ಕರ್ನಾಟಕ

karnataka

ದಕ್ಷಿಣ ಕನ್ನಡ ಜಿಲ್ಲೆಯ ಕಾಡಾನೆ ಹಾವಳಿ ತಡೆಗೆ ಕ್ರಮ: ಈಶ್ವರ ಖಂಡ್ರೆ ಭರವಸೆ

By ETV Bharat Karnataka Team

Published : Feb 6, 2024, 8:29 AM IST

ದಕ್ಷಿಣ ಕನ್ನಡ ಜಿಲ್ಲೆಯ ಕಾಡಾನೆ ಹಾವಳಿ ತಡೆಗೆ ಕ್ರಮವಹಿಸುವುದಾಗಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

prevent elephants attacks  Minister Ishwar Khandre  Khandre promises  ಕಾಡಾನೆ ಹಾವಳಿ ತಡೆಗೆ ಕ್ರಮ  ಈಶ್ವರ ಖಂಡ್ರೆ ಭರವಸೆ
ಈಶ್ವರ ಖಂಡ್ರೆ

ಸುಬ್ರಹ್ಮಣ್ಯ, ದಕ್ಷಿಣಕನ್ನಡ:ಜಿಲ್ಲೆಯಲ್ಲಿ ಕಾಡಾನೆ ಮತ್ತು ಕಾಡೆಮ್ಮೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಮತ್ತು ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ.

ಸಾರ್ವಜನಿಕರ ಅಹವಾಲು ಆಲಿಸುತ್ತಿರುವ ಈಶ್ವರ ಖಂಡ್ರೆ

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಮತ್ತು ಸುತ್ತಲಿನ ನಾಲ್ಕು ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 5ನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶ್ಚಿಘಟ್ಟದ ವ್ಯಾಪ್ತಿಯಲ್ಲಿರುವ ಈ ಭಾಗದಲ್ಲಿ ಸಾಕಷ್ಟು ಸಮಸ್ಯೆ ಇದ್ದು, ಕಾನೂನಾತ್ಮಕವಾಗಿ ಮತ್ತು ಕಾಯಿದೆಯ ಮಿತಿಯಲ್ಲಿ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದರು.

ರೈತರಿಂದ ಈಶ್ವರ ಖಂಡ್ರೆಗೆ ಉಡುಗೊರೆ

ಕಾಡಾನೆ ಹಾವಳಿ ತಡೆಗೆ ಕಂದಕ ನಿರ್ಮಾಣ, ಸೌರ ಬೇಲಿ ಅಳವಡಿಕೆ ಮತ್ತು ರೈಲ್ವೆ ಬ್ಯಾರಿಕೇಡ್ ಹಾಕುವ ಕಾರ್ಯ ಆಗುತ್ತಿದೆ. ಆದರೆ, ರಾಜ್ಯ ಆನೆಗಳ ಸಂಖ್ಯೆಯಲ್ಲಿ ನಂ.1 ಆಗಿದ್ದು, 6395 ಆನೆಗಳಿವೆ. ಆದರೆ, ಅರಣ್ಯ ಪ್ರದೇಶ ಕ್ಷೀಣಿಸುತ್ತಿದೆ. ಹೀಗಾಗಿ ಸಮಸ್ಯೆ ಉಲ್ಬಣವಾಗುತ್ತಿದೆ. ನಮ್ಮ ಇತಿಮಿತಿಯಲ್ಲಿ ಸಮಸ್ಯೆ ಪರಿಹರಿಸಲು ಶ್ರಮಿಸಲಾಗುವುದು. ಕಾಡಿನಿಂದ ನಾಡಿಗೆ ಆನೆ ಬಾರದಂತೆ ಕಾಡಿನಲ್ಲಿನ ಜಲ ಮೂಲಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಕಾಡ್ಗಿಚ್ಚು ಬಗ್ಗೆ ಚರ್ಚೆ

