ಕರ್ನಾಟಕ

karnataka

ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿವಿ ಕಾಮಗಾರಿಗೆ ಶೀಘ್ರ ಚಾಲನೆ: ಅಶ್ವತ್ಥ್ ನಾರಾಯಣ್​

By

Published : Jun 20, 2020, 12:40 AM IST

ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿವಿ ಕಾಮಗಾರಿಗೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದೆಂದು ಅಶ್ವತ್ಥ್ ನಾರಾಯಣ್​ ಹೇಳಿದರು.

Rajiv Gandhi Health & Science VV Works will begins shortly: DCM Ashwath Narayan
ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿವಿ ಕಾಮಗಾರಿಗೆ ಶೀಘ್ರ ಚಾಲನೆ: ಅಶ್ವತ್ಥ್ ನಾರಾಯಣ್​

ರಾಮನಗರ:ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ರಾಮನಗರದ ಕ್ಯಾಂಪಸ್ ನಿರ್ಮಾಣ ಕಾಮಗಾರಿಗೆ ತ್ವರಿತವಾಗಿ ಚಾಲನೆ ನೀಡಲಾಗುವುದು ಎಂದು ಉಪ ಮಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನಗರದ‌ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜೀವ್ ಗಾಂಧಿ ವಿವಿ ಸ್ಥಳಾಂತರಕ್ಕೆ ಸಂಬಂಧಿಸಿ ಕಾನೂನಾತ್ಮಕ ತೊಡಕಿದೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​​ನಲ್ಲಿ ವಿವಾದ ಅರ್ಜಿಯೊಂದು ಇತ್ಯರ್ಥವಾಗಬೇಕಿದೆ. ಕೋವಿಡ್ ಕಾರಣಕ್ಕೆ ನ್ಯಾಯಾಲಯದ ಕಲಾಪ ನಡೆಯದೇ ಅದರ ವಿಲೇವಾರಿ ವಿಳಂಬವಾಗಿದೆ. ಈ ಅರ್ಜಿ ಇತ್ಯರ್ಥವಾದ ತಕ್ಷಣವೇ ಕಾಮಗಾರಿ ಆರಂಭಿಸಿ ಕಾಲಮಿತಿಯೊಳಗೆ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿವಿ ಕಾಮಗಾರಿಗೆ ಶೀಘ್ರ ಚಾಲನೆ: ಅಶ್ವತ್ಥ್ ನಾರಾಯಣ್​

ವಿವಿ ಸ್ಥಳಾಂತರದ ಜೊತೆಯಲ್ಲಿಯೇ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೆಲ್ತ್ ಸಿಟಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಈ ಎರಡು ಯೋಜನೆಗಳು ಸಾಕಾರಗೊಂಡ ಮೇಲೆ ರಾಮನಗರದ ಚಿತ್ರಣವೇ ಬದಲಾಗಲಿದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ನಿಯಂತ್ರಣಕ್ಕೆ ಕ್ರಮ:

ಹಸಿರು ವಲಯವಾಗಿದ್ದ ಜಿಲ್ಲೆಯಲ್ಲಿ ಈಗ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಡಿಸಿಎಂ, ಆಸ್ಪತ್ರೆಗಳಲ್ಲಿ ಕಠಿಣ ಎಚ್ಚರಿಕೆ ವಹಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ದಯಾನಂದ ಸಾಗರ್ ಆಸ್ಪತ್ರೆಯವರು ಜಿಲ್ಲೆಗೆ 200 ಬೆಡ್​​ಗಳನ್ನು ನೀಡುವ ಭರವಸೆ ನೀಡಿದ್ದಾರೆ.

ನಾನೇ ಖುದ್ದಾಗಿ ಆ ಆಸ್ಪತ್ರೆಯ ಆಡಳಿತ ಮಂಡಳಿಯವರ ಜತೆ ಮಾತಾನಾಡಿದ್ದೇನೆ. ಕೂಡಲೇ ಅವರನ್ನು ಸಂಪರ್ಕಿಸಿ ಬೆಡ್​​ಗಳನ್ನು ಪಡೆದುಕೊಳ್ಳುವಂತೆ ಡಿಸಿಎಂ ಅವರು ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಕೋವಿಡ್​ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಂದೂ ದೂರು ಬರಬಾರದು. ಔಷಧಿ, ಪಲ್ಸ್​ ಮೀಟರ್ ಸೇರಿ ಸಪ್ಲೈ ಚೈನಿನಲ್ಲಿ ಯಾವುದೇ ವ್ಯತ್ಯಯವಾಗಬಾರದು ಎಂದರು.

