಗಿ ಹೋಟೆಲ್​ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಮೈಸೂರು ನಗರ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದ್ದು, ಮೈಸೂರು ನಗರದಿಂದ 1,255, ಹೊರಜಿಲ್ಲೆಗಳಿಂದ 3580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, 650ಗೃಹ ರಕ್ಷಕ ಸಿಬ್ಬಂದಿಗಳು ಸೇರಿದಂತೆ ಒಟ್ಟು 5,485 ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್​ಗೆ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಬಸ್​ ಕಮಾಂಡ್ ಸೆಂಟರ್ : ಮೊಬೈಲ್ ಕಮಾಂಡ್ ಸೆಂಟರ್ ಬಸ್​ನ್ನು ದಸರಾ ಮಹೋತ್ಸವದಲ್ಲಿ ಬಳಕೆ ಮಾಡಲಾಗುತ್ತಿದೆ. ಈ ಬಸ್​​​ನಲ್ಲಿ ಸಿಸಿಟಿವಿ ವ್ಯವಸ್ಥೆ ಇದ್ದು ಬಾಡಿ ಪೋರ್ಸ್ ಕ್ಯಾಮರಾಗಳು, ಲಾಂಗ್ ಡಿಸ್ಟೆನ್ಸ್ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಗಳನ್ನು ತೆಗೆಯುವ ವ್ಯವಸ್ಥೆ ಇರಲಿದೆ ಎಂದರು.

ಬಾಡಿಪೋರ್ಸ್ ಕ್ಯಾಮರಾ: ಅರಮನೆ ಮತ್ತು ಬನ್ನಿ ಮಂಟಪದ ಎಲ್ಲ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿಪೋರ್ಸ್ ಕ್ಯಾಮರಾ ವಿತರಿಸಲಾಗುತ್ತದೆ. ಅಲ್ಲಿನ ಸಂಪೂರ್ಣ ದೃಶ್ಯಾವಳಿ ಈ ಕ್ಯಾಮರಾಗಳಲ್ಲಿ ಮತ್ತು ಮೊಬೈಲ್ ಕಮಾಂಡ್ ಸೆಂಟರ್​ನಲ್ಲಿ ರೆಕಾರ್ಡ್ ಆಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮರಾಗಳಿಂದ ಕಣ್ಗಾವಲು ಮಾಡಲಾಗುವುದು.

ನುರಿತ ಅಪರಾಧ ವಿಭಾಗದ ಅಧಿಕಾರಿಗಳ ನೇಮಕ : ದಸರಾ ಪ್ರಮುಖ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಪ್ಲಾಟ್ ಫಾರ್ಮ್​ಗಳನ್ನು ನಿರ್ಮಿಸಿ ಅದರ ಮೇಲೆ ಪೊಲೀಸರನ್ನು ಮೆಗಾ ಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಅಪರಾಧಗಳನ್ನು ತಡೆಗಟ್ಟಲು ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು.

24ಗಂಟೆ ನಗರಾದ್ಯಂತ ಗಸ್ತು : ನಗರದ ಲಾಡ್ಜ್​ಗಳಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ದಿನದ 24ಗಂಟೆ ನುರಿತ ಅಪರಾಧ ವಿಭಾಗದ ಸಿಬ್ಬಂದಿಗಳು ಗಸ್ತಿನಲ್ಲಿದ್ದು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗುತ್ತದೆ. ದಸರಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ತಕ್ಷಣ ಪೊಲೀಸ್ ವ್ಯವಸ್ಥೆ ಸ್ಥಳಕ್ಕೆ ತೆರಳಲು ಉತ್ತಮವಾದ ಗಸ್ತು ವಾಹನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಸಿಸಿಟಿವಿ ಕಣ್ಗಾವಲು: ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳಕ್ಕೆ ಮುಂಚಿತವಾಗಿಯೇ 12 ಅಗ್ನಿಶಾಮಕ ದಳ ಮತ್ತು 8 ಆ್ಯಂಬುಲೆನ್ಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರು ಅಳವಡಿಸಿಕೊಂಡಿರುವ 13,140 ಸಿಸಿ ಕ್ಯಾಮರಾಗಳು ಇದ್ದು ಹೆಚ್ಚುವರಿಯಾಗಿ ಮೈಸೂರು ಅರಮನೆ, ಬನ್ನಿಮಂಟಪದ ಮೈದಾನ ಮೆರವಣಿಗೆ ಮಾರ್ಗ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು ಇವುಗಳಲ್ಲಿ ದಿನದ 24ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ರೌಡಿ ಪರೇಡ್ ನಡೆಸಿ ರೌಡಿಗಳಿಗೆ ಅಹಿತಕರ ಘಟನೆ ನಡೆಸದಂತೆ ಕಟ್ಟೆಚ್ಚರ ನೀಡಲಾಗಿದೆ. ಗರುಡಾ ಫೋರ್ಸ್ ಮತ್ತು ಎಎನ್​ಎಫ್ ತಂಡಗಳನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಹಿಷ ದಸರಾ ಆಚರಣೆ :ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷ ದಸರಾ ಆಚರಣೆಗೆ ಇಂದು ಸಿದ್ಧತೆ ನಡೆಸಲಾಗಿತ್ತಾದರೂ ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ. ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಕಾವಲಿಗೆ ನಿಂತಿದ್ದಾರೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆ ಗೈಯ್ಯಲು ತೆರಳ ಬಹುದೆಂಬ ಕಾರಣಕ್ಕೆ ಮಹಿಷ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ.

ವಾಹನ ತಪಾಸಣೆ :ಬೆಟ್ಟಕ್ಕೆ ತೆರಳುವ ವಾಹನಗಳನ್ನು ಈಗಾಗಲೇ ಪ್ರವೇಶಕ್ಕೆ ಮುನ್ನ ಸಂಪೂರ್ಣ ತಪಾಸಣೆ ನಡೆಸಿಯೇ ಬಿಡಲಾಗುತ್ತಿದ್ದು, ಹೆಚ್ಚಿನ ಪೊಲೀಸ್ ಭದ್ರತೆಯನ್ನು ಚಾಮುಂಡಿ ಬೆಟ್ಟದಲ್ಲಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ :ಝಗಮಗಿಸುವ ವಿದ್ಯುತ್ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಿದ ಗಜಪಡೆ

ABOUT THE AUTHOR

...view details