ಕರ್ನಾಟಕ

karnataka

ನ.15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ: ಬಿ.ವೈ ವಿಜಯೇಂದ್ರ

By ETV Bharat Karnataka Team

Published : Nov 12, 2023, 12:20 PM IST

Updated : Nov 12, 2023, 2:30 PM IST

ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ 15ನೇ ತಾರೀಖಿನಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಲಿದ್ದೇನೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

vijayendra
ವಿಜಯೇಂದ್ರ

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ ವಿಜಯೇಂದ್ರ

ತುಮಕೂರು:ಮುಂಬರುವ ಬುಧವಾರ 15 ನೇ ತಾರೀಖಿನಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕಾರ ಮಾಡುತ್ತಿದ್ದೇನೆ ಎಂದು ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರಾದ ಜೆ.ಪಿ ನಡ್ಡಾ, ಅಮಿತ್ ಶಾ, ಸಂತೋಷ್ ಸೇರಿದಂತೆ ಎಲ್ಲರೂ ಚರ್ಚೆ ಮಾಡಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ.‌ ಅಧಿಕಾರ ವಹಿಸಿಕೊಳ್ಳುವ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಟ್ಟು ಆಶೀರ್ವಾದ ಪಡೆಯಲು ಬಂದಿದ್ದೇನೆ. ತಂದೆ ಯಡಿಯೂರಪ್ಪನವರು ಯಾವುದೇ ನಿರ್ಣಯ ತೆಗೆದುಕೊಳ್ಳುವ ಮುನ್ನ ಶಿವಕುಮಾರ ಸ್ಚಾಮೀಜಿ ಆಶೀರ್ವಾದ ಪಡೆದುಕೊಳ್ಳುತ್ತಿದ್ದರು ಎಂದರು.

ನಳಿನ್ ಕುಮಾರ್ ಕಟೀಲ್ ಅವರು ಯಶಸ್ವಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಕಟ್ಟಿದ್ರು. ನಮ್ಮ ಪಕ್ಷದ ಹಿರಿಯ ಮುಖಂಡರಾದ ಬಿ ಎಸ್​ ಯಡಿಯೂರಪ್ಪ, ಬಸವರಾಜ​ ಬೊಮ್ಮಾಯಿ, ಈಶ್ವರಪ್ಪ, ಸದಾನಂದ ಗೌಡ, ಕಾರಜೋಳ, ಯತ್ನಾಳ್​, ಸೋಮಣ್ಣ ಸೇರಿದಂತೆ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ರಾಷ್ಟ್ರೀಯ ನಾಯಕರಿಗೆ ಚುನಾವಣೆ ಇರುವುದರಿಂದ ಬರುತ್ತಿಲ್ಲ. ‌ಕೇಂದ್ರದ ವೀಕ್ಷಕರು ಬರಲಿದ್ದಾರೆ. ಶುಕ್ರವಾರದೊಳಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಕರೆಯಲಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ :ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ : ಆಕಾಂಕ್ಷಿಗಳು ಸೈಲೆಂಟ್

ಇನ್ನು ರೈತರನ್ನು ಕಾಡುತ್ತಿರುವ ಬರ ಪರಿಸ್ಥಿತಿಯನ್ನು ಯಾವ ರೀತಿ ಪರಿಹಾರ ಮಾಡಬೇಕು ಎಂದು ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡುತ್ತೇವೆ ಎಂದರು. ಇದೇ ವೇಳೆ ಮುಖಂಡರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮದು ದೊಡ್ಡ ಪಕ್ಷ, ಸಣ್ಣ ಪುಟ್ಟ ಅಸಮಾಧಾನ ಇರುತ್ತದೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತೇವೆ. ಮಾಧುಸ್ವಾಮಿ ಅವರ ಕಾಲಿಗೆ ಸಮಸ್ಯೆ ಆಗಿದೆ, ಅದಕ್ಕೆ ಅವರು ಬಂದಿಲ್ಲ ಎಂದರು.

ಯಡಿಯೂರಪ್ಪ ಸೈಡ್ ಲೈನ್ ವಿಚಾರವಾಗಿ ಮಾತನಾಡಿ, ಯಾರನ್ನು ಸೈಡ್ ಲೈನ್ ಮಾಡಿಲ್ಲ, ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿರಬಹುದು. ಎಲ್ಲವನ್ನು ಬದಿಗಿಟ್ಟು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ರಯತ್ನಿಸುತ್ತೇವೆ. ವಿರೋಧ ಪಕ್ಷದ ನಾಯಕನ ಆಯ್ಕೆ ಬಳಿಕ ದೆಹಲಿಗೆ ಭೇಟಿ ನೀಡಿ ಮುಂದೆ ಯಾವ ರೀತಿ ನಡೆಯಬೇಕು ಅಂತ ಸಲಹೆ ಪಡೆಯುತ್ತೇನೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಘಟಕದ ಅಧ್ಯಕರನ್ನಾಗಿ ನೇಮಕವಾದ ಬಳಿಕ ಮೊದಲ ದಿನವೇ ಮೊದಲು ಬೂತಮಟ್ಟದ ಅಧ್ಯಕ್ಷರ ಮನೆಗೆ ನಿನ್ನೆ ವಿಜಯೇಂದ್ರ ಭೇಟಿ ನೀಡಿದ್ದರು. ಬಳಿಕ ಚಾಮರಾಜಪೇಟೆಯಲ್ಲಿರುವ ಆರ್​ಎಸ್​ಎಸ್ ಕಚೇರಿ ಕೇಶವಕೃಪಾಗೆ ಭೇಟಿ ನೀಡಿ, ನಾಯಕರಿಂದ ಆಶೀರ್ವಾದ ಪಡೆದುಕೊಂಡಿದ್ದರು. ಆ ಬಳಿಕ ಸಂಜೆ ವೇಳೆಗೆ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದರು.

Last Updated :Nov 12, 2023, 2:30 PM IST

ABOUT THE AUTHOR

...view details