ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದಾರೆ. ಸಂಪುಟ ವಿಸ್ತರಣೆ ಕಸರತ್ತು ಪ್ರಗತಿಯಲ್ಲಿದ್ದು ಸದ್ಯಕ್ಕೆ ಯಾವ ಸುಳಿವು ಹೊರಬಿದ್ದಿಲ್ಲ. ಆದರೆ, ದೆಹಲಿಯಲ್ಲಿ ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡದೇ ತೆರಳಿದ ಘಟನೆ ನಡೆಯಿತು. ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ನೀಡುವಂತೆ ಅಲ್ಲಿದ್ದ ಪತ್ರಕರ್ತರು ಪ್ರಶ್ನೆ ಮಾಡುತ್ತಿದ್ದಂತೆ ಸಿದ್ದರಾಮಯ್ಯ ಅವರು, ಮಂತ್ರಿ ಮಂಡಲ ವಿಚಾರ ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳುವುದಿದ್ದರೆ ಮಾತ್ರ ಕೇಳಿ, ಸದ್ಯಕ್ಕೆ ಆ ಬಗ್ಗೆ ಪ್ರಶ್ನೆ ಕೇಳಬೇಡಿ ಎಂದು ಹೊರಟು ನಿಂತರು. ಮಧ್ಯ ಪ್ರವೇಶ ಮಾಡಿದ ಪತ್ರಕರ್ತರೊಬ್ಬರು, ಸದ್ಯಕ್ಕೆ ಮಂತ್ರಿ ಮಂಡಲ ವಿಚಾರ ಮಹತ್ವದ್ದಾಗಿದೆ. ಹಾಗಾಗಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಸೊಪ್ಪು ಹಾಕದ ಸಿಎಂ, ಆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15 ಜಿಆರ್ಜಿಗೆ ವಾರ್ ರೂಂನಿಂದ ಹೊರಟರು. ಈ ವೇಳೆ ಪತ್ರಕರ್ತರು ಕೆಲವು ಪ್ರಶ್ನೆಗಳನ್ನು ಕೇಳಿದರು.
ಇದನ್ನೂ ಓದಿ:ಪೂರ್ಣ ಪ್ರಮಾಣದ ಸಂಪುಟ ರಚನೆಗೊಳ್ಳದ ಹೊರತು, ಸಚಿವರಿಗೆ ಖಾತೆ ಹಂಚಿಕೆಗೆ ಒಪ್ಪದ ಕಾಂಗ್ರೆಸ್ ಹೈಕಮಾಂಡ್