ಕರ್ನಾಟಕ

karnataka

ಕೆಫೆ ಸ್ಫೋಟ ಪ್ರಕರಣ: ತಮಿಳರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಶೋಭಾ ಕರಂದ್ಲಾಜೆ ಕ್ಷಮೆಯಾಚನೆ

By ETV Bharat Karnataka Team

Published : Mar 20, 2024, 10:09 AM IST

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಕ್ಷಮೆ ಯಾಚಿಸಿದ್ದಾರೆ.

Shobha Karandlaje  TN politicians condemns  Shobha Karandlaje apologizes  controversial statement
ಕೆಫೆ ಸ್ಫೋಟ ಪ್ರಕರಣ: ತಮಿಳರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಶೋಭಾ ಕರಂದ್ಲಾಜೆ ಕ್ಷಮೆಯಾಚನೆ

ಚೆನ್ನೈ/ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಕ್ಷಮೆ ಕೋರಿದ್ದಾರೆ. ತಮ್ಮ ಮಾತುಗಳನ್ನು ಹಿಂಪಡೆದುಕೊಳ್ಳುವುದಾಗಿ ಹೇಳಿದ್ದಾರೆ.

ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು?: ಶೋಭಾ ಕರಂದ್ಲಾಜೆ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ಬಾಂಬ್ ಹಾಕಿ ಹೋಗುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದರು. ''ವ್ಯಕ್ತಿಯೋರ್ವ ತಮಿಳುನಾಡಿನಿಂದ ಬಂದು ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಇಟ್ಟು ತೆರಳಿದ್ದಾನೆ. ಮತ್ತೋರ್ವ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕ್​ ಪರವಾಗಿ ಘೋಷಣೆ ಕೂಗಿದ್ದಾನೆ. ಇನ್ನೋರ್ವ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ" ಎಂದು ಕಿಡಿಕಾರಿದ್ದರು.

ಖಂಡನೆ:ಈ ಹೇಳಿಕೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಭಾರಿ ವಿರೋಧ ವ್ಯಕ್ತವಾಗಿದೆ. ''ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ. ಪ್ರಧಾನಿಯಿಂದ ಹಿಡಿದು ಸಚಿವರವರೆಗೆ ಬಿಜೆಪಿಯ ಎಲ್ಲರೂ ಈ ಕೊಳಕು ವಿಭಜನೆ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಚುನಾವಣೆ ಆಯೋಗ ಈ ದ್ವೇಷದ ಭಾಷಣವನ್ನು ಗಮನಿಸಬೇಕು ಮತ್ತು ತಕ್ಷಣವೇ ಕಠಿಣ ಕ್ರಮವನ್ನು ಪ್ರಾರಂಭಿಸಬೇಕು'' ಎಂದು ಸ್ಟಾಲಿನ್ ಆಗ್ರಹಿಸಿದ್ದಾರೆ. ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವರ ಪರವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಲವು ನೆಟ್ಟಿಗರು ಒತ್ತಾಯಿಸಿದ್ದಾರೆ.

ಎಐಎಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ, ''ಶೋಭಾ ಕರಂದ್ಲಾಜೆ ಅವರ ದ್ವೇಷದ ಭಾಷಣಕ್ಕೆ ನನ್ನ ತೀವ್ರ ಖಂಡನೆ ಇದೆ. ತಮಿಳುನಾಡಿನ ಜನರನ್ನು ಉಗ್ರಗಾಮಿಗಳು ಎಂದು ಬಿಂಬಿಸಲು ಉದ್ದೇಶಿಸಲಾಗಿದೆ. ವಿಭಜಿಸುವ ಉದ್ದೇಶದಿಂದ ಇಂತಹ ದ್ವೇಷದ ಹೇಳಿಕೆಗಳನ್ನು ಎಂದಿಗೂ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚುನಾವಣಾ ಆಯೋಗವನ್ನು ವಿನಂತಿಸುತ್ತೇನೆ" ಎಂದು ಆಗ್ರಹಿಸಿದ್ದಾರೆ.

ಕ್ಷಮೆ ಯಾಚನೆ: ಸಾಮಾಜಿಕ ಜಾಲತಾಣವಾದ ಎಕ್ಸ್​ ಖಾತೆಯಲ್ಲಿ ಸರಣಿ ಟ್ವೀಟ್​ ಮಾಡುವ ಮೂಲಕ ತಮಿಳುನಾಡಿನ ಜನರಲ್ಲಿ ಶೋಭಾ ಕರಂದ್ಲಾಜೆ ಕ್ಷಮೆಯಾಚನೆ ಮಾಡಿದ್ದಾರೆ. ''ನನ್ನ ಹೇಳಿಕೆಯಿಂದ ನೋವಾಗಿದ್ದರೆ, ನನ್ನ ಹೃದಯದ ಆಳದಿಂದ ಕ್ಷಮೆ ಕೋರುತ್ತೇನೆ. ನನ್ನ ಮಾತುಗಳನ್ನು ಹಿಂಪಡೆಯುತ್ತೇನೆ" ಎಂದು ತಿಳಿಸಿದ್ದಾರೆ.

''ನನ್ನ ತಮಿಳು ಸಹೋದರ ಹಾಗೂ ಸಹೋದರಿಯರೇ, ನಾನು ಈ ಘಟನೆ ಬಗ್ಗೆ ಬೆಳಕು ಚೆಲ್ಲಲು ಈ ರೀತಿ ಹೇಳಿಕೆ ನೀಡಿದ್ದೇನೆಯೇ ಹೊರತು, ಕತ್ತಲನ್ನು ಹರಡಲು ಅಲ್ಲ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರನ್ನು ಉದ್ದೇಶಿಸಿ ಮಾತನಾಡಿದ್ದೇನೆ. ಆದರೆ, ನನ್ನ ಟೀಕೆಗಳಿಂದ ಕೆಲವರಿಗೆ ನೋವು ಉಂಟಾಗಿರುವುದನ್ನು ನಾನು ಗಮನಿಸಿದ್ದೇನೆ. ಇದರಿಂದಗಾಗಿ ನಾನು ಕ್ಷಮೆ ಯಾಚಿಸುತ್ತೇನೆ'' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮೈತ್ರಿ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿ: ಅಣ್ಣಾಮಲೈ v/s ಪಳನಿಸ್ವಾಮಿ, ತಮಿಳುನಾಡಿನಲ್ಲಿ ಯಾರಾಗಲಿದ್ದಾರೆ 'ಕಿಂಗ್​'

ABOUT THE AUTHOR

...view details