ಇಂದು ತಮ್ಮ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ನಡೆಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಇದ್ದ ಈ ಭಾಗದ ರಸ್ತೆಯ ಅಭಿವೃದ್ಧಿ ಕುರಿತಂತೆ ಚರ್ಚಿಸಿ ಪರಿಹಾರ ಒದಗಿಸಲು ಪ್ರಯತ್ನಿಸುತ್ತೇವೆ. ಅರಣ್ಯ ಸಂರಕ್ಷಣಾ ಕಾಯಿದೆ 1978 ಜಾರಿಗೆ ಬರುವ ಮೊದಲು ಸಾಗುವಳಿ ಮಾಡುತ್ತಿದ್ದ 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರಿಗೆ ಮತ್ತು ಸಣ್ಣ ಮನೆಗಳನ್ನು ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದಂತೆ ಸೂಚನೆ ನೀಡಲಾಗಿದೆ ಎಂದರು.

ಸ್ಥಳೀಯರು ಮಾತನಾಡಿ, ಸುಬ್ರಹ್ಮಣ್ಯದಲ್ಲಿರುವ ಅರಣ್ಯ ಅತಿಥಿಗೃಹವನ್ನು ಅಭಿವೃದ್ಧಿ ಪಡಿಸುವಂತೆ ಮತ್ತು ಚಾರಣ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದರೆ ಸ್ಥಳೀಯರ ಆರ್ಥಿಕ ಸ್ಥಿತಿ ಸುಧಾರಣೆ ಆಗುತ್ತದೆ ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ತಾವು ಕುಮಾರ ಪರ್ವತ ಚಾರಣ ಪಥಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಜನರು ಬಂದು ಅರಣ್ಯ, ಪರಿಸರ ಹಾಳಾಗದಂತೆ ಎಚ್ಚರ ವಹಿಸಲಾಗುವುದು. ಆನ್​ಲೈನ್ ಬುಕ್ಕಿಂಗ್ ಸೇರಿದಂತೆ ಸಮಗ್ರ ಯೋಜನೆ ರೂಪಿಸಿ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲಾಗುವುದು. ಸ್ಥಳೀಯರ ಆರ್ಥಿಕ ಪ್ರಗತಿಗೂ ಶ್ರಮಿಸಲಾಗುವುದು ಎಂದರು.

ಅಧಿಕಾರಿಗಳಿಗೆ ಸೂಚನೆ

ಏಕ ಬಳಕೆ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಮಾರಕವಾಗಿದ್ದು, ಜನರು ತಮ್ಮ ಗ್ರಾಮ ಸ್ವಚ್ಛವಾಗಿಟ್ಟುಕೊಳ್ಳಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಸುಂದರ ಭೂಮಿಯನ್ನು ಮುಂದಿನ ಪೀಳಿಗೆಗೆ ನೀಡಲು ಏಕ ಬಳಕೆ ಪ್ಲಾಸ್ಟಿಕ್ ತ್ಯಜಿಸಬೇಕು. ಸ್ಥಳೀಯರು ಸಲ್ಲಿಸಿರುವ ಎಲ್ಲ ಅಹವಾಲುಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾನೂನಿನ ಇತಿಮಿತಿಯಲ್ಲಿ ಅದನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವ ಭರವಸೆ ನೀಡಿದರು.

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿ ಮೆರೆಯಬೇಕು. ನಾವೆಲ್ಲರೂ ಸೋದರರಂತೆ ಬಾಳಬೇಕು. ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವವರ ಬಗ್ಗೆ ಎಚ್ಚರದಿಂದ ಇರಬೇಕು. ಮಾಧ್ಯಮದವರು ಸುದ್ದಿ ತಲುಪಿಸುವ ಕೆಲಸ ಮಾಡುತ್ತಾರೆ. ಪತ್ರಿಕಾಂಗವು ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ನಂತರದ ಸ್ಥಾನ ಪಡೆದಿದೆ. ಇಲ್ಲಿನ ಪತ್ರಕರ್ತರ ಸಂಘಟನೆಗಳು ನಾಲ್ಕು ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಐದನೇ ಗ್ರಾಮ ವಾಸ್ತವ್ಯ ನಡೆಸುವ ಮೂಲಕ ಸ್ಥಳೀಯರ ಸಮಸ್ಯೆ ಪರಿಹರಿಸಲು ಪ್ರಯತ್ನಿಸಿದ್ದಾರೆ. ಇದಕ್ಕಾಗಿ ಅಭಿನಂದಿಸುತ್ತೇನೆ ಎಂದರು.

