ಕರ್ನಾಟಕ

karnataka

ತಮಿಳುನಾಡಿನ ಬಗ್ಗೆ ಹೇಳಿಕೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

By ETV Bharat Karnataka Team

Published : Mar 20, 2024, 3:46 PM IST

Updated : Mar 20, 2024, 4:18 PM IST

ತಮಿಳುನಾಡಿನ ಮಧುರೈಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

FIR against Union Minister Shobha Karandlaje
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಮಧುರೈ (ತಮಿಳುನಾಡು): ತಮಿಳುನಾಡಿನಿಂದ ಬಂದ ವ್ಯಕ್ತಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ ಎಂಬ ಹೇಳಿಕೆ ಸಂಬಂಧ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈ ಸಿಟಿ ಸೈಬರ್ ಕ್ರೈಂ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಶೋಭಾ ಕರಂದ್ಲಾಜೆ ಮಾರ್ಚ್ 19ರಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತ, ತಮಿಳುನಾಡಿನಿಂದ ವ್ಯಕ್ತಿಯೊಬ್ಬ ತರಬೇತಿ ಪಡೆದು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ ಎಂದು ಆರೋಪಿಸಿದ್ದರು. ಅಲ್ಲದೇ, ಇನ್ನೋರ್ವ ದೆಹಲಿಯಿಂದ ಬಂದು ಪಾಕಿಸ್ತಾನ​ ಪರವಾಗಿ ಘೋಷಣೆ ಕೂಗಿದ್ದಾನೆ. ಮತ್ತೋರ್ವ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ ಎಂದು ಹೇಳಿಕೆ ನೀಡಿದ್ದರು.

ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡು ನಂಟಿನ ಆರೋಪ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ, ತಮಿಳುನಾಡು ಸಿಎಂ ಸ್ಟಾಲಿನ್​ ಸೇರಿ ಅನೇಕ ರಾಜಕೀಯ ನಾಯಕರಿಂದ ವಿರೋಧ, ಖಂಡನೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಶೋಭಾ ಕರಂದ್ಲಾಜೆ ಈಗಾಗಲೇ ತಮಿಳುನಾಡು ಜನತೆಯ ಕ್ಷಮೆ ಕೋರಿದ್ದಾರೆ. 'ನನ್ನ ತಮಿಳು ಸಹೋದರ ಹಾಗೂ ಸಹೋದರಿಯರೇ, ನಾನು ಈ ಘಟನೆ ಬಗ್ಗೆ ಬೆಳಕು ಚೆಲ್ಲಲು ಈ ರೀತಿ ಹೇಳಿಕೆ ನೀಡಿದ್ದೇನೆಯೇ ಹೊರತು, ಬೇರೆ ಯಾವುದೇ ನೆರಳು ಹರಡಿಲ್ಲ. ಆದರೂ ನನ್ನ ಟೀಕೆಗಳಿಂದ ಕೆಲವರಿಗೆ ನೋವು ಉಂಟಾಗಿರುವುದನ್ನು ನಾನು ಗಮನಿಸಿದ್ದೇನೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರನ್ನು ಉದ್ದೇಶಿಸಿ ನಾನು ಮಾತನಾಡಿದ್ದೇನೆ' ಎಂದು ಸಾಮಾಜಿಕ ಜಾಲತಾಣವಾದ 'ಎಕ್ಸ್​'ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಮಧುರೈಯಲ್ಲಿ ಎಫ್‌ಐಆರ್:ಮತ್ತೊಂದೆಡೆ, ಶೋಭಾ ಕರಂದ್ಲಾಜೆ ವಿವಾದಿತ ಹೇಳಿಕೆ ಸಂಬಂಧ ಮಧುರೈ ಜಿಲ್ಲೆಯ ಕಟಾಚನೇಂಡಾಲ್‌ನ ತ್ಯಾಗರಾಜನ್ ಎಂಬುವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಅವರ ಈ ಹೇಳಿಕೆಯು ಕರ್ನಾಟಕ ಮತ್ತು ತಮಿಳುನಾಡಿನ ಜನರ ನಡುವೆ ದ್ವೇಷದ ಭಾವನೆಗಳನ್ನು ಮೂಡಿಸಲು ಪ್ರಯತ್ನಿಸುತ್ತಿದೆ. ಇದು ತಮಿಳುನಾಡಿನ ಜನರನ್ನು ಭಯೋತ್ಪಾದಕರು ಎಂದು ಬಿಂಬಿಸಲು ಮತ್ತು ಎರಡು ಸಮುದಾಯಗಳಾದ ತಮಿಳರು ಮತ್ತು ಕನ್ನಡ ಮಾತನಾಡುವ ಜನರ ನಡುವೆ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ, ಶೋಭಾ ಅವರು ತಮ್ಮ ಹೇಳಿಕೆಯಲ್ಲಿ ಮಾಡಿರುವ ಆರೋಪಗಳು ತಮಿಳು ಸಮುದಾಯದ ವಿರುದ್ಧ ದ್ವೇಷ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಅಂಶಗಳನ್ನು ಹೊಂದಿವೆ. ಅವರ ಹೇಳಿಕೆಯು ಎರಡು ಕಡೆಗಳ ನಡುವಿನ ಉತ್ತಮ ಬಾಂಧವ್ಯವನ್ನು ಹಾಳು ಮಾಡುತ್ತದೆ. ಇದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಲಿದ್ದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ಒತ್ತಾಯಿಸಿದ್ದಾರೆ. ಈ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಕೆಫೆ ಸ್ಫೋಟ ಪ್ರಕರಣ: ತಮಿಳರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಶೋಭಾ ಕರಂದ್ಲಾಜೆ ಕ್ಷಮೆಯಾಚನೆ

Last Updated :Mar 20, 2024, 4:18 PM IST

ABOUT THE AUTHOR

...view details