ಬೆಳೆ ವಿಮೆ ವಿಳಂಬ ಡಿಸಿಎಂ ಗರಂ:

ರೈತರಿಗೆ ಬೆಳೆ ವಿಮೆ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕಾರ್ಪೊರೇಷನ್​​​ ಬ್ಯಾಂಕ್ ಬಗ್ಗೆ ಉಪ ಮುಖ್ಯಮಂತ್ರಿ ಗರಂ ಆದ ಪ್ರಸಂಗ ಕೆಡಿಪಿ ಸಭೆಯಲ್ಲಿ ನಡೆಯಿತು. ಮೂರು ವರ್ಷವಾದರೂ ಬ್ಯಾಂಕಿನಿಂದ ವಿಮೆ ಮೊತ್ತ ಬಂದಿಲ್ಲ. ರೈತರು ಬ್ಯಾಂಕ್ ಮತ್ತು ಕಂದಾಯ ಇಲಾಖೆ ಕಚೇರಿಗಳಿಗೆ ಅಲೆಯುವಂತಾಗಿದೆ ಎಂದು ಡಿಸಿಎಂ ಗಮನ ಸೆಳೆದರು.

ಈ ಬಗ್ಗೆ ಕೂಡಲೇ ಕಾನೂನು ಕ್ರಮಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರಲ್ಲದೆ ಒಂಬುಡ್ಸಮನ್​​ಗೆ ದೂರು ನೀಡುವಂತೆ ಡಿಸಿಎಂ ಆದೇಶಿಸಿದರು.

ಅರ್ಕಾವತಿ ಪ್ರದೇಶಾಭಿವೃದ್ಧಿ:

ರಾಮನಗರ ಪಟ್ಟಣದಲ್ಲಿಯೇ ಅರ್ಕಾವತಿ ನದಿ ಸುಮಾರು 5 ಕಿ.ಮೀ ವ್ಯಾಪಿಸಿದೆ. ಅದರ ಆಮೂಲಾಗ್ರ ಅಭಿವೃದ್ಧಿಗೆ ಒತ್ತು ನೀಡಲೇಬೇಕು. ಅಲ್ಲದೆ ಈ ವ್ಯಾಪ್ತಿಯಲ್ಲಿನ ಜಲಮೂಲಗಳನ್ನು ರಕ್ಷಿಸಬೇಕು. ಸರ್ಕಾರ ಈ ಬಗ್ಗೆ ಹೆಚ್ಚು ಬದ್ಧತೆಯಿಂದ ಕೆಲಸ ಮಾಡಲಿದೆ. ಈ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಪ್ರವಾಸೋದ್ಯಮಕ್ಕೆ ಒತ್ತು:

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು‌ ನೀಡಬೇಕು. ಇದಕ್ಕೆ ಬೇಕಾಗುವ ಸಹಕಾರವನ್ನು ಎಲ್ಲ ಇಲಾಖೆಗಳಿಂದ ನೀಡಬೇಕು ಎಂದು ಅವರು‌ ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮ ಗಣಿಗಾರಿಕೆಗೆ ಕಡಿವಾಣ:

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರು ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪರಿಸರ ಸಂರಕ್ಷಣೆಗೆ ಅದ್ಯತೆ ನೀಡಬೇಕು ಎಂದರು. ಅಲ್ಲದೆ ಕಲ್ಲು ಗಣಿಗಾರಿಕೆ ಎಲ್ಲ ಕಡೆ ನಡೆಯುತ್ತಿದೆ. ಆದರೆ ಕಾನೂನಾತ್ಮಕವಾಗಿ ನಡೆಯಲಿ ಎಂಬುದು ನನ್ನ ಅನಿಸಿಕೆ ಎಂದರು.

ತ್ರೈಮಾಸಿಕ ಸಭೆ:

ಜಿಲ್ಲೆಯ ಪ್ರಗತಿ ಪರಿಶೀಲನಾ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಯಲಿದೆ. ಸಭೆಯಿಂದ ಸಭೆಗೆ ಅಭಿವೃದ್ಧಿಯ ಫಲಿತಾಂಶದ ಹೆಗ್ಗುರುತುಗಳು ಕಾಣಬೇಕು. ಅಧಿಕಾರಿಗಳು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಕರ್ತವ್ಯಲೋಪವನ್ನು ಸಹಿಸುವ ಪ್ರಶ್ನೆ ಇಲ್ಲ. ನಾನು ಬರುವ ಎಲ್ಲ ದಿನ ಜಿಲ್ಲೆಯ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು ಎಂದು ಡಿಸಿಎಂ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಸಂಸದ ಡಿ.ಕೆ. ಸುರೇಶ್, ಮಾಗಡಿ ಶಾಸಕ ಮಂಜುನಾಥ್, ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಮುಂತಾದವರು ಭಾಗಿಯಾಗಿದ್ದರು.

ABOUT THE AUTHOR

...view details