ಕಾಳ್ಗಿಚ್ಚು ನಿಗ್ರಹಕ್ಕೆ ಕಟ್ಟೆಚ್ಚರ ವಹಿಸಲು ಸೂಚನೆ:ಮುಂಬರುವ ಬೇಸಿಗೆಯಲ್ಲಿ ರಾಜ್ಯದ ಯಾವುದೇ ಕಾಡಿನಲ್ಲಿ ಕಾಳ್ಗಿಚ್ಚಿನಿಂದ ಹಾನಿ ಆಗದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಕಟ್ಟೆಚ್ಚರ ವಹಿಸುವಂತೆ ಸಚಿವರು ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸುಬ್ರಹ್ಮಣ್ಯದಲ್ಲಿ ಕಾಳ್ಗಿಚ್ಚು ನಂದಿಸುವ ಅಣಕು ಕಾರ್ಯಾಚರಣೆ ವೀಕ್ಷಿಸಿ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.

ಈ ಬಾರಿ ರಾಜ್ಯದಲ್ಲಿ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಇದ್ದು, ಕಾಳ್ಗಿಚ್ಚಿನ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಸತತ ನಿಗಾ ಇಟ್ಟು ಯಾವುದೇ ಅಗ್ನಿ ದುರಂತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದರು. ಇದಕ್ಕೂ ಮುನ್ನ ಸಚಿವರು ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಭೇಟಿ ನೀಡಿ, ಅರಣ್ಯ ಸಂರಕ್ಷಣೆ ಕುರಿತ ಬೀದಿ ನಾಟಕವನ್ನು ವೀಕ್ಷಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಋತುಮಾನಗಳೇ ಬದಲಾಗಿದೆ. ಕಾಡು ಉಳಿದರೆ ಮಾತ್ರ ನಾಡು ಉಳಿಯಲು ಸಾಧ್ಯ. ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಯುವಜನರು ಪಶು, ಪಕ್ಷಿಗಳೊಂದಿಗೆ ಸಹಬಾಳ್ವೆ ನಡೆಸುವುದನ್ನು ಕಲಿಯಬೇಕು. ಪ್ರಕೃತಿ, ಪರಿಸರ ಉಳಿಸಬೇಕು ಎಂದು ಅವರು ಹೇಳಿದರು.

ಪ್ಲಾಸ್ಟಿಕ್​ ಆರೋಗ್ಯಕ್ಕೆ ಮಾರಕ: ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕಾಗಿದೆ ಎಂದು ಸಚಿವರು ತಿಳಿಸಿದರು.

ಅವರು ಧರ್ಮಸ್ಥಳದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ಮರು ಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗುತ್ತಿದ್ದು, ತ್ಯಾಜ್ಯಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದಿಲ್ಲ ಎಂದರು.

ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನದಲ್ಲಿ ಏರಿಕೆ ಆಗುತ್ತಿದೆ. ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆ ದೋರುತ್ತಿವೆ. ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು. ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ. ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಅವರು ಹೇಳಿದರು.

ಪಾದಯಾತ್ರೆ ವೇಳೆ ಪ್ಲಾಸ್ಟಿಕ್ ನಿಷೇಧ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ, ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ, ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ. ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ ಎಂದು ತಿಳಿಸಿದರು. ಜನರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಕರೆ ನೀಡಿದರು.

ಓದಿ:ಗೂಗಲ್ ಮ್ಯಾಪ್ ಸಹಾಯದಿಂದ ಕಳ್ಳನನ್ನು ಪತ್ತೆ ಹಚ್ಚಿದ ಇಬ್ಬರು ಯುವಕರು

ABOUT THE AUTHOR

...view details